ದ.ಕ ಜಿಲ್ಲೆಯ 5 ಸೇರಿ 45 ತಾಲೂಕುಗಳು ಪ್ರವಾಹಪೀಡಿತ: ಸಚಿವ ದೇಶಪಾಂಡೆ

Update: 2018-09-30 16:05 GMT

ಬೆಂಗಳೂರು, ಸೆ.30: ಭಾರೀ ಮಳೆಯಿಂದ ತತ್ತರಿಸಿ, ಅಪಾರ ಪ್ರಮಾಣದ ಹಾನಿಗೀಡಾಗಿರುವ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳ 45 ತಾಲೂಕುಗಳನ್ನು ರಾಜ್ಯ ಸರಕಾರವು ‘ಪ್ರವಾಹಪೀಡಿತ’ ಎಂದು ಘೋಷಿಸಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಮೇಲ್ಕಂಡ 8 ಜಿಲ್ಲೆಗಳಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ವಿಪರೀತ ಪ್ರವಾಹ, ಭೂ ಕುಸಿತ, ಬೆಳೆಹಾನಿ, ಜೀವಹಾನಿಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರಕ್ಕೆ ಎನ್‌ಡಿಆರ್‌ಎಫ್ ಅಡಿಯಲ್ಲಿ ಪರಿಹಾರ ಕೋರಿ ಮನವಿ ಸಲ್ಲಿಸಲಾಗಿತ್ತು. ಮಳೆ ಹಾನಿಯಿಂದಾದ ನಷ್ಟವನ್ನು ಆಧರಿಸಿ, ಪ್ರವಾಹಪೀಡಿತ ತಾಲೂಕುಗಳೆಂದು ಘೋಷಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಮುಖ್ಯವಾಗಿ, ಈ ತಾಲೂಕುಗಳನ್ನು ಪ್ರವಾಹಪೀಡಿತ ಎಂದು ಘೋಷಿಸಿರುವುದರಿಂದ, ಇಲ್ಲಿನ ಸಂತ್ರಸ್ತರು ರಾಷ್ಟ್ರೀಕೃತ ಮತ್ತು ಷೆಡ್ಯೂಲ್ಡ್ ಬ್ಯಾಂಕುಗಳಲ್ಲಿ ಮಾಡಿರುವ ಸಾಲಗಳ ಮರುಪಾವತಿಗೆ ಹೆಚ್ಚಿನ ಕಾಲಾವಕಾಶ ಸಿಗಲಿದೆ.

