ಶೀಘ್ರದಲ್ಲೆ ಸಂಪುಟ ವಿಸ್ತರಣೆ ಪೂರ್ಣ: ಮುಖ್ಯಮಂತ್ರಿ ಕುಮಾರಸ್ವಾಮಿ
Update: 2018-10-01 14:43 GMT
ಬೆಂಗಳೂರು, ಅ. 1: ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆಯನ್ನು ಇದೇ ತಿಂಗಳ 10 ಅಥವಾ 12ರೊಳಗೆ ಪೂರ್ಣಗೊಳಿಸಲಿದ್ದು, ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಪ್ರಕ್ರಿಯೆ ಮುಂದುವರಿದಿದ್ದು, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಈಗಾಗಲೇ ಸಂಪುಟ ವಿಸ್ತರಣೆ ಪೂರ್ಣಗೊಳಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದರು.
ಎಚ್ಎಎಲ್ ಹಿತ ಕಾಪಾಡಲಿಲ್ಲವೇಕೇ?: ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಸಂಬಂಧ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಕಾಂಗ್ರೆಸ್ ಏಕೆ ಆರೋಪ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಆದರೆ, ಕೇಂದ್ರ ಸರಕಾರವೇ ಈ ಸಂಬಂಧ ಪರಮಾಧಿಕಾರ ಹೊಂದಿದ್ದರೂ ಎಚ್ಎಎಲ್ ಹಿತವನ್ನೇಕೆ ಕಾಪಾಡಲಿಲ್ಲ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.