ದಸರಾದಲ್ಲಿ ಭಾಗವಹಿಸಲು ಮುಖ್ಯಮಂತ್ರಿ, ಸಚಿವರುಗಳಿಗೆ ಚುನಾವಣಾ ನೀತಿ ಸಂಹಿತೆ ಅಡ್ಡಿ ?
ಮೈಸೂರು,ಅ.8: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಮುಖ್ಯಮಂತ್ರಿ ಮತ್ತು ಸಚಿವರುಗಳು ಭಾಗವಹಿಸಲು ನೀತಿ ಸಂಹಿತೆ ಅಡ್ಡಿಯಾಗಿದ್ದು, ನೀತಿ ಸಂಹಿತೆ ಸಡಿಲಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಪತ್ರಬರೆದಿರುವುದಾಗಿ ತಿಳಿದು ಬಂದಿದೆ.
ರಾಜ್ಯದ ಮೂರು ಲೋಕಸಭಾ ಕ್ಷೇತ್ರಗಳ ಚುನಾವಣೆ ಘೋಷಣೆಯಾಗಿದ್ದು, ಇದರಲ್ಲಿ ಮಂಡ್ಯ ಲೋಕಸಭೆ ಕ್ಷೇತ್ರವೂ ಒಂದು. ಉಪಚುನಾವಣೆಯ ದಿನಾಂಕ ಘೋಷಣೆಯಾದ ಬೆನ್ನಲ್ಲೇ ನೀತಿ ಸಂಹಿತೆ ಜಾರಿಯಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಕೆ.ಆರ್.ನಗರ ಕ್ಷೇತ್ರ ಸೇರಿಕೊಳ್ಳುವುದರಿಂದ ಮೈಸೂರು ಜಿಲ್ಲೆಯಲ್ಲೂ ನೀತಿ ಸಂಹಿತೆ ಜಾರಿಯಾದಂತೆ ಆಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾಗಲಿ, ಸಚಿವರುಗಳಾಗಲಿ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಭಾಗವಹಿಸದಿರುವುದು ನಿಯಮ. ಹಾಗಾಗಿ ಇವರ ಉಪಸ್ಥಿತಿ ಕಷ್ಟ ಎನ್ನಲಾಗುತ್ತಿದೆ.
ಚುನಾವಣಾ ಆಯೋಗ ಅನುಮತಿ ನೀಡಿದರೆ ಮಾತ್ರ ಜನಪ್ರತಿನಿಧಿಗಳು ಭಾಗವಹಿಸುವ ಸಾಧ್ಯತೆ ಇದ್ದು, ನಾಳೆ ಇದರ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಹೇಳಲಾಗುತ್ತಿದೆ.