ಮಹಿಳಾ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಗೆ ಕ್ರಮ: ಶಾಸಕಿ ಕನೀಝ್ ಫಾತಿಮಾ

Update: 2018-09-03 13:13 GMT

ಬೆಂಗಳೂರು, ಸೆ.3: ರಾಜ್ಯ ಸರಕಾರವು ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಮಿತಿಯ ಸದಸ್ಯೆಯನ್ನಾಗಿ ನನ್ನನ್ನು ನೇಮಕ ಮಾಡಿದ್ದು, ಮಹಿಳೆಯರು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಗೆ ಕ್ರಮ ವಹಿಸುವುದಾಗಿ ಗುಲ್ಬರ್ಗ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕಿ ಕನೀಝ್ ಫಾತಿಮಾ ಹೇಳಿದರು.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರು ಹಾಗೂ ಮಕ್ಕಳ ಅಭಿವೃದ್ಧಿಗೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಅವರಿಗೆ ತಲುಪಿಸುವುದು, ಅವರ ಆರೋಗ್ಯ, ಶಿಕ್ಷಣದ ಪ್ರಗತಿಗೆ ಶ್ರಮಿಸುವುದಾಗಿ ಹೇಳಿದರು.

ನನ್ನ ಪತಿ ಮಾಜಿ ಸಚಿವ ಖಮರುಲ್ ಇಸ್ಲಾಮ್ ಅವರ ರಾಜಕೀಯ ಹೋರಾಟವನ್ನು ಸುಮಾರು 35 ವರ್ಷಗಳ ಕಾಲ ಬಹಳ ಹತ್ತಿರದಿಂದ ನೋಡಿದ್ದೇನೆ. ಅವರ ನಿಧನದಿಂದ ಕಾಂಗ್ರೆಸ್ ಹೈಕಮಾಂಡ್ ನನ್ನನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿತ್ತು. ಈ ಬಾರಿ ನಡೆದ ವಿಧಾನಸಭಾ ಚುನಾವಣೆಯೂ ನನ್ನ ಪಾಲಿಗೆ ಅತ್ಯಂತ ಮಹತ್ವದ್ದಾಗಿತ್ತು ಎಂದು ಅವರು ತಿಳಿಸಿದರು.

ನನ್ನ ಮತಕ್ಷೇತ್ರದಲ್ಲಿ ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ 4 ಕೋಟಿ ರೂ.ಗಳ ಕಾಮಗಾರಿಗಳನ್ನು ಆರಂಭಿಸುವ ಮೂಲಕ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಿದ್ದೇನೆ. ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಆದ್ಯತೆ ನೀಡಲಾಗಿದೆ ಎಂದು ಕನೀಝ್ ಫಾತಿಮಾ ಹೇಳಿದರು. 1988ರಲ್ಲಿ ಖಮರುಲ್ ಇಸ್ಲಾಮ್ ಶಾಸಕರಾಗಿದ್ದಾಗ ಬೆಣ್ಣೆತೋರದಿಂದ ಪೈಪ್‌ಲೈನ್ ಮೂಲಕ ಗುಲ್ಬರ್ಗ ನಗರಕ್ಕೆ ಕುಡಿಯುವ ನೀರು ಪೂರೈಸಿದ್ದರು. ಈ ಪೈಪ್‌ಗಳಲ್ಲಿ ನೀರಿನ ಸೋರಿಕೆಯಾಗುತ್ತಿದ್ದು, ಅದನ್ನು ತಡೆಯಲು 17-18 ಕೋಟಿ ರೂ.ಗಳ ಯೋಜನೆ ಸಿದ್ಧಪಡಿಸಲಾಗಿದೆ ಎಂದು ಕನೀಝ್ ಫಾತಿಮಾ ಹೇಳಿದರು.

ಒಳಚರಂಡಿ ವ್ಯವಸ್ಥೆಗಾಗಿ ಮೀಸಲಿಟ್ಟಿದ್ದ 12.36 ಕೋಟಿ ರೂ.ಗಳನ್ನು ಕುಡಿಯುವ ನೀರಿನ ಈ ಯೋಜನೆಗೆ ಬಳಸಲಾಗುವುದು. ಉಳಿದ ಹಣವನ್ನು ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಒದಗಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು.

ರಾಜ್ಯ ಸರಕಾರ ಇತ್ತೀಚೆಗಷ್ಟೇ 100 ದಿನ ಪೂರೈಸಿದೆ. ಇದರಲ್ಲಿ ಎರಡು ತಿಂಗಳು ವಿಧಾನಪರಿಷತ್, ಸ್ಥಳೀಯ ಸಂಸ್ಥೆಗಳ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿತ್ತು. ಅಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಲ್ಲೂ ವಿಳಂಬವಾಗಿದ್ದರಿಂದ ಅಭಿವೃದ್ಧಿ ಕಾರ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕೈಗೆತ್ತಿಕೊಳ್ಳಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲಾಗುವುದು ಎಂದು ಕನೀಝ್ ಫಾತಿಮಾ ಹೇಳಿದರು.

ಗುಲ್ಬರ್ಗದಲ್ಲಿ ಹಜ್‌ ಭವನ ನಿರ್ಮಾಣ ಮಾಡಲು 5 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಆದಷ್ಟು ಶೀಘ್ರದಲ್ಲಿ ಹಜ್‌ ಭವನ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವಂತೆ ಕೋರಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಝಮೀರ್‌ ಅಹ್ಮದ್‌ ಖಾನ್‌ಗೆ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು. ಹಜ್‌ ಭವನ ವರ್ಷದ ಎಲ್ಲ ದಿನಗಳಲ್ಲಿ ಸಕ್ರಿಯವಾಗಿ ಚಟುವಟಿಕೆಗಳಿಂದ ಕೂಡಿರಬೇಕು ಎಂಬುದು ನಮ್ಮ ಬಯಕೆ. ಆದುದರಿಂದ, ಹಜ್ ಯಾತ್ರೆಯ ಸಂದರ್ಭ ಹೊರತುಪಡಿಸಿ ಬೇರೆ ಸಮಯದಲ್ಲಿ ಕೌಶಲ್ಯಾಭಿವೃದ್ಧಿ, ಐಎಎಸ್, ಕೆಎಎಸ್ ತರಬೇತಿ ಕೇಂದ್ರವನ್ನು ಈ ಭವನದಲ್ಲಿ ಆರಂಭಿಸುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಕನೀಝ್ ಫಾತಿಮಾ ಹೇಳಿದರು.

ಗುಲ್ಬರ್ಗ ನಗರವು ಶೈಕ್ಷಣಿಕ ನಗರವಾಗಿ ಅಭಿವೃದ್ಧಿ ಹೊಂದಿರುವುದರಿಂದ ನಮ್ಮ ಭಾಗಕ್ಕೆ ಬಿಇಡಿ, ಡಿಇಡಿ, ಪಿಯುಸಿ ಕಾಲೇಜು, ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತ ವಸತಿ ಶಾಲೆ ಜೊತೆಗೆ ಬಿಸಿಎಂ ವಸತಿ ನಿಲಯಗಳನ್ನು ಮಂಜೂರು ಮಾಡಿಕೊಡುವಂತೆ ಸಂಬಂಧಪಟ್ಟ ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News