ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಿಸಿ: ಕೊಡಗು ಜಿಲ್ಲಾಧಿಕಾರಿ ಶ್ರೀವಿದ್ಯಾ ಸಲಹೆ

Update: 2018-11-03 17:51 GMT

ಮಡಿಕೇರಿ ನ.3 : ಪಟಾಕಿ ಸಿಡಿಸುವುದರಿಂದ ವಾಯು ಮಾಲಿನ್ಯ ಮತ್ತು ಶಬ್ಧ ಮಾಲಿನ್ಯ ಉಂಟಾಗಲಿದೆ. ಆದ್ದರಿಂದ ‘ಪರಿಸರ ಸ್ನೇಹಿ ಹಸಿರು ದೀಪಾವಳಿ’ ಆಚರಣೆಯಾಗಲಿ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಕರೆ ನೀಡಿದ್ದಾರೆ.  

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಪ್ರಾದೇಶಿಕ ಕಚೇರಿ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ‘ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ’ ಕುರಿತಂತೆ ಪರಿಸರ ಜಾಗೃತಿ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ಸ್ವಚ್ಛ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಕರೆ ನೀಡಿದ ಅವರು ಪರಿಸರ ಮಾಲಿನ್ಯ ತಡೆಗಟ್ಟುವುದರಿಂದ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯವೆಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಮಾತನಾಡಿ, ಭಾರೀ ಸ್ಫೋಟದ ಪಟಾಕಿ ಸಿಡಿದರೆ ಪರಿಸರಕ್ಕೆ ಹಾನಿಯಾಗುತ್ತದೆ, ಆದ್ದರಿಂದ ನಿಯಂತ್ರಣ ಅಗತ್ಯ ಮತ್ತು ಜಾಗೃತಿ ಮೂಡಿಸುವ ಅನಿವಾರ್ಯತೆ ಇದೆ ಎಂದರು.  

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಚ್ಚಾಡೋ ಮಾತನಾಡಿ, ಪಟಾಕಿ ಸಿಡಿಸುವುದರಿಂದ ವಾಯು ಮಾಲಿನ್ಯ ಮತ್ತು ಶಬ್ಧ ಮಾಲಿನ್ಯ ಉಂಟಾಗುವುದರ ಜೊತೆಗೆ ಅಸ್ತಮಾ, ಮೆದುಳು ಜ್ವರ, ಹೃದಯಾಘಾತ ಉಂಟಾಗಲಿದೆ. ಆದ್ದರಿಂದ ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು. ಸಂತ ಮೈಕಲರ ಶಾಲೆಯ ಮುಖ್ಯಸ್ಥರಾದ ನವೀನ್ ಕುಮಾರ್ ಮಾತನಾಡಿ, ಪರಿಸರ ಸಂರಕ್ಷಣೆ ಎಲ್ಲರ ಹೊಣೆಯಾಗಿದ್ದು, ಉತ್ತಮ ಪರಿಸರ ಕಾಪಾಡುವುದು ಹಾಗೂ ಆರೋಗ್ಯಯುತ ಜೀವನದ ಬಗ್ಗೆ ಪ್ರತಿಯೊಬ್ಬರೂ ಹಣತೆಯ ದೀಪ ಹಚ್ಚುವಂತಾಗಬೇಕು ಎಂದರು. 

ಜಿಲ್ಲಾ ಪರಿಸರಾಧಿಕಾರಿ ಜಿ.ಆರ್.ಗಣೇಶನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪರಿಸರ ಸಂರಕ್ಷಣೆ ಮಾಡಿದ್ದಲ್ಲಿ ಹೆಚ್ಚಿನ ಆರೋಗ್ಯ ಕಾಣಬಹುದು, ಇಲ್ಲದಿದ್ದಲ್ಲಿ ಹಲವು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ.ಪ್ರೇಮ್ ಕುಮಾರ್ ಪ್ರತಿಜ್ಞಾ ವಿಧಿ ಭೋದಿಸಿದರು. 

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆಂಚಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಸ್ಕೌಟ್ಸ್ ಮತ್ತು ಗೈಡ್ಸ್‍ನ ಆಯುಕ್ತ ಜಿಮ್ಮಿ ಸೀಕ್ವೆರಾ, ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಉಪಾಧ್ಯಕ್ಷ ಎಂ.ಇ.ಮೊಹಿದ್ದೀನ್, ವೆಂಕಟನಾಯಕ ಇತರರು ಇದ್ದರು. ವಿಲ್ಫ್ರೆಡ್ ಕ್ರಾಸ್ತಾ ನಿರೂಪಿಸಿದರು, ಮಂಜುನಾಥ್ ವಂದಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News