ಬೇರೆ ಪಕ್ಷಗಳ ಆಮಿಷಗಳಿಗೆ ಬಲಿಯಾಗಬೇಡಿ: ಬಿಜೆಪಿ ಶಾಸಕರಿಗೆ ಬಿಎಸ್‌ವೈ ಸೂಚನೆ

Update: 2018-09-12 12:52 GMT

ಬೆಂಗಳೂರು, ಸೆ. 12: ಚೌತಿ ಹಬ್ಬ ಮುಗಿದ ಬಳಿಕ ಶುಭ ಸುದ್ದಿ ಸಿಗಲಿದೆ. ಹೀಗಾಗಿ ಯಾರೊಬ್ಬರೂ ಆತುರ ಪಡಬಾರದು. ಇನ್ನೂ ಎರಡು ಅಥವಾ ಮೂರು ದಿನ ಕಾಯಿರಿ ಎಂದು ವಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಶಾಸಕರಿಗೆ ಸಲಹೆ ಮಾಡಿದ್ದಾರೆ.

ಬುಧವಾರ ಇಲ್ಲಿನ ಡಾಲರ್ಸ್‌ ಕಾಲನಿಯಲ್ಲಿನ ತನ್ನ ನಿವಾಸದಲ್ಲಿ ಪಕ್ಷದ ಶಾಸಕರ ಜತೆ ಸಮಾಲೋಚನೆ ನಡೆಸಿದ ಅವರು, ಚೌತಿ ಹಬ್ಬ ಮುಗಿಯುತ್ತಿದ್ದಂತೆ ಬಿಜೆಪಿಗೆ ಶುಭ ಸುದ್ದಿ ಸಿಗಲಿದೆ. ಹೆಚ್ಚೆಂದರೆ ಎರಡು-ಮೂರು ದಿನ ಕಾದರೆ ಎಲ್ಲವೂ ನಿಮಗೆ ಗೊತ್ತಾಗುತ್ತದೆ. ಬೇರೆ ಪಕ್ಷಗಳ ಆಮಿಷಗಳಿಗೆ ಯಾವುದೇ ಕಾರಣಕ್ಕೆ ಬಲಿಯಾಗಬೇಡಿ ಎಂದು ಸೂಚಿಸಿದರು.

ಮೈತ್ರಿ ಸರಕಾರ ಉರುಳುವ ಭೀತಿಯಲ್ಲಿರುವ ಕಾಂಗ್ರೆಸ್-ಜೆಡಿಎಸ್‌ನವರು ನಿಮಗೆ ವಿವಿಧ ರೀತಿಯ ಆಮಿಷಗಳನ್ನೊಡ್ಡಬಹುದು. ಯಾವುದೇ ಕಾರಣಕ್ಕೂ ಮೈತ್ರಿ ಸರಕಾರ ಇನ್ನು ಒಂದು ತಿಂಗಳು ಇರುವುದಿಲ್ಲ ಎಂದು ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಭವಿಷ್ಯ ನುಡಿದರು.

ನಾವು ಏನು ಮಾಡುತ್ತಿದ್ದೇವೆಂಬುದು ಬೇರೆಯವರಿಗೆ ಗೊತ್ತಾಗಬಾರದು. ಪ್ರತಿಯೊಬ್ಬರು ಎಚ್ಚರದಿಂದಿರಬೇಕೆಂದು ಸೂಚಿಸಿದ ಅವರು, ಕಾಂಗ್ರೆಸ್‌ನಲ್ಲಿ ಅನೇಕ ಶಾಸಕರಿಗೆ ಸರಕಾರ ಮುಂದುವರೆಯಲು ಇಷ್ಟವಿಲ್ಲ. ಪ್ರತಿಯೊಂದು ವಿಷಯದಲ್ಲೂ ಕೆಲವರು ಹಸ್ತಕ್ಷೇಪ ಮಾಡುತ್ತಿರುವುದರಿಂದಲೇ ಅನೇಕರು ಅಸಮಾಧಾನಗೊಂಡಿದ್ದಾರೆ ಎಂದು ಜಾರಕಿಹೊಳಿ ಸಹೋದರರ ಅಸಮಾಧಾನವನ್ನು ಉಲ್ಲೇಖಿಸಿದರು ಎಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News