ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ 31 ಕೋಟಿ ಬಿಡುಗಡೆ: ಸಚಿವ ದೇಶಪಾಂಡೆ

Update: 2018-09-26 14:25 GMT

ಬೆಂಗಳೂರು, ಸೆ.26: ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿ(ಎಸ್‌ಡಿಆರ್‌ಎಫ್)ಯಿಂದ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳಿಗಾಗಿ 31 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.

ಬುಧವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಕೃತಿ ವಿಕೋಪದ ತುರ್ತು ಪರಿಹಾರ ಕಾರ್ಯಗಳಿಗಾಗಿ ಪ್ರತಿಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ 5 ಕೋಟಿ ರೂ. ಲಭ್ಯವಿರುವಂತೆ ನೋಡಿಕೊಳ್ಳಲು ಮತ್ತು ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ತಲೆದೋರಿದ್ದು, ಈ ಜಿಲ್ಲೆಗಳ ಬೇಡಿಕೆಯನ್ನು ಆಧರಿಸಿ ಈ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಗೆ 5 ಕೋಟಿರೂ, ಬಾಗಲಕೋಟೆಗೆ 4 ಕೋಟಿರೂ, ಬೆಳಗಾವಿ, ವಿಜಯಪುರ, ದಾವಣಗೆರೆ ಮತ್ತು ಉತ್ತರ ಕನ್ನಡಜಿಲ್ಲೆಗಳಿಗೆ ತಲಾ 3 ಕೋಟಿರೂ, ಬಳ್ಳಾರಿ, ಧಾರವಾಡ, ರಾಯಚೂರು, ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳಿಗೆ ತಲಾ 2 ಕೋಟಿರೂ. ಸಿಗಲಿದೆ ಎಂದು ದೇಶಪಾಂಡೆ ವಿವರಿಸಿದ್ದಾರೆ.

ಈ ವರ್ಷದ ಮುಂಗಾರಿನಲ್ಲಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳು ಅತಿವೃಷ್ಟಿಯಿಂದ ತತ್ತರಿಸಿದ್ದರೆ, ಉಳಿದ ಜಿಲ್ಲೆಗಳು ಬರಗಾಲಕ್ಕೆ ತುತ್ತಾಗಿವೆ. ಈಗಾಗಲೇ 23 ಜಿಲ್ಲೆಗಳ 86 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News