ವಾಯುಭಾರ ಕುಸಿತ: ನ.20 ರಿಂದ ರಾಜ್ಯದೆಲ್ಲೆಡೆ ಮಳೆ ಸಾಧ್ಯತೆ

Update: 2018-11-18 12:25 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ನ.18: ಗಜ ಚಂಡಮಾರುತದ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ನ.20ರಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್. ಶ್ರೀನಿವಾಸ ರೆಡ್ಡಿ ಹೇಳಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದು ಚಂಡಮಾರುತವಾಗಿ ಪರಿವರ್ತನೆಯಾಗುತ್ತದೆಯೋ ಇಲ್ಲವೋ ಎಂಬುದನ್ನು ಕಾದುನೋಡಬೇಕಿದೆ. ಸೋಮವಾರ ವಾಯುಭಾರ ಕುಸಿತ ತಮಿಳುನಾಡಿನ ಕರಾವಳಿ ಪ್ರವೇಶಿಸುವ ಸಾಧ್ಯತೆಗಳಿದ್ದು, ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಪೂರ್ವ ಭಾಗದಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ತಿಳಿಸಿದ್ದಾರೆ.

ಗಜ ಚಂಡಮಾರುತ ನಿರೀಕ್ಷೆಯಂತೆ ರಾಜ್ಯದಲ್ಲಿ ವ್ಯತಿರಿಕ್ತ ಪರಿಣಾಮ ಉಂಟುಮಾಡಿಲ್ಲ. ಭಾರೀ ಮಳೆಯೂ ಆಗಲಿಲ್ಲ. ಆದರೆ ಕೆಲವೆಡೆ ಚದುರಿದಂತೆ ಸಾಧಾರಣ ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇಂದು ಮತ್ತು ನಾಳೆ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಸಾಧಾರಣ ಪ್ರಮಾಣದ ಮಳೆ ನಿರೀಕ್ಷಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News