ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ಧ: ಸಚಿವ ಶಿವಾನಂದ ಪಾಟೀಲ್

Update: 2018-09-23 12:08 GMT

ವಿಜಯಪುರ, ಸೆ. 23: ನಾನು ಎಷ್ಟು ದಿನ ಅಧಿಕಾರದಲ್ಲಿರುತ್ತೇನೋ ನನಗೆ ಗೊತ್ತಿಲ್ಲ. ಪಕ್ಷದ ವರಿಷ್ಠರು ರಾಜೀನಾಮೆ ಕೊಡಿ ಅಂದರೆ ನಾನೂ ನಾಳೆನೇ ರಾಜೀನಾಮೆ ಕೊಡಲು ಸಿದ್ಧ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನನಗೆ ಮಂತ್ರಿ ಆಗಬೇಕೆಂಬ ಆಸೆ ಇತ್ತು. ಅದು ಇದೀಗ ಈಡೇರಿದೆ. ಅಧಿಕಾರ ಯಾರಿಗೂ ಶಾಶ್ವತವಲ್ಲ. ಇರುವಷ್ಟು ದಿನ ರಾಜ್ಯದ ಜನತೆಗೆ ಏನು ಸೇವೆ ಮಾಡುತ್ತೇವೆ ಎಂಬುದು ಮುಖ್ಯ ಎಂದರು.

ನಾನು ಆಪರೇಷನ್ ಕಮಲದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್- ಜೆಡಿಎಸ್ ಸರಕಾರ ಐದು ವರ್ಷ ಆಡಳಿತ ನಡೆಸಲಿದೆ. ಮಾಧ್ಯಮಗಳಲ್ಲಿ ಸರಕಾರ ಬಿಳುತ್ತೆ ಅಂತ ಹೇಳುತ್ತಿದ್ದಾರೆ. ಆದರೆ, ನಮ್ಮ ಸರಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ರಾಜಕೀಯದ ಬಗ್ಗೆ ನಾನು ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನ ಇಲಾಖೆಯಲ್ಲಿ ಕೆಲಸ ಮಾಡುವುದಷ್ಟೇ ನನ್ನ ಆದ್ಯತೆ. ಇಲ್ಲಿವರೆಗೆ 1,600 ಎಎನ್‌ಎಮ್ ಗಳ ನೇಮಕಾತಿಯಾಗಿದೆ. 200 ತಜ್ಞ ವೈದ್ಯರ ಹಾಗೂ 300 ಎಂಬಿಬಿಎಸ್ ವೈದ್ಯರ ನೇಮಕಾತಿಯಾಗಿದೆ. 350ಅಂಬುಲೆನ್ಸ್‌ಗಳು ಸಿದ್ಧವಾಗಿದ್ದು, ಇಷ್ಟರಲ್ಲೇ ರಸ್ತೆಗೆ ಇಳಿದು ಸೇವೆ ಸಲ್ಲಿಸಲಿವೆ. ನನ್ನ ಇಲಾಖೆಯಲ್ಲಿ ಕಡಿಮೆ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ರಾಜ್ಯದಲ್ಲಿ ಅರ್ಧಕ್ಕೆ ನಿಂತಿದ್ದ 50 ಆಸ್ಪತ್ರೆ ಕಟ್ಟಡಗಳನ್ನು ಪೂರ್ತಿಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News