ಕುಖ್ಯಾತ ಅಂತರ್‌ ಜಿಲ್ಲಾ ಸರಗಳ್ಳನ ಸೆರೆ: ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ

Update: 2018-10-09 17:41 GMT

ಮಂಗಳೂರು, ಅ.9: ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸರಕಳ್ಳತನ ಪ್ರಕರಣದಲ್ಲಿ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕಾಟಿಪಳ್ಳ 2ನೇ ಬ್ಲಾಕ್ ನಿವಾಸಿ ಶಾಕೀಬ್ ಯಾನೆ ಸಬ್ಬು (25) ಎಂದು ಗುರುತಿಸಲಾಗಿದೆ. ಆರೋಪಿಯಿಂದ 6.60 ಲಕ್ಷ ರೂ. ಮೌಲ್ಯದ ಸೊತ್ತನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಸರಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ಮಾಹಿತಿ ಸಂಗ್ರಹಿಸುತ್ತಿದ್ದ ಸಮಯ ಆರೋಪಿಗಳು ಸಮೀಪದ ವಾಮಂಜೂರು ಪರಿಸರದಲ್ಲಿದ್ದಾರೆಂಬ ಬಗ್ಗೆ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಬಳಿಕ ಕಾರೊಂದನ್ನು ಬೆನ್ನಟ್ಟಿದ ಮಂಗಳೂರು ಸಿಸಿಬಿ ಪೊಲೀಸರು, ಕಾರಿನಲ್ಲಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ

ಆರೋಪಿ ತನ್ನ ಸಹಚರರೊಂದಿಗೆ ಕಾರು ಹಾಗೂ ಬೈಕ್‌ಗಳಲ್ಲಿ ಬಂದು ಅಮಾಯಕ ವಯಸ್ಕರ ಹಾಗೂ ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರ ಹಾಗೂ ಕರಿಮಣಿ ಸರಗಳನ್ನು ಸುಲಿಗೆ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. 

ಸುಲಿಗೆ ಮಾಡಿದ 140 ಗ್ರಾಂ ತೂಕದ ಒಟ್ಟು 5 ಚಿನ್ನದ ಸರ, ಒಂದು ಕರಿಮಣಿ ಸರ, 2 ಚಿನ್ನದ ಪೆಂಡೆಂಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಚಿನ್ನಾಭರಣಗಳ ಒಟ್ಟು ಮೌಲ್ಯ ರೂ. 4,15,000 ಆಗಿದೆ. ಅಲ್ಲದೇ ಆರೋಪಿಯ ವಶದಿಂದ ಚಿನ್ನಾಭರಣಗಳನ್ನು ಸುಲಿಗೆ ಮಾಡಲು ಉಪಯೋಗಿಸಿದ  ಕಾರು, 2 ಮೊಬೈಲ್ ಫೋನ್‌ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 6,60,000 ರೂ. ಎಂದು ಅಂದಾಜಿಸಲಾಗಿದೆ.

ಹಲವು ಪ್ರಕರಣಗಳಲ್ಲಿ ಭಾಗಿ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ತಾನು ಚಲಾಯಿಸುತ್ತಿದ್ದ ಕಾರಿನಲ್ಲಿ ತನ್ನ ಸಹಚರರೊಂದಿಗೆ ಸರಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಅಲ್ಲದೆ, ಮಂಗಳೂರು ನಗರ ಕಮಿಷನರೇಟ್ ಹಾಗೂ ಉಡುಪಿ ಜಿಲ್ಲೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ, ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ, ಮೂಡುಬಿದಿರೆ, ಶಿರ್ವಾದಲ್ಲಿ ತಲಾ ಒಂದರಂತೆ ಚಿನ್ನಾಭರಣ ಕಳವು ಪ್ರಕರಣಗಳು ದಾಖಲಾಗಿವೆ. ಆರೋಪಿ ಶಾಕಿಬ್ ಜೊತೆಯಲ್ಲಿ ಈ ಸರಕಳ್ಳತನ ಪ್ರಕರಣದಲ್ಲಿ ಇತರ ಆರೋಪಿಗಳು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.

ಶಾಕಿಬ್ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಕಳ್ಳತನಕ್ಕೆ ಸಂಬಂಧಪಟ್ಟಂತೆ 6 ಪ್ರಕರಣಗಳು, ಬಜ್ಪೆ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ಹಾಗೂ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಬೈಕ್ ಕಳವು ಪ್ರಕರಣ ದಾಖಲಾಗಿವೆ. ಆರೋಪಿಯನ್ನು ಹಾಗೂ ವಶಪಡಿಸಿ ಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಮೂಡುಬಿದಿರೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್‌ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಇನ್‌ಸ್ಪೆಕ್ಟರ್ ಶಾಂತಾರಾಮ, ಪಿಎಸ್ಸೈ ಶ್ಯಾಮ್‌ಸುಂದರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News