ರಾಘವೇಶ್ವರ ಶ್ರೀ ವಿರುದ್ಧದ ಅತ್ಯಾಚಾರ ಆರೋಪ: ಆದೇಶ ಕಾಯ್ದಿರಿಸಿದ ಹೈಕೋರ್ಟ್

Update: 2018-09-17 16:44 GMT

ಬೆಂಗಳೂರು, ಸೆ.17: ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಯನ್ನು ಅತ್ಯಾಚಾರ ಆರೋಪದಿಂದ ಕೈಬಿಟ್ಟಿರುವುದನ್ನು ಪ್ರಶ್ನಿಸಿರುವ ಮೇಲ್ಮನವಿ ವಿಚಾರಣೆಯಲ್ಲಿ ಹೆಚ್ಚುವರಿ ಅಡ್ವೊಕೇಟ್ ಜನರಲ್(ಎಎಜಿ) ವಾದ ಮಂಡಿಸಿರುವುದನ್ನು ಆಕ್ಷೇಪಿಸಲಾಗಿದೆ.

ಈ ಕುರಿತಂತೆ ಸ್ವಾಮೀಜಿ ಸಲ್ಲಿಸಿರುವ ಮಧ್ಯಂತರ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸೋಮವಾರ ಆಲಿಸಿ ಆದೇಶ ಕಾಯ್ದಿರಿಸಿದೆ.

ವಿಚಾರಣೆ ವೇಳೆ ಸ್ವಾಮೀಜಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ ಸಾಂವಿಧಾನಿಕ ಹುದ್ದೆ ನಿಭಾಯಿಸುತ್ತಿದ್ದು ಈ ಪ್ರಕರಣದಲ್ಲಿ ವಾದ ಮಂಡಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಆಕ್ಷೇಪಿಸಿದರು.

ಹೈಕೋರ್ಟ್‌ನಲ್ಲಿನ ಕ್ರಿಮಿನಲ್ ಪ್ರಕರಣಗಳಲ್ಲಿ ಸರಕಾರ ಅಥವಾ ಪ್ರಾಸಿಕ್ಯೂಷನ್ ಅನ್ನು ಪ್ರತಿನಿಧಿಸಬೇಕಾದರೆ ಅಂತಹವರು ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರಬೇಕು ಅಥವಾ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರಬೇಕು. ಇಲ್ಲವಾದರೆ ನಿರ್ದಿಷ್ಟ ಪ್ರಕರಣದಲ್ಲಿ ವಾದ ಮಂಡಿಸಲು ಸರಕಾರದ ಒಪ್ಪಿಗೆ ಇರಬೇಕು. ಇಲ್ಲದಿದ್ದರೆ ಇದು ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಕಲಂ 24ರ ಉಲ್ಲಂಘನೆಯಾಗತ್ತದೆ ಎಂದು ವಿವರಿಸಿದರು.

ಇದನ್ನು ಅಲ್ಲಗಳೆದ ಪೊನ್ನಣ್ಣ, ಕರ್ನಾಟಕ ಕಾನೂನು ಅಧಿಕಾರಿಗಳು (ಸೇವೆ ಮತ್ತು ಷರತ್ತುಗಳು) ಕಾಯ್ದೆಯ ಕಲಂ 21 (ಸಿ) ಪ್ರಕಾರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಕ್ರಿಮಿನಲ್ ಪ್ರಕರಣಗಳಲ್ಲಿ ಹಾಜರಾಗಲು ಅವಕಾಶವಿದೆ ಎಂದು ಪ್ರತಿಪಾದಿಸಿದರು. ಪ್ರತಿವಾದಿಗಳು ಪ್ರಕರಣವನ್ನು ಸುಖಾಸುಮ್ಮನೇ ವಿಚಾರಣೆಯನ್ನು ವಿಳಂಬಿಸಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ, ನ್ಯಾಯಪೀಠ ಮಧ್ಯಂತರ ಅರ್ಜಿಯನ್ನು ಪರಿಗಣಿಸಬಾರದು ಎಂದು ಮನವಿ ಮಾಡಿದರು.

ಪ್ರಕರಣವೇನು: ಸ್ವಾಮೀಜಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಆದರೆ, ಪ್ರಕರಣದ ವಿಚಾರಣೆ ನಡೆಸಿರುವ ಸೆಷನ್ಸ್ ನ್ಯಾಯಾಧೀಶ ಜಿ.ಬಿ. ಮುದಿಗೌಡರ್ ಸ್ವಾಮೀಜಿಯನ್ನು ಆರೋಪದಿಂದ ಮುಕ್ತಗೊಳಿಸಿದ್ದಾರೆ. ಹೀಗಾಗಿ, ಈ ಕುರಿತಂತೆ 2016ರ ಮಾರ್ಚ್ 31ರಂದು ಮುದಿಗೌಡರ್ ನೀಡಿರುವ ಆದೇಶ ರದ್ದುಗೊಳಿಸಬೇಕು ಎಂದು ಕೋರಿ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಈ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಾಸಿಕ್ಯೂಷನ್ ಕೂಡಾ ಮೇಲ್ಮನವಿ ಸಲ್ಲಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News