"15 ಲಕ್ಷ ಬ್ಯಾಂಕ್ ಖಾತೆಗೆ ಹಾಕುವುದಾಗಿ ಮೋದಿ ಹೇಳಿರುವ ಬಗ್ಗೆ ದಾಖಲೆ ನೀಡಿ"

Update: 2018-10-06 18:29 GMT

ಕೊಪ್ಪ, ಅ.6: ಪ್ರಧಾನಿ ಮೋದಿ ಬಗ್ಗೆ ಕ್ಷೇತ್ರದ ಶಾಸಕರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಎಸ್.ಎನ್. ರಾಮಸ್ವಾಮಿ ಆರೋಪಿಸಿದ್ದಾರೆ.   

ಪತ್ರಿಕಾ ಹೇಳಿಕೆ ನೀಡಿರುವ ಅವರು, ಇತ್ತೀಚೆಗೆ ಶೃಂಗೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕ ಟಿ.ಡಿ. ರಾಜೇಗೌಡ ಮಾತನಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಬಡವರ ಬ್ಯಾಂಕ್ ಖಾತೆಗೆ ರೂ.15 ಲಕ್ಷ ಜಮಾ ಮಾಡುವುದಾಗಿ ಹೇಳಿದ್ದರು. ಆದರೆ ಈವರೆಗೂ ಯಾರ ಖಾತೆಗೂ ಹಣ ಹಾಕದೇ ಮೋಸ ಮಾಡಿದ್ದಾರೆ ಎಂದು ದೂರಿದ್ದಾರೆ. ಮೋದಿಯವರು ಆ ಮಾತನ್ನು ಯಾವಾಗ ಎಲ್ಲಿ ಹೇಳಿದ್ದಾರೆ. ಯಾವ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದಾರೆ ಎಂಬುದನ್ನು ದಾಖಲೆ ಸಮೇತ ಶಾಸಕರು ರುಜುವಾತು ಪಡಿಸಬೇಕು. ಪದೇ ಪದೇ ಸುಳ್ಳು ಹೇಳಿ ಜನರನ್ನು ದಾರಿತಪ್ಪಿಸುವುದನ್ನು ಬಿಡಬೇಕು. ಕಾಂಗ್ರೆಸ್ ಎಂದರೆ ಸುಳ್ಳು ಎಂಬುದು ಜನಸಾಮಾನ್ಯರಿಗೆ ಗೊತ್ತಿದೆ. ಶಾಸಕರು ತಮ್ಮ ಪಕ್ಷದ ಸಂಸ್ಕೃತಿಯನ್ನು ಮುಂದುವರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಥಳೀಯ ಜನಪ್ರತಿನಿಧಿಗಳನ್ನು ಕಡೆಗಣಿಸಲಾಗುತ್ತಿದೆ. ವೇದಿಕೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೇ ಇರುತ್ತಾರೆ. ಸರ್ಕಾರಿ ಕಾರ್ಯಕ್ರಮಗಳು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಾಗಿ ಪರಿವರ್ತನೆಯಾಗುತ್ತಿದೆ. ಇದನ್ನು ಸರಿಪಡಿಸದಿದ್ದರೆ ಈ ಬಗ್ಗೆ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷದ ವತಿಯಿಂದ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News