ಸರಗಳ್ಳತನ, ಭೂ ಮಾಫಿಯಾ ಕಡಿವಾಣಕ್ಕೆ ಸಿಸಿ ಕ್ಯಾಮೆರಾದ ಕಣ್ಗಾವಲು: ಎಚ್.ಡಿ.ಕುಮಾರಸ್ವಾಮಿ

Update: 2018-10-01 14:15 GMT

ಬೆಂಗಳೂರು, ಅ.1: ರಾಜ್ಯದ ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಸರಗಳ್ಳತನ, ಭೂ ಮಾಫಿಯಾ ಹಾಗೂ ಇಸ್ಪೀಟು ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರದ ಗಲ್ಲಿ-ಗಲ್ಲಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ, ಹದ್ದಿನ ಕಣ್ಣಿಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಸೋಮವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಸರಗಳ್ಳರ ಸಂಖ್ಯೆ ಹೆಚ್ಚಾಗಿದೆ. ಮಹಿಳೆಯರು ನಿರಾತಂಕದಿಂದ ಓಡಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾಜ್ಯದ ಎಲ್ಲ ನಗರಗಳಲ್ಲೂ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ, ಕಳ್ಳರ ಚಲನವಲನಗಳ ಬಗ್ಗೆ ಜಾಗ್ರತೆ ವಹಿಸಲಾಗುವುದು ಎಂದು ತಿಳಿಸಿದರು.

ಪ್ರಾಮಾಣಿಕ ಅಧಿಕಾರಿಗಳಿಗೆ ಆದ್ಯತೆ: ನನ್ನ ಆಡಳಿತಾವಧಿಯಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಎಲ್ಲ ರೀತಿಯ ಸ್ವಾತಂತ್ರ ಕೊಡಲಾಗುವುದು. ಅಗತ್ಯವಿಲ್ಲದೆ ಯಾರನ್ನು ವರ್ಗಾವಣೆ ಮಾಡುವುದಿಲ್ಲ. ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಇಸ್ಟೀಟ್ ದಂಧೆಯ ಕಡಿವಾಣಕ್ಕೆ ಮೂರು, ನಾಲ್ಕು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ನಗರದಲ್ಲಿ ಇಸ್ಪೀಟು ದಂಧೆ ಹಾಗೂ ಭೂಗಳ್ಳರು ಮಿತಿ ಮೀರಿದ್ದಾರೆ. ರಾಜ್ಯ ಸರಕಾರ ಇಂತಹ ದಂಧೆಗೆ ಯಾವುದೆ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಹೀಗಾಗಿ ಅಕ್ರಮ ಇಸ್ಪೀಟ್ ದಂಧೆಗಳ ಕಡಿವಾಣಕ್ಕೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News