ತನಿಖೆಯಲ್ಲಿ ಪೊಲೀಸ್ ಅಧಿಕಾರಿಗಳು ಯಶಸ್ಸು: ಸಿಎಂ ಕುಮಾರಸ್ವಾಮಿ

Update: 2018-09-07 16:25 GMT

ಮಂಗಳೂರು, ಸೆ.7: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಯಶಸ್ಸು ಕಂಡಿದ್ದು, ಅವರು ಅಭಿನಂದನಾರ್ಹರು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ದ.ಕ.ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ದ.ಕ.ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ಹಿರಿಯ ಅಧಿಕಾರಿಗಳ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಗೌರಿ ಹತ್ಯೆಯಾಗಿ ಒಂದು ವರ್ಷವಾಗಿದೆ. ತನಿಖೆಯ ನೇತೃತ್ವ ವಹಿಸಿದ ಪೊಲೀಸ್ ಅಧಿಕಾರಿಗಳ ತಂಡವು ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದ ಮುಖ್ಯಮಂತ್ರಿ ಕುಮಾರಸ್ವಾಮಿ ಸಂಶೋಧಕ ಡಾ.ಎಂ.ಎಂ.ಕಲಬುರಗಿ ಹತ್ಯೆ ಪ್ರಕರಣವನ್ನೂ ಕೂಡಾ ಪೊಲೀಸ್ ಇಲಾಖೆಯು ಗಂಭೀರವಾಗಿ ಪರಿಗಣಿಸಿ ತನಿಖೆ ಮುಂದುವರಿಸಲಿದೆ ಎಂದರು.

ಕೆಲವು ಶಕ್ತಿಗಳು ಮತ ಗಳಿಸಲು ಸಾರ್ವಜನಿಕವಾಗಿ ನಡೆದುಕೊಳ್ಳುವ ನಡಾವಳಿಗಳು ಇಂದು ಎಲ್ಲೆಡೆ ಭಾರೀ ಚರ್ಚೆಯಾಗುತ್ತಿವೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಶಾಂತಿ ಕಾಪಾಡುವ ದೃಷ್ಟಿಯಿಂದ ಮತ್ತು ನಾಗರಿಕರ ಜೀವ ಹಾನಿಯಾಗದಂತೆ ಮೈತ್ರಿ ಸರಕಾರ ಕಠಿಣ ಜರುಗಿಸಲಿದೆ ಎಂದು ಕುಮಾರಸ್ವಾಮಿ ಹೇಳಿದರು.

ದ.ಕ.ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಸುರಿದ ಮಳೆಯಿಂದ ಭಾರೀ ಹಾನಿಯಾಗಿದೆ. ಈ ಬಗ್ಗೆ ಅಧಿಕಾರಿಗಳ ಮಟ್ಟದ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಗಿದೆ. ಈ ಸಂದರ್ಭ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಸಹಿತ ಜಿಲ್ಲಾಧಿಕಾರಿ ಮತ್ತಿತರರು ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಮಳೆಯಿಂದ ಜಿಲ್ಲೆಯಲ್ಲಿ ಸುಮಾರು 213 ಕೋ.ರೂ. ಹಾನಿಯಾಗಿದ್ದು, ಎನ್‌ಡಿಆರ್‌ಎಫ್ ಮಾರ್ಗಸೂಚಿ ಬದಿಗಿಟ್ಟು ಸರಕಾರ ಹೆಚ್ಚುವರಿ ಪರಿಹಾರ ನೀಡಿದೆ ಎಂದರು.

ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಅಡಿಕೆಗೆ ಕೊಳೆ ರೋಗ ಹಾಗೂ ಹಳದಿ ರೋಗ ತಗುಲಿದೆ. ಈ ಬಗ್ಗೆ ಸಂಸದರು, ಶಾಸಕರು ಕೂಡಾ ಗಮನ ಸೆಳೆದಿದ್ದಾರೆ. ಆ ಹಿನ್ನಲೆಯಲ್ಲಿ ಸಂಕಷ್ಟಕ್ಕೀಡಾದ ರೈತರಿಗೆ ಗರಿಷ್ಠ ಮಟ್ಟದ ಪರಿಹಾರ ನೀಡಲು ಸರಕಾರ ಮುಂದಾಗಲಿದೆ ಎಂದು ಕುಮಾರಸ್ವಾಮಿ ನುಡಿದರು.

ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತ ಕುಟುಂಬದ ಬಗ್ಗೆ ಸಮಗ್ರ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಅಲ್ಲದೆ ಡ್ರಗ್ಸ್ ಹಾವಳಿಯ ವಿರುದ್ಧ ಕಠಿಣ ಕ್ರಮಕ್ಕೂ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಶಾಂತಿ ಕಾಪಾಡುವುದು ಮುಖ್ಯವಾಗಿದೆ. ಮೈತ್ರಿ ಸರಕಾರವು ಜಿಲ್ಲೆಯ ಅಭಿವೃದ್ಧಿಗೆ ಹೆಚ್ವಿನ ಪ್ರಾಮುಖ್ಯತೆ ನೀಡುತ್ತಿದೆ ಎಂದ ಮುಖ್ಯಮಂತ್ರಿ ಕುಮಾರಸ್ವಾಮಿ ಕಡಲ್ಕೊರತಕ್ಕೆ ಸಂಬಂಧಿಸಿದಂತೆ ಶಾಶ್ವತ ಪರಿಹಾರಕ್ಕೆ ಕೈಗೊಳ್ಳಲು ಯೋಜನೆ ರೂಪಿಸಲಿದೆ ಎಂದರು.

ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿ ಅಕ್ರಮ ಎಸಗಿದವರೊಂದಿಗೆ ನಾನು ಯಾವತ್ತೂ ರಾಜಿಯಾಗಲ್ಲ. ಮೊದಲು ಜನರ ಸಮಸ್ಯೆಗೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ಬಳಿಕ ನಂತರ ಯೋಜನೆಗಳ ವಿಚಾರದಲ್ಲಿ ಅಕ್ರಮ ಎಸಗಿದವರ ವಿರುದ್ಧ ಕ್ರಮಕೈಗೊಳ್ಳುತ್ತೇನೆ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರೈತರ ಸಾಲ ಮನ್ನಾ ವಿಚಾರದಲ್ಲಿ ಕೂಡಾ ಬಿಜೆಪಿಗೆ ಸ್ಪಷ್ಟ ನಿಲುವು ಇಲ್ಲ. ಪೆಟ್ರೋಲ್ ದರ ಏರಿಕೆಯಾಗುತ್ತಿದ್ದರೂ ಕೂಡಾ ಬಿಜೆಪಿ ಮೌನವಾಗಿದೆ. ಆದಾಗ್ಯೂ ಪೆಟ್ರೋಲ್ ದರ ಕಡಿಮೆ ಮಾಡುವ ವಿಷಯಕ್ಕೆ ಸಂಬಂಧಿಸಿ ಆರ್ಥಿಕ ಇಲಾಖೆಯೊಂದಿಗೆ ಚರ್ಚೆ ಮಾಡುತ್ತೇನೆ ಎಂದರು.

ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಬೋಜೇಗೌಡ, ಬಿ.ಎಂ. ಫಾರೂಕ್, ಹರೀಶ್ ಕುಮಾರ್, ಮೇಯರ್ ಭಾಸ್ಕರ ಮೊಯ್ಲಿ, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್, ಎಸ್ಪಿ ರವಿಕಾಂತೇ ಗೌಡ ಉಪಸ್ಥಿತರಿದ್ದರು.

ಊಹಾಪೋಹ ಬೇಡ: ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದಾರೆ. ದ.ಕ.ಜಿಲ್ಲೆಗೆ ಸಂಬಂಧಿಸಿದಂತೆ ನಾನು ಅವರೊಂದಿಗೆ ಪೂರಕ ಮಾಹಿತಿ ಪಡೆದುಕೊಂಡು ಬಂದಿದ್ದೇನೆ. ಅವರ ಅನುಪಸ್ಥಿಯ ಬಗ್ಗೆ ಉಹಾಪೋಹ ಬೇಡ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News