ಗೌರಿ ಲಂಕೇಶ್ ಹತ್ಯೆ ಪ್ರಕರಣ: 17ನೇ ಆರೋಪಿ ಬಂಧನ

Update: 2018-10-11 16:23 GMT

ಬೆಂಗಳೂರು, ಅ.11: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಂಬಂಧ ಮತ್ತೊಬ್ಬ ಆರೋಪಿಯನ್ನು ಎಸ್‌ಐಟಿ ತನಿಖಾಧಿಕಾರಿಗಳು ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ವಾಸುದೇವ ಎಂಬಾತ ಈ ಪ್ರಕರಣದ 17ನೇಯ ಆರೋಪಿಯಾಗಿದ್ದಾನೆ ಎನ್ನಲಾಗಿದೆ.

ಕೆಲವು ದಿನಗಳ ಹಿಂದೆ ವಾಸುದೇವನನ್ನು ಬೇರೊಂದು ಪ್ರಕರಣದಲ್ಲಿ ಮಹಾರಾಷ್ಟ್ರದ ಅಧಿಕಾರಿಗಳು ಬಂಧಿಸಿದ್ದರು. ಇದೀಗ ಬಾಡಿ ವಾರೆಂಟ್ ಮೂಲಕ ಮಹಾರಾಷ್ಟ್ರದಿಂದ ರಾಜ್ಯದ ಎಸ್‌ಐಟಿ ತನಿಖಾಧಿಕಾರಿಗಳು ಆತನನ್ನು ಬೆಂಗಳೂರಿಗೆ ಕರೆ ತಂದಿದ್ದಾರೆ ಎಂದು ತಿಳಿದು ಬಂದಿದೆ.

ಗೌರಿ ಲಂಕೇಶ್ ಹತ್ಯೆಗೆ ಬಳಸಿದ್ದ ದ್ವಿಚಕ್ರ ವಾಹನವನ್ನು ಹಂತಕರಿಗೆ ನೀಡಿರುವ ಆರೋಪವನ್ನು ಈತನು ಎದುರಿಸುತ್ತಿದ್ದಾನೆ. ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಈ ದ್ವಿಚಕ್ರ ವಾಹನವನ್ನು ಕದ್ದು, ಆರೋಪಿಗಳಿಗೆ ನೀಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ವಶಕ್ಕೆ ಪಡೆದಿರುವ ಎಸ್‌ಐಟಿ, ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, 14 ದಿನಗಳ ಕಾಲ ವಿಚಾರಣೆಗಾಗಿ ತನ್ನ ವಶಕ್ಕೆ ಪಡೆದುಕೊಂಡಿದೆ ಎಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News