ಕೊಡಗು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾ ಪಟ್ಟಿ ಪ್ರಕಟ
ಮಡಿಕೇರಿ, ಅ.13: ಪ್ರಕೃತಿ ವಿಕೋಪದಿಂದಾಗಿ ಮಧ್ಯದಲ್ಲೆ ಸ್ಥಗಿತಗೊಳಿಸಲಾಗಿದ್ದ ನಗರ ಸ್ಥಳೀಯ ಸಂಸ್ಥೆಗಳಾದ ಸೋಮವಾರಪೇಟೆ, ವೀರಾಜಪೇಟೆ ಮತ್ತು ಕುಶಾಲನಗರ ಪಟ್ಟಣ ಪಂಚಾಯತ್ ನ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದೆ.
ಚುನಾವಣಾ ವೇಳಾಪಟ್ಟಿಯಂತೆ ಅಕ್ಟೋಬರ್ 16 ರಂದು ಜಿಲ್ಲಾಧಿಕಾರಿ ಅವರು ಪರಿಷ್ಕೃತ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ಅಂದೇ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಕ್ಟೋಬರ್ 17 ರಂದು ನಾಮಪತ್ರ ಪರಿಶೀಲಿಸುವ ಕಾರ್ಯ ನಡೆಯಲಿದೆ. ಅಕ್ಟೋಬರ್ 20 ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಅಕ್ಟೋಬರ್ 28 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ಅವಶ್ಯವಿದ್ದರೆ ಮತದಾನ ನಡೆಯಲಿದೆ. ಅಕ್ಟೋಬರ್ 30 ರಂದು ಮರು ಮತದಾನ ಇದ್ದಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಅಕ್ಟೋಬರ್ 31 ರಂದು ಮತ ಎಣಿಕೆಯು ಬೆಳಗ್ಗೆ 8 ಗಂಟೆಯಿಂದ ಆಯಾಯ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಎಸ್.ಉಮೇಶ್ ತಿಳಿಸಿದ್ದಾರೆ.