ನಾರಾಯಣಗುರುಗಳು ಶಾಂತಿ ಸಂದೇಶ ನೀಡಿದ ದಾರ್ಶನಿಕ: ಕೋಟ ಶ್ರೀನಿವಾಸ ಪೂಜಾರಿ

Update: 2018-08-27 15:17 GMT

ಕಟಪಾಡಿ, ಆ.27: ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದ ಎಲ್ಲಾ ವರ್ಗಗಳನ್ನು ಒಟ್ಟುಗೂಡಿಸಿ ಶಾಂತಿ ಸಂದೇಶ ನೀಡಿದ ಜಗತ್ತಿನ ಪ್ರಥಮ ದಾರ್ಶನಿಕ ಎಂದು ರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸೋಮವಾರ ಕಟಪಾಡಿ ಶ್ರೀವಿಶ್ವನಾಥ ಕ್ಷೇತ್ರದ ಜಿಲ್ಲಾ ಬಿಲ್ಲವ ಸಮುದಾಯ ಭವನದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ನಾರಾಯಣಗುರುಗಳು ಒಂದೇ ಜಾತಿ, ಒಂದೆ ಮತ, ಒಂದೇ ದೇವರು ಎಂಬ ಸಂದೇಶ ನೀಡಿದ್ದು, ಇವರ ಆಶ್ರಮಕ್ಕೆ ಭೇಟಿ ನೀಡಿದ್ದ ಮಹಾತ್ಮ ಗಾಂಧೀ ಅಲ್ಲಿನ ಪರಿಸರ ಕಂಡು ಪ್ರಭಾವಿತರಾಗಿದ್ದರು. ನಾರಾಯಣಗುರುಗಳ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಶಿಕ್ಷಣದಿಂದ ಉನ್ನತಿ ಪಡೆಯ ಬೇಕು ಹಾಗೂ ಸಂಘಟನೆಯಿಂದ ಶಕ್ತಿ ಪಡೆಯಬೇಕೆಂಬ ಅವರ ಸಂದೇಶ ಎಲ್ಲಾ ಕಾಲಕ್ಕೂ ಪ್ರಸ್ತುತ ಎಂದು ಅವರು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಮಾತನಾಡಿ, ವೌಢ್ಯ ತುಂಬಿದ್ದ ಸಮಾಜದಲ್ಲಿ ಆಧ್ಯಾತ್ಮಿಕ ಹಾಗೂ ಸಾಮಾಜಿಕ ಚಳುವಳಿಯ ಮೂಲಕ ಅನಿಷ್ಠ ಪದ್ದತಿಗಳನ್ನು ಕೊನೆಗಾಣಿಸಿದ ನಾರಾಯಣಗುರುಗಳ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶಿಯಾಗಬೇಕು ಎಂದು ಹೇಳಿದರು.

ನಾರಾಯಣಗುರುಗಳ ತತ್ವ, ಆದರ್ಶದ ಕುರಿತು ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಮುಕ್ತ ವಿವಿಯ ಉಡುಪಿ ಪ್ರಾದೇಶಿಕ ನಿರ್ದೇಶಕ ಡಾ.ಕೆ.ಪಿ.ಮಹಾಲಿಂಗು ಬ್ರಹ್ಮಶ್ರೀ ನಾರಾಯಣ ಗುರು ಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಂಸದೆ ಶೋಭಾ ಕರಂದ್ಲಾಜೆ, ಜಿಪಂ ಸದಸ್ಯರಾದ ಜನಾದರ್ನ ತೋನ್ಸೆ, ಗೀತಾಂಜಲಿ ಸುವರ್ಣ, ಶಿಲ್ಪಾ ಸುವರ್ಣ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಹೆಚ್ಚುವರಿ ಎಸ್ಪಿಕುಮಾರಚಂದ್ರ, ಕಟಪಾಡಿ ಶ್ರೀವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಅಶೋಕ್ ಎಂ.ಸುವರ್ಣ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ತಾಂತ್ರಿಕ ಮೇಲ್ವಿಚಾರಕಿ ಪೂರ್ಣಿಮಾ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News