ರಾಜ್ಯದ ಬೋಧಕ-ಬೋಧಕೇತರ ಹುದ್ದೆಗಳ ನೇಮಕಾತಿಗೆ ತಡೆ

Update: 2018-11-13 12:12 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ನ.13: ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿ ನಡೆಯುತ್ತಿದ್ದ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗೆ ರಾಜ್ಯ ಸರಕಾರ ತಡೆ ನೀಡಿದೆ.

ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ ನೂರಾರು ಹುದ್ದೆಗಳಿಗೆ ನೇಮಕಾತಿ ನಡೆಸಲು 2017ರ ಜು.17 ರಂದು ಸರಕಾರ ಅಧಿಸೂಚನೆಯನ್ನು ಹೊರಡಿಸಿತ್ತು. ಅದರಂತೆ ನೇಮಕಾತಿ ಪ್ರಕ್ರಿಯೆಗಳು ಆರಂಭಗೊಂಡಿದ್ದವು. ಆದರೆ, ಸಾರ್ವಜನಿಕರು, ಅಭ್ಯರ್ಥಿಗಳು ಹಾಗೂ ಮಾಧ್ಯಮಗಳಿಂದ ಯುಜಿಸಿ ನಿಯಮಾವಳಿಗಳ ಪ್ರಕಾರ ನೇಮಕಾತಿಗಳು ನಡೆಯುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನೇಮಕಾತಿಗೆ ತಡೆ ನೀಡಲಾಗಿದೆ.

ವಿವಿಗಳ ಮತ್ತು ಕಾಲೇಜುಗಳ ಶಿಕ್ಷಕರು ಮತ್ತು ಇತರ ಶೈಕ್ಷಣಿಕ ಸಿಬ್ಬಂದಿ ನೇಮಕಾತಿಗೆ ಕನಿಷ್ಠ ಅರ್ಹತೆ, ಮಾನದಂಡ ಹಾಗೂ ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ನಿರ್ವಹಣೆ 2010ರ ಕಾಯ್ದೆಯಲ್ಲಿ ಬೋಧಕರ ನೇಮಕಾತಿಗೆ 100 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲು ಅವಕಾಶವಿರುವುದಿಲ್ಲ. ಆದರೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿರುವ ವಿಶ್ವವಿದ್ಯಾನಿಲಯಗಳು ಲಿಖಿತ ಪರೀಕ್ಷೆ ಆಯೋಜಿಸಿವೆ. ಅಲ್ಲದೆ, ಯುಜಿಸಿ ನಿಯಮಾವಳಿಗಳ ಪ್ರಕಾರ ಅರ್ಹರಿರುವ ಎಲ್ಲಾ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವ ಅವಕಾಶವಿದೆ.

ಹೀಗಿದ್ದರೂ, ಲಿಖಿತ ಪರೀಕ್ಷೆಯ ಆಧಾರದ ಮೇಲೆ 1:3 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲು ಸುತ್ತೋಲೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಅರ್ಹರು ನೇಮಕಾತಿ ಅವಕಾಶದಿಂದ ವಂಚಿತರಾಗುವುದಲ್ಲದೆ, ಸಾಮಾಜಿಕ ನ್ಯಾಯದ ಉಲ್ಲಂಘನೆಯಾಗುತ್ತದೆ ಎಂದು ತೀವ್ರವಾಗಿ ಟೀಕಿಸಿದ್ದರು.

ನೇಮಕಾತಿ ಮಾಡಿಕೊಳ್ಳಲು ಮುಂದಾಗಿರುವ ವಿವಿಗಳು ಸಹ ಪ್ರಾಧ್ಯಾಪಕರ ನೇಮಕಾತಿಗೆ ಕನಿಷ್ಠ 8 ವರ್ಷಗಳ ಬೋಧನೆ ಅಥವಾ ಸಂಶೋಧನಾ ಅನುಭವವನ್ನು ಕಡ್ಡಾಯಗೊಳಿಸಲಾಗಿದೆ.

ಆದರೆ ನೇರ ನೇಮಕಾತಿಯಲ್ಲಿ ವಿವಿಗಳು 5 ವರ್ಷದ ಅನುಭವವಿದ್ದರೆ ಸಾಕು ಎಂದು ತಿಳಿಸಲಾಗಿದೆ. ನೇರ ನೇಮಕಾತಿಯಿಂದ ಪಾರದರ್ಶಕತೆ ಕಾಪಾಡಲು ಸಾಧ್ಯವಾಗುವುದಿಲ್ಲ. ಸ್ವಜನ ಪಕ್ಷಪಾತಕ್ಕೆ ಅವಕಾಶ ನೀಡಿದಂತಾಗುತ್ತದೆ. ಕೆಲವು ವಿವಿಗಳು ಲಿಖಿತ ಪರೀಕ್ಷೆಯನ್ನು ಪಾರದರ್ಶಕತೆಯಿಂದ ನಡೆಸದೆ ಅಕ್ರಮ ಮಾಡಿವೆ ಎಂದು ದೂರುಗಳು ಬಂದಿವೆ.

ಸಾರ್ವಜನಿಕರು, ಅಭ್ಯರ್ಥಿಗಳು ಹಾಗೂ ತಜ್ಞರಿಂದ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ವಿಶ್ರಾಂತ ಕುಲಪತಿ ಪ್ರೊ.ವಿ.ವಿ.ಕುಟಿನ್ಹೊ ಅವರ ಅಧ್ಯಕ್ಷತೆಯ ಸಮಿತಿ ಪರಿಶೀಲಿಸಿದ್ದು, ಸರಕಾರಕ್ಕೆ ಶಿಫಾರಸು ಮಾಡಿದೆ. ಈ ಹಿನ್ನೆಲೆಯಲ್ಲಿ ವಿವಿಗಳಲ್ಲಿ ನಡೆಯುತ್ತಿದ್ದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿಗೆ ತಡೆ ನೀಡಲಾಗಿದೆ. ಮುಂದಿನ ಆದೇಶದವರೆಗೂ ನೇಮಕಾತಿ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ಇದೆ ಎಂದು ಸರಕಾರದ ಉನ್ನತ ಶಿಕ್ಷಣ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News