ದೇಶದಲ್ಲಿ ಹೃದಯಾಘಾತ ಪ್ರಮಾಣ ಹೆಚ್ಚಳ ಕಳವಳಕಾರಿ: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2018-09-08 13:18 GMT

ಬೆಂಗಳೂರು, ಸೆ.8: ದೇಶದಲ್ಲಿ ಹೃದಯಾಘಾತ ಹಾಗೂ ಹೃದಯ ಸಂಬಂಧಿ ಕಾಯಿಲೆಗಳ ಪ್ರಮಾಣ ಹೆಚ್ಚಳವಾಗುತ್ತಿರುವುದು ಕಳವಳಕಾರಿ ಸಂಗತಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಶನಿವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಲಾಗಿದ್ದ ಭಾರತೀಯ ಹೃದಯ ಮತ್ತು ಎದೆಗೂಡಿನ ಶಸ್ತ್ರಚಿಕಿತ್ಸಕರ ಎರಡು ದಿನಗಳ ಮೂರನೆ ವಾರ್ಷಿಕ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹೃದಯ ಸಂಬಂಧಿ ರೋಗಗಳು ಭಾರತದಲ್ಲಿ ಹೆಚ್ಚಾಗುತ್ತಿರುವುದನ್ನು ಇತ್ತೀಚಿನ ದಿನಗಳಲ್ಲಿ ನಡೆದಿರುವ ಅಧ್ಯಯನಗಳು ಸ್ಪಷ್ಟಪಡಿಸಿವೆ. 1960ರಲ್ಲಿ ಶೇ.2ರಷ್ಟಿದ್ದ ಈ ಪ್ರಮಾಣವು ಇವತ್ತು ಶೇ.12ಕ್ಕೆ ಹೆಚ್ಚಳವಾಗಿದೆ. 2020ರ ವೇಳೆಗೆ ಹೃದಯಾಘಾತ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳು ಭಾರತದಲ್ಲೆ ಹೆಚ್ಚಾಗಿ ಕಾಣಿಸಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

40 ವರ್ಷದೊಳಗಿನ ವಯೋಮಾನದವರಲ್ಲಿ ಹೃದಯಾಘಾತ ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಆತಂಕದ ವಿಷಯವಾಗಿದೆ. ಆಧುನಿಕ ಜೀವನ ಶೈಲಿಯಿಂದಾಗಿ ಹೆಚ್ಚಿನ ಪ್ರಮಾಣದ ಜನರಲ್ಲಿ ಮಧುಮೇಹ ಹಾಗೂ ಮಾನಸಿಕ ಒತ್ತಡ ಹೆಚ್ಚಾಗುತ್ತಿದೆ. ಈ ಬೆಳವಣಿಗೆಯು ಹೃದಯಾಘಾತಕ್ಕೆ ಕಾರಣವಾಗುವ ಸಾಧ್ಯತೆಗಳಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ನಮ್ಮ ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಉತ್ತಮ ಚಿಕಿತ್ಸೆ ನೀಡುವ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ. ಸರಕಾರದ ಅಧೀನದಲ್ಲಿರುವ ಶ್ರೀ ಜಯದೇವ ಹೃದ್ರೋಗ ಸಂಸ್ಥೆಯು ಬಡವರಿಗೆ ಈ ಸೌಲಭ್ಯ ಒದಗಿಸುತ್ತಿರುವ ಸಂಸ್ಥೆಯಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಹೃದಯ ಸಂಬಂಧಿ ಸಮಸ್ಯೆಗಳು ಕೇವಲ ಶ್ರೀಮಂತರಿಗಷ್ಟೇ ಸೀಮಿತವಾಗಿಲ್ಲ, ಬಡವರು, ಮಧ್ಯಮ ವರ್ಗದವರು, ಗ್ರಾಮೀಣ ಪ್ರದೇಶದವರು, ಕೊಳಚೆ ಪ್ರದೇಶದಲ್ಲಿ ವಾಸಿಸುವವರು ಹಾಗೂ ಬಡ ಕಾರ್ಮಿಕರಲ್ಲಿಯೂ ಈ ಸಮಸ್ಯೆ ಹೆಚ್ಚಾಗಿ ಕಾಣಿಸುತ್ತಿದೆ. ಆದುದರಿಂದ, ಹೃದಯ ಸಂಬಂಧಿ ಕಾಯಿಲೆಗಳು ಉಲ್ಬಣಿಸದಂತೆ ಪ್ರತಿಯೊಬ್ಬರೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ವೈದ್ಯಕೀಯ ವೃತ್ತಿಯಲ್ಲಿರುವವರು ಹಾಗೂ ಆಸ್ಪತ್ರೆಗಳು ಹೃದಯ ಸಂಬಂಧಿ ಸಮಸ್ಯೆಗಳಿಗೆ ಕಡಿಮೆ ಬೆಲೆಯಲ್ಲಿ ಚಿಕಿತ್ಸೆ ದೊರೆಯುವಂತೆ ಮಾಡುವುದಲ್ಲದೆ, ಕಡು ಬಡವರಿಗೆ ಉಚಿತವಾಗಿ ಚಿಕಿತ್ಸೆ ಸಿಗುವಂತೆ ಕ್ರಮ ಕೈಗೊಳ್ಳಬೇಕು. ಈ ಸಮಾವೇಶವು ವೈದ್ಯಕೀಯ ಕ್ಷೇತ್ರದಲ್ಲಿ ಬಲವರ್ದನೆಗೆ ಹೆಚ್ಚು ಸಹಕಾರಿಯಾಗಲಿದೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ನಾನು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇಂದು ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ ಎಂದರೆ ಹೃದ್ರೋಗ ತಜ್ಞರು ನನಗೆ ನೀಡಿದ ಮರು ಜನ್ಮವೇ ಕಾರಣ. ಈ ಸಮಾವೇಶವು ಭವಿಷ್ಯದಲ್ಲಿ ಪ್ರತಿಯೊಬ್ಬ ಪ್ರಜೆಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರವಹಿಸಲಿದೆ ಎಂದು ಅವರು ಹೇಳಿದರು.

ಸಮಾವೇಶದಲ್ಲಿ ಭಾರತೀಯ ಹೃದಯ ಮತ್ತು ಎದೆಗೂಡಿನ ಶಸ್ತ್ರಚಿಕಿತ್ಸಕರ ಸಂಘದ ಅಧ್ಯಕ್ಷ ಡಾ.ಯುಗಲ್ ಮಿಶ್ರಾ, ಸಂಘಟನಾ ಕಾರ್ಯದರ್ಶಿ ಡಾ.ಪ್ರತ್ಯಕಿ ನಂಬಲ, ಡಾ.ವಿವೇಕ್ ಜವಳಿ, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News