ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅದ್ಭುತ ಕಲಾವಿದೆ: ಬಿಜೆಪಿ ಉಪಾಧ್ಯಕ್ಷ ಗೋವಿಂದ ಕಾರಜೋಳ ಲೇವಡಿ

Update: 2018-10-01 13:54 GMT
ಗೋವಿಂದ ಕಾರಜೋಳ

ಬೆಂಗಳೂರು/ಬಾಗಲಕೋಟೆ, ಅ. 1: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಓರ್ವ ಅದ್ಭುತ ಕಲಾವಿದೆ. ಅವರ ಬಗ್ಗೆ ನಾನೇನೂ ಹೇಳುವುದಿಲ್ಲ. ಈಗಾಗಲೇ ಜಾರಕಿಹೊಳಿ ಸಹೋದರರು ಅವರ ಗುಣಗಾನ ಮಾಡಿದ್ದಾರೆ ಎಂದು ಬಿಜೆಪಿ ಉಪಾಧ್ಯಕ್ಷ ಗೋವಿಂದ ಎಂ.ಕಾರಜೋಳ ಲೇವಡಿ ಮಾಡಿದ್ದಾರೆ.

ಸೋಮವಾರ ಬಾಗಲಕೋಟೆ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಜಾರಕಿಹೊಳಿ ಸಹೋದರರು ಅತ್ಯಂತ ಸಮರ್ಥರಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಇನ್ನೂ ಹೆಚ್ಚಿನ ವಿಚಾರಗಳಿದ್ದರೆ ಅವರನ್ನು ಕೇಳಬೇಕು ಎಂದು ಹೇಳಿದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದು ನಾಲ್ಕೂವರೆ ತಿಂಗಳು ಕಳೆದಿದೆ. ಆದರೆ, ಸರಕಾರ ಈವರೆಗೂ ಅಭಿವೃದ್ಧಿ ಕಾರ್ಯಗಳತ್ತ ಮುಖ ಮಾಡಿಲ್ಲ. ರಾಜ್ಯದ 13 ಜಿಲ್ಲೆಯಲ್ಲಿ ಬರ ತಾಂಡವವಾಡುತ್ತಿದೆ. ಪ್ರತಿ ತಾಲೂಕಿಗೆ 5 ಕೋಟಿ ರೂ. ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಮೈತ್ರಿ ಸರಕಾರ ಸಿಎಂ ಕುಮಾರಸ್ವಾಮಿ, ಸಚಿವ ಎಚ್.ಡಿ.ರೇವಣ್ಣ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನರ ಹಿತ ಕಾಯುವ ಸರಕಾರವಷ್ಟೇ ಆಗಿದೆ ಎಂದು ಟೀಕಿಸಿದ ಅವರು, ಪ್ರಧಾನಿ ಮೋದಿಯವರನ್ನು ನಿಂದನೆ ಮಾಡಿಕೊಂಡು ಏನೂ ಸಾಧನೆ ಮಾಡಲು ಆಗುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News