ಉಡುಪಿ ಜಿಲ್ಲಾದ್ಯಂತ ಮೊಂತಿ ಫೆಸ್ಟ್ ಸಂಭ್ರಮಾಚರಣೆ

Update: 2018-09-08 04:30 GMT

ಉಡುಪಿ, ಸೆ.8: ಕನ್ಯಾ ಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ಟ್ ಅನ್ನು ಉಡುಪಿ ಜಿಲ್ಲಾದ್ಯಂತ ಇಂದು ಕ್ರೆಸ್ತ ಸಮುದಾಯದ ಜನರು ಭಕ್ತಿಭಾವದಿಂದ ಆಚರಿಸಿದರು. 

ಪುಟ್ಟ ಮಕ್ಕಳು ಕನ್ಯಾ ಮರಿಯಮ್ಮನವರ ಮೂರ್ತಿಗೆ ಹೂಗಳನ್ನು ಸಮರ್ಪಿಸಿದ ಬಳಿಕ ಜಿಲ್ಲೆಯ ಎಲ್ಲ ಚರ್ಚುಗಳಲ್ಲಿ ಧರ್ಮಗುರುಗಳು ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಭತ್ತದ ತೆನೆಯನ್ನು ಆಶೀರ್ವವದಿಸಿದರು. ಬಳಿಕ ಅವುಗಳನ್ನು ಮೆರವಣಿಗೆಯಲ್ಲಿ ಚರ್ಚಿನ ಒಳಗೆ ಕೊಂಡೊಯ್ದು ಪವಿತ್ರ ಬಲಿಪೂಜೆಯಲ್ಲಿ ಪಾಲ್ಗೊಂಡರು. ಪವಿತ್ರ ಬಲಿಪೂಜೆಯಲ್ಲಿ ಧರ್ಮಗುರುಗುಳು ಕುಟುಂಬ ಜೀವನ ಹಾಗೂ ಸಮಾಜದಲ್ಲಿ ಮಹಿಳೆಯ ಸ್ಥಾನಮಾನದ ಕುರಿತು ಪ್ರವಚನ ನೀಡಿದರು. 

ಉಡುಪಿ ಕ್ರೆಸ್ತ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತಿ ವಂದನೀಯ ಜೆರಾಲ್ಡ್ ಐಸಾಕ್ ಲೋಬೊ  ಅವರು ಶಂಕರಪುರದ ಸಂತ ಜೋನರ ಚರ್ಚಿನಲ್ಲಿ ಹಬ್ಬದ ಬಲಿಪೂಜೆ ಅರ್ಪಿಸಿ ಹೊಸ ತೆನೆಗಳನ್ನು ಆಶೀರ್ವದಿಸಿ ಹಬ್ಬದ ಸಂದೇಶ ನೀಡಿದರು.

ಉಡುಪಿಯ ಶೋಕ ಮಾತಾ ಇಗರ್ಜಿಯಲ್ಲಿ ಜರುಗಿದ ಧಾರ್ಮಿಕ ಕಾರ್ಯಕ್ರಮದಲ್ಲಿ ಚರ್ಚಿನ ಪ್ರಧಾನ ಧರ್ಮಗುರು ವಂ.ವಲೇರಿಯನ್ ಮೆಂಡೊನ್ಸಾ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News