ಕಲ್ಲಿದ್ದಲು ಕೊರತೆಗೆ ಕೇಂದ್ರದ ಮಲತಾಯಿ ಧೋರಣೆಯೇ ಕಾರಣ: ಮಲ್ಲಿಕಾರ್ಜುನ ಖರ್ಗೆ
Update: 2018-10-24 19:34 IST
ಕಲಬುರಗಿ, ಅ.23: ಕರ್ನಾಟಕಕ್ಕೆ ತೀವ್ರ ಕಲ್ಲಿದ್ದಲಿನ ಕೊರತೆ ಎದುರಾಗಿದ್ದು, ಇದಕ್ಕೆ ಕಾರಣ ಕೇಂದ್ರ ಸರಕಾರ ಪದೇ ಪದೇ ತೋರುತ್ತಿರುವ ಮಲತಾಯಿ ಧೋರಣೆ ಎಂದು ಲೋಕಸಭೆ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಕಲಬುರಗಿ ಶ್ರೀನಿವಾಸ್ ಸರಡಗಿ ಬಳಿ ಇರುವ ಏರ್ಪೋರ್ಟ್ನಿಂದ ಮಹಾರಾಷ್ಟ್ರದ ಲಾತೂರ್ಗೆ ಮಲ್ಲಿಕಾರ್ಜುನ್ ಖರ್ಗೆ ಮುಂಬೈ ಮೂಲದ ಖಾಸಗಿ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸಿದರು. ಇದಕ್ಕೂ ಮುನ್ನ ಮಾತನಾಡಿದ ಅವರು, ಬಿಜೆಪಿಯೇತರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಿಗೆ ಕಲ್ಲಿದ್ದಲು ಪೂರೈಕೆ ಮಾಡುವಲ್ಲಿ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ. ಕೇಂದ್ರ ಸರಕಾರದ ಈ ಧೋರಣೆ ಅಕ್ಷಮ್ಯ ಅಪರಾಧ. ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಿಗೆ ಕೇಂದ್ರ ಮಾಡುತ್ತಿರುವ ಅನ್ಯಾಯಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನತೆ ಮೋದಿ ಸರಕಾರಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.