ಮಂಡ್ಯ: ಪುತ್ರಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ; ಬಾಲಕಿ ಸಾವು
Update: 2018-11-20 14:17 GMT
ಮಂಡ್ಯ, ನ.20: ಕೌಟುಂಬಿಕ ಕಲಹದಿಂದ ಬೇಸತ್ತು ಗೃಹಿಣಿಯೊಬ್ಬರು ತನ್ನ ಪುತ್ರಿ ಜೊತೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ಮಂಗಳವಾರ ನಡೆದಿದೆ.
ಘಟನೆಯಲ್ಲಿ ಪುಟ್ಟ ಬಾಲಕಿ ಅಂಜಲಿ(5) ಸಾವನ್ನಪ್ಪಿದ್ದು, ತಾಯಿ ಸುಧಾ(25) ಗಂಭೀರವಾಗಿ ಗಾಯಗೊಂಡಿದ್ದಾರೆ. ಆಕೆಯನ್ನು ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ತನ್ನ ಮನೆಯಲ್ಲಿ ಮೊದಲು ಮಗಳ ಮೇಲೆ ಸೀಮೆ ಎಣ್ಣೆ ಸುರಿದು, ನಂತರ ತನ್ನ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಸುಧಾ ಬೆಂಕಿ ಹಚ್ಚಿಕೊಂಡಿದ್ದಾರೆ ಎನ್ನಲಾಗಿದೆ.
ತಕ್ಷಣವೇ ಅಕ್ಕಪಕ್ಕದ ಮನೆಯವರು ನೆರವಿಗೆ ಬಂದರಾದರೂ ಮಗು ಅಂಜಲಿಯನ್ನು ಉಳಿಸಲಾಗಲಿಲ್ಲ. ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.