ಅಧಿಕಾರಿಗಳ ವರ್ಗಾವಣೆ ದೊಡ್ಡ ದಂಧೆಯಾಗಿ ಮಾರ್ಪಟ್ಟಿದೆ: ಸರಕಾರದ ವಿರುದ್ಧ ಕಿಡಿಕಾರಿದ ಹೈಕೋರ್ಟ್
ಬೆಂಗಳೂರು, ನ.5: ರಾಜ್ಯ ಸರಕಾರ ಅಧಿಕಾರಿಗಳ ವರ್ಗಾವಣೆಯನ್ನು ದೊಡ್ಡ ದಂಧೆಯನ್ನಾಗಿ ಮಾಡಿಕೊಂಡಿದೆ ಎಂದು ಹೈಕೋರ್ಟ್ ಕಿಡಿಕಾರಿದ್ದು, ಈ ವಿಚಾರವನ್ನು ನಾವು ರಾಜ್ಯಪಾಲರ ಗಮನಕ್ಕೆ ತರುತ್ತೇವೆ. ಅವರೇ ವರ್ಗಾವಣೆ ಕುರಿತ ಸಮಗ್ರ ವರದಿಯನ್ನು ಕಲೆ ಹಾಕಿ ರಾಷ್ಟ್ರಪತಿಗಳಿಗೆ ಕಳುಹಿಸಬೇಕು ಹಾಗೂ ರಾಷ್ಟ್ರಪತಿ ಸರಕಾರದ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಬೇಕೆಂದು ಇಂಗಿತ ವ್ಯಕ್ತಪಡಿಸಿದೆ.
ವಲಯ ಅರಣ್ಯಾಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಅರ್ಜಿಯೊಂದನ್ನು ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಅಶೋಕ್ ಜಿ.ನಿಜಗಣ್ಣವರ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲ ಕೆ.ನಾಗೇಂದ್ರಕುಮಾರ್ ವಾದಿಸಿ, ಅರ್ಜಿದಾರ ಈರಣ್ಣ ಯಾದಗಿರಿಯ ವಲಯ ಅರಣ್ಯಾಧಿಕಾರಿಯಾಗಿದ್ದು, ಇವರ ಸ್ಥಾನಕ್ಕೆ ಮತ್ತೊಬ್ಬರನ್ನು ವರ್ಗಾವಣೆ ಮಾಡಲಾಗಿದೆ. ಆದರೆ, ಈರಣ್ಣ ಅವರಿಗೆ ಯಾವುದೆ ಬೇರೊಂದು ಜಾಗವನ್ನೇ ತೋರಿಸಿಲ್ಲ ಎಂದು ಪೀಠಕ್ಕೆ ತಿಳಿಸಿದರು.
ಈ ಮಾತಿಗೆ ಗರಂ ಆದ ನ್ಯಾಯಮೂರ್ತಿ ರಮೇಶ್, ರಾಜ್ಯ ಸರಕಾರ ಕಾನೂನು ಬಾಹಿರವಾಗಿ ವರ್ಗಾವಣೆ ಮಾಡುತ್ತಿದೆ. ಈ ಸರಕಾರಕ್ಕೆ ಕಿವಿ ಹಿಂಡುವವರು ಯಾರೂ ಇಲ್ಲದಂತಾಗಿದೆ ಎಂದು ಸರಕಾರಿ ವಕೀಲರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಹೈಕೋರ್ಟ್ಗಂತೂ ಈ ವಿಷಯವಾಗಿ ಎಚ್ಚರಿಸಿ, ಎಚ್ಚರಿಸಿ ಸುಸ್ತಾಗಿ ಹೋಗಿದೆ. ಇನ್ನು ಮುಂದೆ ಇದನ್ನು ಸಹಿಸಲು ಸಾಧ್ಯವಿಲ್ಲ. ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಎಲ್ಲ ಇರುವ ನಿಯಮಾವಳಿಗಳನ್ನು ಪರಿಶೀಲಿಸಲು ರಾಜ್ಯಪಾಲರಿಗೆ ನಿರ್ದೇಶಿಸಲಾಗುವುದು ಎಂದರು. ಈ ಬಗ್ಗೆ ರಾಜ್ಯಪಾಲರು ಸಮಗ್ರ ಪರಿಶೀಲನೆ ನಡೆಸಿ ರಾಷ್ಟ್ರಪತಿಗಳಿಗೆ ಕಳುಹಿಸಿಕೊಡಬೇಕು ಮತ್ತು ರಾಷ್ಟ್ರಪತಿಗಳು ಸರಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಅನಿವಾರ್ಯತೆಯನ್ನು ಮನದಟ್ಟು ಮಾಡಿಕೊಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರತಿವಾದಿಗಳಾದ ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಈರಣ್ಣ ಅವರ ಜಾಗಕ್ಕೆ ವರ್ಗಾವಣೆಗೊಂಡಿರುವ ಹುಮನಾಬಾದ್ ಅರಣ್ಯ ವಲಯಾಧಿಕಾರಿ ಬಸವರಾಜ ಎಸ್.ಡಾಂಗೆ ಅವರಿಗೆ ನೋಟಿಸ್ ಜಾರಿಗೊಳಿಸುವಂತೆ ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.