ಗುಂಡ್ಲುಪೇಟೆ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಕಾಡಾನೆ ದಾಳಿ; ಮಹಿಳೆ ಮೃತ್ಯು

Update: 2018-10-28 13:02 GMT

ಗುಂಡ್ಲುಪೇಟೆ,ಅ.28: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಕಾರ್ಮಿಕ ಮಹಿಳೆ ಸಾವಿಗೀಡಾಗಿರುವ ಘಟನೆ ತಾಲೂಕಿನ ಆಲತ್ತೂರು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.

ಬಂಡೀಪುರ ಹುಲಿಯೋಜನೆಯ ಓಂಕಾರ್ ವಲಯದ ಕಾಡಂಚಿನ ಆಲತ್ತೂರು ಗ್ರಾಮದ ಕರಿಯಶೆಟ್ಟಿ ಎಂಬವರ ಹತ್ತಿ ಬೆಳೆದಿದ್ದ ಜಮೀನಿನಲ್ಲಿ ನಾಲ್ವರು ಮಹಿಳಾ ಕಾರ್ಮಿಕರು ಕೆಲಸ ಮಾಡುವಾಗ ಆನೆದಾಳಿ ನಡೆಸಿದೆ. ಘಟನೆಯಲ್ಲಿ ಚಿಕ್ಕತಾಯಮ್ಮ(56) ಎಂಬ ಮಹಿಳೆಯನ್ನು ಆನೆ ಹಿಂದಿನಿಂದ ತುಳಿದ ಪರಿಣಾಮ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಇದನ್ನು ಕಂಡ ಇತರ ಮೂವರು ಕಾರ್ಮಿಕರು ಓಡಿಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿಯುಂಟಾಗಿದ್ದು, ರೈತರು ಹಾಗೂ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿದರು. 

ಘಟನೆ ನಡೆದರೂ ಸ್ಥಳಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಆಗಮಿಸದಿದ್ದುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಯಿತು. ನಂತರ ಬೇಗೂರು ಠಾಣೆಯ ಪಿಎಸ್‍ಐ ಲೋಹಿತ್ ಕುಮಾರ್ ಹಾಗೂ ಸಿಬ್ಬಂದಿ ತೆರಳಿ ಜನರನ್ನು ಸಮಾಧಾನಗೊಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News