ಆಹಾರ ಸಂಸ್ಕರಣೆ ಉದ್ಯಮಕ್ಕೆ ವಿಫುಲ ಅವಕಾಶ: ರಾಮಚಂದ್ರನ್

Update: 2018-10-16 17:33 GMT

ಬೆಳಗಾವಿ, ಅ.16: ನಮ್ಮ ದೇಶದಲ್ಲಿ ಆಹಾರ ಸಂಸ್ಕರಣಾ ಉದ್ದಿಮೆಗೆ ವಿಫುಲ ಅವಕಾಶಗಳಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡರೆ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೇಡಿಕೆ ಮತ್ತು ತಕ್ಕ ಬೆಲೆ ದೊರಕುವುದು ಸಾಧ್ಯವಾಗಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಅಭಿಪ್ರಾಯಪಟ್ಟಿದ್ದಾರೆ.

ಕೃಷಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಬೆಳಗಾವಿ ಫೌಂಡ್ರಿ ಕ್ಲಸ್ಟರ್ ಸಭಾ ಭವನದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಆಹಾರ ಸಂಸ್ಕರಣೆ ಉತ್ತೇಜನಕ್ಕೆ ಇರುವ ಯೋಜನೆಗಳು ಮತ್ತು ಸಹಾಯಧನ ಸೌಲಭ್ಯಗಳು ಕುರಿತ ಅರಿವು ಮೂಡಿಸುವ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಹಾರ ಸಂಸ್ಕರಣೆ ಉದ್ಯಮಕ್ಕೆ ಪ್ರೋತ್ಸಾಹಿಸಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಭಾರಿ ಪ್ರಮಾಣದಲ್ಲಿ ಸಹಾಯಧನ ನೀಡುತ್ತಿವೆ. ಮೆಗಾ ಫುಡ್‌ಪಾರ್ಕ್ ಸ್ಥಾಪನೆಗೆ 50 ಕೋಟಿ ರೂ.ವರೆಗೆ ಸಹಾಯಧನ ನೀಡುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ. ಆದುದರಿಂದ, ರೈತರು ಕೂಡ ಆಹಾರ ಸಂಸ್ಕರಣಾ ಉದ್ದಿಮೆ ಆರಂಭಿಸುವ ಮೂಲಕ ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಂಡುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಸಹಾಯಧನ ಸದ್ಬಳಕೆ ಆಗಲಿ ಎಂಬ ಉದ್ದೇಶಕ್ಕೆ ಸರಕಾರ ಹಲವಾರು ಷರತ್ತುಗಳನ್ನು ವಿಧಿಸಿರುತ್ತದೆ. ಆದರೆ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ನಿಯಮಗಳನ್ನು ಸರಳೀಕರಣಗೊಳಿಸಿ ರೈತ ಉದ್ದಿಮೆದಾರರನ್ನು ಪ್ರೋತ್ಸಾಹಿಸಬೇಕು ಎಂದು ರಾಮಚಂದ್ರನ್ ಸಲಹೆ ನೀಡಿದರು.

ರಾಸಾಯನಿಕ ಮಿತಿಮೀರಿ ಬಳಕೆ ಮಾಡಿರುವುದರಿಂದ ಮಣ್ಣಿನ ಫಲವತ್ತತೆ ನಾಶವಾಗಿದ್ದು, ಇದೀಗ ಸಾವಯವ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಿದೆ. ರೈತರು ಇದನ್ನು ಅರಿತುಕೊಂಡು ಆಹಾರ ಸಂಸ್ಕರಣಾ ಉದ್ಯಮ ಆರಂಭಿಸಬೇಕು ಎಂದು ಅವರು ಕರೆ ನೀಡಿದರು.

ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಕೊರತೆಯಿಂದ ಸೌಲಭ್ಯಗಳನ್ನು ಪಡೆದುಕೊಳ್ಳಲು ಜನರು ಮುಂದೆ ಬರುತ್ತಿಲ್ಲ. ಅಧಿಕಾರಿಗಳು ಅರ್ಹ ರೈತರು ಮತ್ತು ಸಾರ್ವಜನಿಕರಿಗೆ ಸರಕಾರಿ ಯೋಜನೆಗಳ ಮಾಹಿತಿ ತಲುಪಿಸಬೇಕು ಎಂದು ರಾಮಚಂದ್ರನ್ ನಿರ್ದೇಶನ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ ನಿರ್ದೇಶಕ ಮಹಾಂತೇಶ ಕರೂರ ಕೃಷಿ, ಕೈಗಾರಿಕೆ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿದರೆ ಸರಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನ ಸಾಧ್ಯವಾಗಲಿದೆ ಎಂದರು.

ಆಹಾರ ಸಂಸ್ಕರಣೆ ಉತ್ತೇಜನಕ್ಕೆ ಇರುವ ಯೋಜನೆಗಳು ಮತ್ತು ಸಹಾಯಧನ ಸೌಲಭ್ಯಗಳು ಕುರಿತ ಅರಿವು ಮೂಡಿಸುವ ಕಾರ್ಯಾಗಾರದಲ್ಲಿ ಭಾಗವಹಿಸಿರುವ ರೈತರು ಮತ್ತು ಉದ್ದಿಮೆದಾರರು ತಮ್ಮ ಅನುಭವ-ಜ್ಞಾನವನ್ನು ಉದ್ದಿಮೆ ವಿಸ್ತರಣೆಗೆ ಬಳಸಿಕೊಳ್ಳಬೇಕು ಎಂದು ಅವರು ಹೇಳಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರವೀಂದ್ರ ಹಕಾಟಿ, ಕೃಷಿ ಇಲಾಖೆ ಉಪ ನಿರ್ದೇಶಕ ಸಲೀಂ, ಗ್ಲೋಬಲ್ ಸಂಸ್ಥೆಯ ರಾವಸಾಹೇಬ್ ಮೋತೆ, ಚಂದ್ರಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News