ವಸತಿ ಶಾಲೆಗಳ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಸಂಸದ ಮುದ್ದಹನುಮೇಗೌಡ

Update: 2018-09-19 12:41 GMT

ತುಮಕೂರು,ಸೆ.19: ಸಮಾಜ ಕಲ್ಯಾಣ ಇಲಾಖೆಗಳ ವಸತಿ ಶಾಲೆಗಳಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಸಮಾಜ ಮುಖ್ಯವಾಹಿನಿಗೆ ಬಂದು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಂಸದ ಎಸ್.ಪಿ.ಮುದ್ದಹನುಮೇಗೌಡ ತಿಳಿಸಿದ್ದಾರೆ.

ನಗರದ ಬಾಲಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆಗಳಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಹಾಗೂ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ಮತ್ತು ನೌಕರರಿಗೆ ಪ್ರತಿಭಾ ಪುರಸ್ಕಾರ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ್ದ ಅವರು, ಮಕ್ಕಳು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಏಳಿಗೆ ಸಾಧಿಸಬೇಕು. ಅಂದಾಗ ಇಂತಹ ಶಾಲೆಯ ಆಶಯ ಸಾಕಾರಗೊಳ್ಳುತ್ತದೆ ಎಂದರು.

ಇಲಾಖೆಗಳ ಕೆಲ ವಿದ್ಯಾರ್ಥಿ ವಸತಿ ಶಾಲೆಗಳು ಖಾಸಗಿ ಶಿಕ್ಷಣ ಸಂಸ್ಥೆಗಳ ವಸತಿ ಶಾಲೆಗಳನ್ನು ಮೀರಿಸುವ ರೀತಿ ಅಚ್ಚುಕಟ್ಟಾಗಿ ಇವೆ. ಅಲ್ಲಿನ ಮಕ್ಕಳು ಉತ್ತಮ ಫಲಿತಾಂಶ ಪಡೆದು ಸಾಧನೆ ಮಾಡಿದ್ದಾರೆ. ಇದು ಹೆಮ್ಮೆಯ ಸಂಗತಿಯಾಗಿದೆ. ಜಾಗತಿಕ ಮಟ್ಟದ ಸವಾಲುಗಳನ್ನು ಎದುರಿಸಲು ಮಕ್ಕಳನ್ನು ಸಜ್ಜುಗೊಳಿಸಬೇಕು ಸಂಸದ ಎಸ್.ಪಿ.ಮುದ್ದಹನುಮೇಗೌಡ ಹೇಳಿದರು.

ಪೋಷಕರು ಇಲಾಖೆ ಅಧಿಕಾರಿಗಳು, ನಿಲಯ ಮೇಲ್ವಿಚಾರಕರು ಮತ್ತು ಸಿಬ್ಬಂದಿ ಮೇಲೆ ಭರವಸೆ ಇಟ್ಟು ಮಕ್ಕಳನ್ನು ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಬಿಟ್ಟಿರುತ್ತಾರೆ. ಆ ಮಕ್ಕಳನ್ನು ನಿಮ್ಮ ಮಕ್ಕಳಂತೆಯೇ ಪೋಷಿಸಿ ಆರೈಕೆ ಮಾಡಿ ಸನ್ಮಾರ್ಗ ತೋರಬೇಕು. ಈಗಾಗಲೇ ಇಂತಹ ಕೆಲಸ ಮಾಡುತ್ತಿದ್ದು, ಇದು ಇನ್ನಷ್ಟು ಪರಿಣಾಮಕಾರಿಯಾಗಿ ಆಗಬೇಕು ಎಂದು ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ.ಜಿ.ಪಿ.ದೇವರಾಜ್ ಮಾತನಾಡಿ, ವಸತಿ ಶಾಲೆಗಳಲ್ಲಿ ಕಲಿಯಲು ಬರುವ ಮಕ್ಕಳು ಬಹುತೇಕ ಬಡವರು, ದೀನದಲಿತರ ಮಕ್ಕಳೇ ಆಗಿರುತ್ತಾರೆ. ಅವರ ಭವಿಷ್ಯ ರೂಪಿಸಲು ಶ್ರಮಿಸಬೇಕು. ಜನಪ್ರತಿನಿಧಿಗಳು,ಇಲಾಖೆಯ ಹಿರಿಯ ಅಧಿಕಾರಿಗಳು ನೌಕರರ, ಸಿಬ್ಬಂದಿ ಸಮಸ್ಯೆ ಪರಿಹರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ಕಾರ್ಯಗಳು ಹೆಚ್ಚು ನಡೆಯಬೇಕು ಎಂದು ಹೇಳಿದರು.

ಜಿಲ್ಲಾ ಪಂ. ಅಧ್ಯಕ್ಷೆ ಲತಾ ರವಿಕುಮಾರ್, ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಜಿಲ್ಲಾ ಪಂ. ಸದಸ್ಯ ರಾಮಾಂಜನೇಯ, ತುಮಕೂರು ಜಿಲ್ಲಾ ವಸತಿ ಶಾಲಾ ನೌಕರರ ಸಂಘದ ಅಧ್ಯಕ್ಷ ಹಾಗೂ ಸಮನ್ವಯಾಧಿಕಾರಿ ಕಸ್ತೂರಿ ಕುಮಾರ್, ವಸತಿ ಶಾಲೆ ನೌಕರರ ಸಂಘದ ಅಧ್ಯಕ್ಷ ಎ.ಬಿ.ಜಿತೇಂದ್ರ, ಜಿಲ್ಲಾ ನಿಲಯ ಮೇಲ್ವಿಚಾರಕರ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಪ್ಪ, ಜಿಲ್ಲಾ ಕ್ರೈಸ್ತ ವಸತಿ ಶಾಲೆಗಳ ಪ್ರಾಂಶುಪಾಲರ ಸಂಘದ ಕಾರ್ಯದರ್ಸಿ ಕೆ.ಎನ್.ಸತೀಶ್, ವಸತಿ ಶಾಲಾ ನೌಕರರ ಸಂಘದ ಕಾರ್ಯದರ್ಶಿ ಜಿ.ಎನ್.ಜನಾರ್ಧನ್, ಜಿಲ್ಲಾ ನಿಲಯ ಮೇಲ್ವಿಚಾರಕರ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಚೆನ್ನರಾಜು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಕೆ.ಆರ್.ರಾಜಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಡಾ.ಸುಬ್ರಾ ನಾಯಕ್, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಬಿ.ರಂಗೇಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಮಂಜುನಾಥ್ ವೇದಿಕೆಯಲ್ಲಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News