ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ: ಸಚಿವ ಬಂಡೆಪ್ಪ ಕಾಶೆಂಪೂರ್

Update: 2018-11-02 13:26 GMT

ಬೀದರ್, ನ.2: ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಪ್ಲಾನ್ ತಯಾರಿಸುವ ವಿಷಯದಲ್ಲಿ ಬಹುತೇಕ ಅಧಿಕಾರಿಗಳು ಆಸಕ್ತಿ ತೋರುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್, ಕೆಲವು ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ನಡೆದ ಸಭೆಗಳಲ್ಲಿ ಶಿಕ್ಷಣ, ಆರೋಗ್ಯ, ಕೃಷಿ, ನೀರಾವರಿ, ಕೈಗಾರಿಕಾ ವಲಯಗಳನ್ನು ಆದ್ಯತಾ ವಲಯ ಎಂದು ಗುರುತಿಸಿ, ಇಲ್ಲಿನ ಕಾರ್ಯಕ್ಕೆ ಮೊದಲ ಆದ್ಯತೆ ನೀಡಲು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.

ಈ ಕ್ಷೇತ್ರಗಳಲ್ಲಿ ನೀವು ಮಾಡಿದ್ದೇನು? ಮಾಡಬೇಕಿರುವುದೇನು? ಎಂಬುದರ ಬಗ್ಗೆ ಒಂದು ಪ್ರಸ್ತಾವನೆ ತಯಾರಿಸಿ ಸಲ್ಲಿಸಲು ಸೂಚಿಸಲಾಗಿತ್ತು. ಆದರೆ, ಯಾವ ಅಧಿಕಾರಿಗಳು ಕೂಡ ಇಲ್ಲಿವರೆಗೆ ತಮ್ಮನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿಲ್ಲ. ಯಾರು ಕೂಡ ಇದುವರೆಗೆ ವರದಿ ನೀಡಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಅಧಿಕಾರಿಗಳ ಈ ಕಾರ್ಯವೈಖರಿ ಸರಿಯಲ್ಲ. ವರದಿ ಕೇಳಲು ನಿಮ್ಮನ್ನು ಇಲ್ಲಿಗೆ ಕರೆದಿಲ್ಲ. ಕೆಡಿಪಿ ಅಥವಾ ಇನ್ನಿತರ ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಿದ ಸೂಚನೆಗಳಿಗೆ ಬೆಲೆ ಇಲ್ಲವೇ? ಎಂದು ಬಂಡೆಪ್ಪ ಕಾಶೆಂಪೂರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಭೆಯಲ್ಲಿ ಹೇಳಿದ ಕೆಲಸವನ್ನು ಮಾಡುವಲ್ಲಿ ಆಸಕ್ತಿ ತೋರದಿದ್ದರೆ ಅಂತಹ ಅಧಿಕಾರಿಗಳ ಮೇಲೆ ಮುಲಾಜಿಲ್ಲದೇ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಓಗೆ ಅವರು ತಿಳಿಸಿದರು.

ಐದು ಆದ್ಯತಾ ವಲಯಗಳಲ್ಲಿ ಬದಲಾವಣೆ ಎದ್ದು ಕಾಣುವ ನಿಟ್ಟಿನಲ್ಲಿ ಕೆಲಸ ನಡೆಯಲು ಯೋಜನೆ ರೂಪಿಸಲು ತಿಳಿಸಲಾಗಿತ್ತು. ಎಚ್‌ಕೆಆರ್‌ಡಿಬಿಯಲ್ಲಿ ಅನುದಾನ ಇದೆ. ಹಣಕ್ಕೆ ಕೊರತೆ ಇಲ್ಲ ಎಂದು ಹೇಳಲಾಗಿತ್ತು ಎಂದು ಅಧಿಕಾರಿಗಳಿಗೆ ಅವರು ಮತ್ತೊಮ್ಮೆ ನೆನಪಿಸಿದರು.

