ಬಿಬಿಎಂಪಿ ಉಪಮೇಯರ್ ಸ್ಥಾನಕ್ಕೆ ಪಕ್ಷೇತರರ ಪಟ್ಟು ಸಲ್ಲ: ಜೆಡಿಎಸ್ ಸದಸ್ಯೆ ನೇತ್ರಾ ನಾರಾಯಣ್

Update: 2018-10-12 17:28 GMT

ಬೆಂಗಳೂರು, ಅ. 12: ರಮಿಳಾ ಉಮಾಶಂಕರ್ ನಿಧನದಿಂದ ತೆರವಾಗಿರುವ ಉಪಮೇಯರ್ ಸ್ಥಾನಕ್ಕೆ ಪಕ್ಷೇತರ ಸದಸ್ಯರು ಕಣ್ಣಿಟ್ಟಿರುವುದು ಉತ್ತಮ ಬೆಳವಣಿಗೆ ಅಲ್ಲ ಎಂದು ಜೆಡಿಎಸ್ ಸದಸ್ಯೆ ನೇತ್ರಾ ನಾರಾಯಣ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಯರ್, ಉಪಮೇಯರ್ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟಕ್ಕೆ ಬೆಂಬಲ ವ್ಯಕ್ತಪಡಿಸಿದ ಆರು ಮಂದಿ ಸದಸ್ಯರಿಗೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆ ಭರವಸೆಗೆ ನಾವು ಈಗಲೂ ಬದ್ಧರಾಗಿದ್ದೇವೆಂದು ಹೇಳಿದರು.

ರಮಿಳಾ ನಿಧನರಾಗುತ್ತಿದ್ದಂತೆ ಆರು ಮಂದಿ ಪಕ್ಷೇತರ ಸದಸ್ಯರು ಖಾಸಗಿ ಹೊಟೇಲ್‌ನಲ್ಲಿ ಸಭೆ ನಡೆ ಉಪಮೇಯರ್ ಸ್ಥಾನ ತಮಗೇ ನೀಡಬೇಕೆಂದು ಒತ್ತಾಯಿಸಿರುವುದು ಸರಿಯಾದ ಕ್ರಮವಲ್ಲ. ಹಾಗೂ ಉಪ ಮೇಯರ್ ಸ್ಥಾನ ಜೆಡಿಎಸ್‌ಗೆ ಮೀಸಲು. ನಮ್ಮ ಪಕ್ಷದ ವರಿಷ್ಠರು ಸೂಚಿಸಿದ ಅಭ್ಯರ್ಥಿಯೇ ಉಪಮೇಯರ್ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಸ್ತುತ ತೆರೆಗೆ ಮತ್ತು ಅರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನದಲ್ಲಿ ಜೆಡಿಎಸ್‌ನವರೇ ಇದ್ದಾರೆ. ಮುಂದೆಯೂ ಈ ಸ್ಥಾನ ಜೆಡಿಎಸ್‌ಗೆ ಇರಲಿದೆ. ಪಕ್ಷೇತರರಿಗೆ ಯಾವ ಸ್ಥಾಯಿ ಸಮಿತಿ ಬಿಟ್ಟುಕೊಡಬೇಕು ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ ಎಂದು ಅವರು ತಿಳಿಸಿದರು.

ಪಕ್ಷೇತರರಿಗೆ ಕಾಂಗ್ರೆಸ್ ಬೆಂಬಲ ಇಲ್ಲ: ಪಕ್ಷೇತರರಿಗೆ ಉಪಮೇಯರ್ ಸ್ಥಾನ ಬಿಟ್ಟುಕೊಡುವ ಮಾತೇ ಇಲ್ಲ. ಹಿಂದೆ ಹೇಳಿದಂತೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಕೊಡಲಾಗುತ್ತೆ. ಉಪಮೇಯರ್ ಸ್ಥಾನ ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದೇವೆ. ಆ ಸ್ಥಾನವನ್ನು ಅವರು ಅಲಂಕರಿಸಲಿದ್ದಾರೆ ಎಂದು ಆಡಳಿತ ಪಕ್ಷದ ನಾಯಕ ಎಂ.ಶಿವರಾಜ್ ಸ್ಪಸ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News