ಬಿಜೆಪಿ ಮೇಲೆ ಗೂಬೆ ಕೂರಿಸುವುದು ಸಲ್ಲ: ಸಂಸದೆ ಶೋಭಾ ಕರಂದ್ಲಾಜೆ

Update: 2018-09-09 14:34 GMT

ಬೆಂಗಳೂರು, ಸೆ. 9: ಕಾಂಗ್ರೆಸ್ಸಿನವರಿಗೆ ತಾಕತ್ತು ಇದ್ದರೆ ಅವರ ಶಾಸಕರು ಹಾಗೂ ಸಚಿವರನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಲಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರವಿವಾರ ಇಲ್ಲಿನ ಡಾಲರ್ಸ್‌ ಕಾಲನಿಯ ಬಿಎಎಸ್‌ವೈ ಅವರ ನಿವಾಸದ ಬಳಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಆಂತರಿಕ ಕಿತ್ತಾಟವನ್ನು ಬಿಜೆಪಿ ಮೇಲೆ ಹೇರುವ ಪ್ರಯತ್ನವನ್ನು ಕಾಂಗ್ರೆಸ್ಸಿನವರು ಮಾಡುತ್ತಿದ್ದಾರೆ ಎಂದು ದೂರಿದರು.

ಕಾಂಗ್ರೆಸ್‌ನವರಿಗೆ ತಾಕತ್ತು ಇದ್ದರೆ ತಮ್ಮ ತಮ್ಮ ಶಾಸಕರು ಹಾಗೂ ಸಚಿವರನ್ನು ಹತೋಟಿಯಲ್ಲಿ ಹಿಡಿದಿಟ್ಟುಕೊಳ್ಳಬೇಕು. ಅದನ್ನು ಬಿಟ್ಟು ಬೆಳಗಾವಿ ಹಾಗೂ ಬೆಂಗಳೂರಿನಲ್ಲಿ ಪರಸ್ಪರ ಕಿತ್ತಾಡಿಕೊಂಡು, ಬಿಜೆಪಿ ಮೇಲೆ ಹೇರುವ ತಮ್ಮ ಹತಾಶೆ ಭಾವನೆಯನ್ನು ಕೈಬಿಡಬೇಕು ಎಂದು ವಾಗ್ದಾಳಿ ನಡೆಸಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಹೇಗೆ ಕಿವಿ ಮೇಲೆ ಹೂ ಇಟ್ಕೊಂಡು ಬೆಂಗಳೂರಿಗೆ ಬಂದಿಲ್ವೋ, ಅದೇ ರೀತಿ ಯಾರೂ ಹೂ ಇಟ್ಕೊಂಡು ಬೆಂಗಳೂರಿಗೆ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಬಿಎಸ್‌ವೈ 40 ವರ್ಷಗಳಿಂದ ಬೆಂಗಳೂರಿನಲ್ಲಿದ್ದುಕೊಂಡೆ ರಾಜಕೀಯ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ತಮ್ಮ ಆಂತರಿಕ ಕಿತ್ತಾಟದಿಂದ ತಪ್ಪಿಸಿಕೊಳ್ಳಲು ಬೇರೊಬ್ಬರ ಮೇಲೆ ಆರೋಪ ಮಾಡುತ್ತಿದ್ದಾರೆಂದ ಅವರು, ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಯಲ ಇಲಾಖೆ ದುರ್ಬಳಕೆ ಆರೋಪ ಸರಿಯಲ್ಲ ಎಂದು ಇದೇ ವೇಳೆ ಆಕ್ಷೇಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News