ಗಣಪತಿ ಪೆಂಡಾಲ್‍ಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ವೇಳೆ ಅವಘಡ: ಯುವಕ ಸ್ಥಳದಲ್ಲೇ ಮೃತ್ಯು

Update: 2018-09-12 12:43 GMT

ಶಿವಮೊಗ್ಗ, ಸೆ.12: ಟ್ರಾನ್ಸ್ ಫಾರ್ಮರ್ ಬಳಿಯಿಂದ ಗಣಪತಿ ಪೆಂಡಾಲ್‍ಗೆ ವಿದ್ಯುತ್ ಸಂಪರ್ಕ ಪಡೆಯುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಾಗಿ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. 

ಅದೇ ಗ್ರಾಮದ ನಿವಾಸಿ ನಂದೀಶ್ (22) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಘಟನೆ ಹಿನ್ನೆಲೆ: ಗ್ರಾಮದ ಶ್ರೀ ವಿನಾಯಕ ಸೇವಾ ಸಮಿತಿಯು ಗುರುವಾರ ಗಣಪತಿಯ ಪ್ರತಿಷ್ಠಾಪನೆ ಮಾಡುತ್ತಿದ್ದು, ಪೆಂಡಾಲ್ ಹಾಕಲಾಗಿತ್ತು. ಇದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ವೇಳೆ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News