ಹಿರಿಯ ಪತ್ರಕರ್ತ ವೈ.ಎನ್. ಜೋಶಿ ನಿಧನ

Update: 2018-10-27 06:33 GMT

ಹುಬ್ಬಳ್ಳಿ, ಅ.27: ಹಿರಿಯ ಪತ್ರಕರ್ತ, ರಾಜ್ಯ ಪತ್ರಿಕಾ ಅಕಾಡಮಿ ಪ್ರಶಸ್ತಿ ಪುರಸ್ಕೃತ ವೈ.ಎನ್. ಜೋಶಿ (86) ಇಂದು ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಅವರಿಗೆ ನಗರದ ವಿವೇಕಾನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಗ್ಗೆ 6:45ಕ್ಕೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ‌.

ಹಲವು ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದ ಜೋಶಿ ಸಂಯಕ್ತ ಕರ್ನಾಟಕ ದಿನಪತ್ರಿಕೆಯಲ್ಲಿನ ತಮ್ಮ "ಬೇವು ಬೆಲ್ಲ" ಅಂಕಣದಿಂದಾಗಿ ಮನೆಮಾತಾಗಿದ್ದರು. ಕೃಷಿಗೆ ಸಂಬಂಧಿದಂತೆ ಹಲವಾರು ಲೇಖನಗಳನ್ನು ಬರೆದಿದ್ದ ಅವರು, ಕರಾರುವಕ್ಕಾಗಿ ಚುನಾವಣೆ ಸಮೀಕ್ಷೆ ಬರೆಯುವುದರಲ್ಲಿ ನಿಸ್ಸೀಮರಾಗಿದ್ದರು.

ಕರ್ನಾಟಕ ರಾಜ್ಯ ಪತ್ರಿಕಾ ಅಕಾಡಮಿ ಅವರ ಪತ್ರಿಕೋದ್ಯಮ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಗುರುತಿಸಿತ್ತು. ಇತ್ತೀಚೆಗೆ ಅವರಿಗೆ ಹಿರಿಯ ಪತ್ರಕರ್ತರಿಗೆ ನೀಡುವ ಮಾಸಾಶನವನ್ನು ಕರ್ನಾಟಕ ಸರ್ಕಾರ ಮಂಜೂರು ಮಾಡಿತ್ತು.

ಮೃತರು ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಮುಖ್ಯಮಂತ್ರಿ ಸಂತಾಪ 

ವೈ.ಎನ್.ಜೋಷಿ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ವೃತ್ತಿಯಲ್ಲಿ ವೃತ್ತಿಧರ್ಮಕ್ಕೆ ಅತ್ಯಂತ ಪ್ರಾಮುಖ್ಯ ನೀಡುತ್ತಿದ್ದ ಜೋಶಿ ಕಿರಿಯರಿಗೆ ಮಾರ್ಗದರ್ಶಕರಾಗಿದ್ದರು. ಇವರ ನಿಧನದಿಂದ ಪತ್ರಿಕೋದ್ಯಮ ಕ್ಷೇತ್ರದ ಹಿರಿಯ ಪೀಳಿಗೆಯ ಕೊಂಡಿಯೊಂದು ಕಳಚಿದಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಕುಮಾರಸ್ವಾಮಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News