ಮೋಹನ್ ಲಾಲ್ ರನ್ನು ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲು ಬಿಜೆಪಿ ಯತ್ನ

Update: 2018-09-04 08:45 GMT

ತಿರುವನಂತಪುರ, ಸೆ.4: ಕೇರಳದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಿರುವನಂತಪುರ ಕ್ಷೇತ್ರದಿಂದ ಖ್ಯಾತ ಮಲಯಾಳಂ ನಟ ಮೋಹನ್ ಲಾಲ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಪ್ರಯತ್ನ ನಡೆಸಿದೆ.

ಸೋಮವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಮೋಹನ್ ಲಾಲ್  ಭೇಟಿಯಾದ ಬೆನ್ನಲ್ಲೇ ಅವರು ಬಿಜೆಪಿ ಸೇರಲಿದ್ದಾರೆಂಬ ಸುದ್ದಿ ಹರಿದಾರತೊಡಗಿದೆ. ಮೋಹನ್‌ಲಾಲ್‌ ತಮ್ಮ ತಂದೆ ವಿಶ್ವನಾಥನ್‌ ನಾಯರ್‌ ಮತ್ತು ತಾಯಿ ಶಾಂತಾಕುಮಾರಿ ಅವರ ಸ್ಮರಣಾರ್ಥ ವಿಶ್ವಶಾಂತಿ ಫೌಂಡೇಷನ್‌ ವತಿಯಿಂದ  ವಯನಾಡ್ ನಲ್ಲಿ ಕ್ಯಾನ್ಸರ್‌ ಚಿಕಿತ್ಸಾ ಸಂಸ್ಥೆ ನಿರ್ಮಿಸಿದ್ದಾರೆ. ಇದರ ಉದ್ಘಾಟನೆಗೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲು ಮೋಹನ್ ಲಾಲ್ ಹೊಸದಿಲ್ಲಿಗೆ ತೆರಳಿದ್ದರು.

ಮೋಹನ್ ಲಾಲ್ ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ. ಅವರನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಕಾಂಗ್ರೆಸ್ ನ ಶಶಿ ತರೂರು ವಿರುದ್ಧ ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ . ಆದರೆ ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಮೋಹನ್ ಲಾಲ್  ಈ ವರೆಗೆ ಏನನ್ನು ಹೇಳಿಲ್ಲ ಎಂದು ತಿಳಿದು ಬಂದಿದೆ.

ಮಳೆ ಮತ್ತು ಪ್ರವಾಹದಿಂದ ತತ್ತರಿಸಿರುವ ಕೇರಳಕ್ಕೆ ಹೆಚ್ಚಿನ ನೆರವು ನೀಡುವಂತೆ   ಪ್ರಧಾನ ಮಂತ್ರಿ ಅವರನ್ನು ಮೋಹನ್ ಲಾಲ್ ವಿನಂತಿಸಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News