ಪ್ರವಾಹ, ಅನಾವೃಷ್ಟಿ, ಅಗ್ನಿ ಅವಘಡ ಸೇರಿದಂತೆ ಇತ್ಯಾದಿ ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ಸಾಲ ಮರುಪಾವತಿಗೆ ಹೆಚ್ಚಿನ ಕಾಲಾವಕಾಶ ನೀಡಲು ಆರ್‌ಬಿಐ ನಿಯಮಾವಳಿಗಳಲ್ಲಿ ಅವಕಾಶವಿದೆ. ಜತೆಗೆ, ಇಂತಹ ಸಂದರ್ಭಗಳಲ್ಲಿ ಸಂತ್ರಸ್ತರ ಅಲ್ಪಾವಧಿ ಬೆಳೆ ಸಾಲವು ದೀರ್ಘಾವಧಿ ಬೆಳೆ ಸಾಲವಾಗಿ ಮಾರ್ಪಡುತ್ತದಲ್ಲದೆ, ಹೊಸ ಸಾಲವನ್ನು ತೆಗೆದುಕೊಳ್ಳಲು ಅವಕಾಶ ದೊರೆಯುತ್ತದೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೆ, ಕೃಷಿ ಕ್ಷೇತ್ರವು ಸೇರಿದಂತೆ ಮಿಕ್ಕೆಲ್ಲ ಕ್ಷೇತ್ರಗಳ ಚಟುವಟಿಕೆಗಳು ಎಂದಿನಂತೆ ನಡೆಯಲು ಅಗತ್ಯವಿರುವ ಎಲ್ಲ ಪರಿಹಾರ ಕ್ರಮಗಳನ್ನೂ ಒದಗಿಸಲು ಆರ್‌ಬಿಐ ನಿಯಮಾವಳಿಗಳ ಅಡಿಯಲ್ಲಿ ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ಈ ನಿಟ್ಟಿನಲ್ಲಿ ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಭೆ ನಡೆಸಲಾಗಿತ್ತು. ಜತೆಗೆ, ಕೊಡಗಿನಲ್ಲಿ ಜಿಲ್ಲಾ ಮಟ್ಟದ ಬ್ಯಾಂಕರುಗಳ ಸಭೆ ನಡೆದಿದೆ. ಇವೆರಡೂ ಸಭೆಗಳಲ್ಲಿ ಪ್ರವಾಹಪೀಡಿತ ತಾಲೂಕುಗಳ ಸಂತ್ರಸ್ತರಿಗೆ ಬ್ಯಾಂಕ್ ನಿಯಮಾವಳಿಗಳ ಪ್ರಕಾರ ಸಾಧ್ಯವಿರುವ ನೆರವು ನೀಡಲು ತೀರ್ಮಾನಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರವಾಹಪೀಡಿತ ತಾಲೂಕುಗಳೆಂದು ಘೋಷಿಸಿ, ಅಧಿಸೂಚನೆ ಹೊರಡಿಸಿರುವುದರಿಂದ ಇಷ್ಟೂ ತಾಲೂಕುಗಳ ನೆರೆಪೀಡಿತರಿಗೆ ಮತ್ತು ರೈತರಿಗೆ ಹೆಚ್ಚಿನ ನೆರವು ಸಿಗಲಿದೆ. ಮಿಕ್ಕಂತೆ, ಪ್ರವಾಹಪೀಡಿತರಿಗೆ ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ಮಾರ್ಗಸೂಚಿಯನ್ವಯ ಅಗತ್ಯ ಪರಿಹಾರ ಒದಗಿಸಲಾಗುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪ್ರವಾಹಪೀಡಿತ ತಾಲೂಕುಗಳು: ಕೊಡಗು ಜಿಲ್ಲೆ-ಮಡಿಕೇರಿ, ಸೋಮವಾರಪೇಟೆ, ವೀರಾಜಪೇಟೆ. ದಕ್ಷಿಣ ಕನ್ನಡ ಜಿಲ್ಲೆ- ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ. ಶಿವಮೊಗ್ಗ ಜಿಲ್ಲೆ-ಭದ್ರಾವತಿ, ಶಿಕಾರಿಪುರ, ಸಾಗರ, ಸೊರಬ, ತೀರ್ಥಹಳ್ಳಿ, ಹೊಸನಗರ ಹಾಗೂ ಶಿವಮೊಗ್ಗ.

ಉಡುಪಿ ಜಿಲ್ಲೆ- ಉಡುಪಿ, ಕುಂದಾಪುರ, ಕಾರ್ಕಳ. ಉತ್ತರ ಕನ್ನಡ ಜಿಲ್ಲೆ- ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಸಿದ್ದಾಪುರ, ಶಿರಸಿ, ಮುಂಡಗೋಡು, ಯಲ್ಲಾಪುರ, ಜೋಯಿಡಾ ಹಾಗೂ ಹಳಿಯಾಳ. ಹಾಸನ ಜಿಲ್ಲೆ- ಸಕಲೇಶಪುರ, ಅರಕಲಗೂಡು, ಹೊಳೆನರಸೀಪುರ, ಆಲೂರು.

ಚಿಕ್ಕಮಗಳೂರು ಜಿಲ್ಲೆ-ಚಿಕ್ಕಮಗಳೂರು, ನರಸಿಂಹರಾಜಪುರ, ಮೂಡಿಗೆರೆ, ಶೃಂಗೇರಿ, ಕೊಪ್ಪ. ಮೈಸೂರು ಜಿಲ್ಲೆ-ಹೆಗ್ಗಡದೇವನ ಕೋಟೆ, ಹುಣಸೂರು, ಕೃಷ್ಣರಾಜ ನಗರ, ಮೈಸೂರು, ನಂಜನಗೂಡು, ಪಿರಿಯಾಪಟ್ಟಣ, ಟಿ.ನರಸೀಪುರ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News