ಬೆಂಗಳೂರು: ಅ.1ಕ್ಕೆ ನಗರ ಜಿಲ್ಲಾಧಿಕಾರಿ ‘ಗ್ರಾಮ ವಾಸ್ತವ್ಯ’

Update: 2018-09-26 15:05 GMT

ಬೆಂಗಳೂರು, ಸೆ. 26: ಸಾರ್ವಜನಿಕರ ಕುಂದು-ಕೊರತೆಗಳನ್ನು ಸ್ಥಳದಲ್ಲೇ ಪರಿಹರಿಸಲು ಮತ್ತು ಅವರಲ್ಲಿ ಸ್ಥೈರ್ಯ ತುಂಬುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಹೋಬಳಿಯಲ್ಲಿ ಅಕ್ಟೋಬರ್ 1ರಂದು ಗ್ರಾಮವಾಸ್ತವ್ಯ ಮಾಡಲಾಗುತ್ತಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ವಿಜಯ್ ಶಂಕರ್ ತಿಳಿಸಿದರು.

ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.1ರ ಬೆಳಗ್ಗೆ 11ಗಂಟೆಯಿಂದ ಬನ್ನೇರುಘಟ್ಟದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದೇವರಾಜ್ ಅರಸ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಮಕ್ಕಳೊಂದಿಗೆ ಸಮಾಲೋಚನೆ ನಡೆಸುವುದರಿಂದ ಆರಂಭವಾಗಲಿದೆ.

ಈ ವೇಳೆ ವಿವಿಧ ಇಲಾಖೆಗಳ ಯೋಜನೆಗಳನ್ನು ಖುದ್ದಾಗಿ ಭೇಟಿ ನೀಡುವ ಮೂಲಕ ಅ.2ರ ಬೆಳಗ್ಗೆ ಅಲ್ಲಿಯೇ ಗಾಂಧೀ ಜಯಂತಿಯನ್ನು ಆಚರಿಸಲಾಗುವುದು ಎಂದು ತಿಳಿಸಿದರು. ಈ ಸಮಯದಲ್ಲಿ ಜಿಗಣಿ ಹೋಬಳಿ ವ್ಯಾಪ್ತಿಗೆ ಸಂಬಂಧಿಸಿದ ಕಡತಗಳ ವಿಲೇವಾರಿಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಗ್ರಾಮ ವಾಸ್ತವ್ಯದ ಸಮಯದಲ್ಲಿ 500ಕ್ಕೂ ಹೆಚ್ಚು ಪಿಂಚಣಿ ಪ್ರಮಾಣ ಪತ್ರಗಳು, ಕಂದಾಯ ಇಲಾಖೆಗೆ ಸಂಬಂಧಿಸಿದ ದಾಖಲೆಗಳು ಸೇರಿ ಹಲವು ಸವಲತ್ತುಗಳನ್ನು ವಿತರಿಸಲು ಯೋಜಿಸಲಾಗಿದೆ. ಸ್ಥಳೀಯವಾಗಿ ಸಾರ್ವಜನಿಕರು ಸಲ್ಲಿಸುವ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು.

ಅ.1ರಂದು ಅಪರಾಹ್ನದ ನಂತರ ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಗಣಿ ಸರಕಾರಿ ಪ್ರಾಥಮಿಕ ಮತ್ತು ಹಿರಿಯ ಶಾಲೆಗೆ ಭೇಟಿ ನೀಡಿ ಮಕ್ಕಳು ಮತ್ತು ಶಿಕ್ಷಕರೊಂದಿಗೆ ಸಮಾಲೋಚನೆ ಮತ್ತು ಕುಂದುಕೊರತೆಗಳನ್ನು ಪರಿಶೀಲಿಸಲಾಗುವುದು. ಅಂದು ಸಂಜೆ 4 ಗಂಟೆಗೆ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವುದು ಮತ್ತು ಪರಿಶಿಷ್ಟ ಜಾತಿ/ಪಂಗಡ ಕಾಲನಿಗಳಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಮಾಲೋಚಿಸುವುದು ಮತ್ತು ಅಂದು ರಾತ್ರಿ ಶಿವನಹಳ್ಳಿಯ ರಾಮಕೃಷ್ಣ ಆಶ್ರಮದಲ್ಲಿ ವಾಸ್ತವ್ಯವನ್ನು ಮಾಡಲಾಗುತ್ತದೆ.

ಅ.2ರ ಬೆಳಗ್ಗೆ 9:30ಕ್ಕೆ ಜಿಗಣಿಯ ನಿತ್ಯಾನಂದ ಶಾಲಾ ಆವರಣದಲ್ಲಿ ಆಯೋಜಿಸಲಾಗಿರುವ ಮಹಾತ್ಮ ಗಾಂಧಿ ಜಯಂತಿಯಲ್ಲಿ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಪಾಲ್ಗೊಂಡು ನಂತರ ವಿವಿಧ ಯೋಜನೆ ಮತ್ತು ಕಾರ್ಯಕ್ರಮಗಳ ಅನುಷ್ಠಾನ ಕುರಿತು ಸಭೆ ನಡೆಸಲಾಗುವುದು.

ಈ ಗ್ರಾಮ ವಾಸ್ತವ್ಯದಲ್ಲಿ ಚರ್ಚಿಸಿದ ಮತ್ತು ಕೈಗೊಂಡ ಕ್ರಮಗಳ ಕುರಿತು ಮತ್ತೆ ಎರಡು ತಿಂಗಳ ನಂತರ ಇದೇ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News