ಬೆಳಗಾವಿಯಲ್ಲಿ ಡಿಸೆಂಬರ್‌ನಲ್ಲಿ ಅಧಿವೇಶನ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

Update: 2018-11-14 16:15 GMT

ಬೆಳಗಾವಿ, ನ.14: ರಾಜ್ಯ ವಿಧಾನಮಂಡಳದ ಚಳಿಗಾಲ ಅಧಿವೇಶನ ಡಿಸೆಂಬರ್ ನಲ್ಲಿ ನಡೆಯಲಿರುವುದರಿಂದ ಅಧಿವೇಶನದಲ್ಲಿ ಭಾಗವಹಿಸುವ ಗಣ್ಯರು ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸೂಚನೆ ನೀಡಿದ್ದಾರೆ.

ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚಳಿಗಾಲ ಅಧಿವೇಶನದ ದಿನಾಂಕ ಇನ್ನೂ ಅಂತಿಮಗೊಂಡಿರುವುದಿಲ್ಲ. ಆದರೆ ಡಿಸೆಂಬರ್ ಮೊದಲ ವಾರ ನಡೆಯುವ ಸಾಧ್ಯತೆಗಳಿರುವುದರಿಂದ ಯಾವುದೇ ಅನಾನುಕೂಲ ಉಂಟಾಗದಂತೆ ಅಗತ್ಯ ಕ್ರಮವಹಿಸಬೇಕು ಎಂದರು.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಭಾಧ್ಯಕ್ಷರು, ಸಭಾಪತಿ, ಸಚಿವರು ಸೇರಿದಂತೆ ಅನೇಕ ಗಣ್ಯರು ನಗರದಲ್ಲಿ ವಾಸ್ತವ್ಯ ಮಾಡುವುದರಿಂದ ಶಿಷ್ಟಾಚಾರ ಪಾಲಿಸಬೇಕಾಗುತ್ತದೆ. ಅಧಿವೇಶನ ನಡೆಯುವ ಸಂದರ್ಭದಲ್ಲಿ ಭದ್ರತೆ, ಊಟ-ವಸತಿ, ವಾಹನಗಳು, ಸಂಚಾರ ನಿರ್ವಹಣೆಯ ಜವಾಬ್ದಾರಿ ನಮ್ಮ ಮೇಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅಧಿವೇಶನ ಸಂದರ್ಭದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ನಿರಂತರ ವಿದ್ಯುತ್ ಪೂರೈಕೆ ಕಲ್ಪಿಸಬೇಕು. ಸೂಕ್ತ ಜನರೇಟರ್ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ತುರ್ತು ವೈದ್ಯಕೀಯ ಸೇವೆ ಒದಗಿಸಲು ಅನುಕೂಲವಾಗುವಂತೆ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಅ್ಯಂಬುಲೆನ್ಸ್ ಸೇವೆ, ವೈದ್ಯರು ಮತ್ತು ಔಷಧ ಸಾಮಗ್ರಿಗಳನ್ನು ಸಜ್ಜಾಗಿಡಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.

ಶುದ್ಧ ಕುಡಿಯುವ ನೀರು, ಸ್ವಚ್ಛತೆ, ಸಂಚಾರ ನಿರ್ವಹಣೆ ಹಾಗೂ ನಗರ ಸುಂದರೀಕರಣ ಸೇರಿದಂತೆ ಇತರೆ ಎಲ್ಲ ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡಲು ಎಲ್ಲ ಇಲಾಖೆಗಳು ಹಾಗೂ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಬೊಮ್ಮನಹಳ್ಳಿ ಹೇಳಿದರು.

ಪೊಲೀಸ್ ಸಿಬ್ಬಂದಿ ಸೇರಿದಂತೆ ಸಾಮೂಹಿಕ ವಸತಿ ಸೌಲಭ್ಯ ಕಲ್ಪಿಸಿರುವ ಕಡೆಗಳಲ್ಲಿ ನೀರು, ಶೌಚಾಲಯ, ಊಟ ಮತ್ತಿತರ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಡಿ.ಸಿ.ರಾಜಪ್ಪತಿಳಿಸಿದರು.

ಸಭೆಯಲ್ಲಿ ಡಿಸಿಪಿ ಸೀಮಾ ಲಾಟ್ಕರ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಬಿ.ಬೂದೆಪ್ಪ, ಮಹಾನಗರ ಪಾಲಿಕೆ ಆಯುಕ್ತ ಶಶಿಧರ್ ಕುರೇರ್, ಲೋಕೋಪಯೋಗಿ, ಆಹಾರ, ಆರೋಗ್ಯ, ವಿದ್ಯುತ್, ಸಾರಿಗೆ, ಅಗ್ನಿಶಾಮಕ, ಬಿಎಸ್ನೆನ್ನೆಲ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News