ಹಣ ತರಲು ಸಿದ್ಧ: ಜಿಲ್ಲೆಗೆ ಹೆಚ್ಚಿನ ಅನುದಾನ ತರಲು ನಾನು ಈಗಲೂ ಸಿದ್ಧನಿದ್ದೇನೆ. ವಿಶೇಷ ಪ್ಯಾಕೇಜ್ ನೀಡಲು ಮುಖ್ಯಮಂತ್ರಿ ತಿಳಿಸಿದ್ದಾರೆ. ಈ ಐದು ವಲಯಗಳಲ್ಲಿ ಏನು ಮಾಡಬಹುದು ಎಂಬುದರ ಬಗ್ಗೆ ಆಯಾ ಇಲಾಖಾಧಿಕಾರಿಗಳು ಇನ್ನಾದರೂ ಪ್ರಸ್ತಾವನೆ ತಯಾರಿಸಿ ಕೂಡಲೇ ಸಲ್ಲಿಸಬೇಕು ಎಂದು ಬಂಡೆಪ್ಪ ಕಾಶೆಂಪೂರ್ ತಿಳಿಸಿದರು.

207 ಕೋಣೆಗಳನ್ನು ನೆಲಸಮ ಮಾಡಲಾಗಿದೆ. ಅಧ್ಯಯನದಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಪಟ್ಟಿ ತಯಾರಿಸಿ ಅವರಿಗೆ ವಿಶೇಷ ತರಗತಿ ನಡೆಸಲು ಯೋಜಿಸಿದ್ದೇವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಸಭೆಗೆ ತಿಳಿಸಿದರು. ಈ ಹಿಂದೆ ತಿಳಿಸಿದ ಕೆಲಸವನ್ನೇಕೆ ಮಾಡಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗೆ ಪ್ರಶ್ನಿಸಿದ ಅವರು, ಕೂಡಲೇ ಕ್ರಿಯಾಯೋಜನೆ ರೂಪಿಸಿ. ಅದನ್ನು ತಮ್ಮ ಬಳಿ ತಂದು ವಿವರಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ವ್ಯಾಪಕ ಅರಿವು ಮೂಡಿಸಿ: ವಿಪರೀತವಾಗಿ ಹೆಚ್ಚುತ್ತಿರುವ ಡೆಂಗ್ ಮತ್ತು ಎಚ್1ಎನ್1 ತಡೆಗೆ ಕಾರ್ಯಕ್ರಮ ರೂಪಿಸಬೇಕು. ಪ್ರತಿಯೊಂದು ಹಳ್ಳಿಯಲ್ಲಿ ಕರಪತ್ರ ವಿತರಣೆಯಂತಹ ಜಾಗೃತಿ ಕಾರ್ಯಕ್ರಮಗಳಾಗಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗೆ ಹಾಗೂ ಟಿವಿವಾಹಿನಿಯಲ್ಲಿ ವಾರ್ತಾ ಇಲಾಖೆಯ ಮೂಲಕ ಪ್ರಚಾರ ನಡೆಸಲು ಪ್ರಸ್ತಾವನೆಯನ್ನು ಸಲ್ಲಿಸಿ ಕ್ರಮವಹಿಸಿ ಎಂದು ವಾರ್ತಾಧಿಕಾರಿಗೆ ಜಿಲ್ಲಾಧಿಕಾರಿ ತಿಳಿಸಿದರು.

ಬರ ಪರಿಹಾರ ಕಾರ್ಯ: ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಬರ ಘೋಷಣೆಯಾಗಿದೆ. ಇಲ್ಲಿ ಪರಿಹಾರ ಕಾರ್ಯ ತೀವ್ರ ರೀತಿಯಲ್ಲಿ ನಡೆಯಲಿ ಎಂದು ಸಚಿವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ, ಜಿಪಂ ಸಿಇಓ ಮಹಾಂತೇಶ ಬೀಳಗಿ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಹಾಗು ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News