ಕೊಡಗು ನೆರೆ ಸಂತ್ರಸ್ತರಿಗೆ 50 ಸಾವಿರ ರೂ. ಹೆಚ್ಚಿನ ಪರಿಹಾರ: ದೇಶಪಾಂಡೆ

Update: 2018-09-22 13:34 GMT

ಬೆಂಗಳೂರು, ಸೆ.22: ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಬಿದ್ದ ಭಾರೀ ಮಳೆಗೆ ಸಿಲುಕಿ ಹಾನಿಗೊಳಗಾಗಿರುವ ಕುಟುಂಬಗಳಿಗೆ ಬಟ್ಟೆ-ಬರೆ ಮತ್ತು ಅಗತ್ಯ ದಿನಬಳಕೆ ವಸ್ತುಗಳಿಗೆಂದು ಸಿಎಂ ಪರಿಹಾರ ನಿಧಿಯಿಂದ ತಲಾ 50 ಸಾವಿರ ರೂ.ಹೆಚ್ಚುವರಿ ಪರಿಹಾರ ನೀಡಲು ಸರಕಾರ ತೀರ್ಮಾನಿಸಿದೆ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.

ಪ್ರಕೃತಿ ವಿಕೋಪದಿಂದ ಹಾನಿಹೊಂಡಿರುವ ಮನೆಗಳಿಗೆ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮಾರ್ಗಸೂಚಿಯ ಪ್ರಕಾರ ಬಟ್ಟೆ-ಬರೆ ನೆರವಿಗೆಂದು 1,800 ರೂ.ಮತ್ತು ದಿನಬಳಕೆ ವಸ್ತುಗಳಿಗೆಂದು 2 ಸಾವಿರ ರೂ.ಮಾತ್ರ (ಒಟ್ಟು 3,800 ರೂ.) ಕೊಡಲು ಅವಕಾಶವಿದೆ. ಆದರೆ, ಇದು ಸಾಕಾಗುವುದಿಲ್ಲ ಎನ್ನುವ ಹಿನ್ನೆಲೆಯಲ್ಲಿ ಈಗ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೊಡಗಿಗೆ ತಾವೂ ಸೇರಿದಂತೆ ಸಿಎಂ ಕುಮಾರಸ್ವಾಮಿ, ಡಿಸಿಎಂ ಡಾ.ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಮತ್ತು ಅನೇಕ ಸಚಿವರು ಇತ್ತೀಚೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪರಿಹಾರ ಮೊತ್ತವನ್ನು ಹೆಚ್ಚಿಸಬೇಕೆಂದು ಸಂತ್ರಸ್ತರು ಮನವಿ ಮಾಡಿಕೊಂಡಿದ್ದರು.

ಅವರ ಮನವಿಗೆ ಸ್ಪಂದಿಸಿ ಈ ಕ್ರಮ ಕೈಗೊಂಡಿದ್ದು, ಇದಕ್ಕೆ ಸಚಿವ ಸಂಪುಟದ ಒಪ್ಪಿಗೆಯೂ ದೊರೆತಿದೆ. ಅಲ್ಲದೆ, ಕೊಡಗಿನಲ್ಲಿ ಸುರಿದ ಭಾರೀ ಮಳೆಗೆ 1,156 ಮನೆಗಳು ತೀವ್ರ ಹಾನಿಗೊಳಗಾಗಿವೆ ಎಂದು ಸಚಿವ ದೇಶಪಾಂಡೆ ಇದೇ ವೇಳೆ ಮಾಹಿತಿ ನೀಡಿದ್ದಾರೆ.

ಇಷ್ಟೂ ಕುಟುಂಬಗಳಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ 50 ಸಾವಿರ ರೂ. ಪರಿಹಾರ ನೀಡಲಾಗುವುದು. ಇದಕ್ಕಾಗಿ 5.78 ಕೋಟಿ ರೂ. ವೆಚ್ಚವಾಗಲಿದೆ ಎಂದು ಕಂದಾಯ ಆರ್.ವಿ.ದೇಶಪಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News