ಕೆ.ಆರ್.ಪೇಟೆ: ಬಾಲಕನ ಮೇಲೆ ಬೀದಿ ನಾಯಿ ದಾಳಿ
ಕೆ.ಆರ್.ಪೇಟೆ, ನ.30: ಪಟ್ಟಣದ ಮುಸ್ಲಿಂ ಬ್ಲಾಕ್ ಬಡಾವಣೆಯಲ್ಲಿ ಬೀದಿ ನಾಯಿಗಳ ಗುಂಪೊಂದು ಕೋರಮಂಡಲ್ ಸಕ್ಕರೆ ಕಾರ್ಖಾನೆಯ ನೌಕರ ಗಿರೀಶ್ ಅವರ ಪುತ್ರ ಒಂದನೇ ತರಗತಿಯ ವಿದ್ಯಾರ್ಥಿ ಸಮರ್ಥ್(6) ಮೇಲೆ ದಾಳಿ ಮಾಡಿ ಮಾರಣಾಂತಿಕವಾಗಿ ಕಚ್ಚಿ ಗಾಯಗೊಳಿಸಿರುವ ಘಟನೆ ನಡೆದಿದೆ.
ಮನೆಯ ಹೊರಗೆ ಸಮರ್ಥ್ ಆಟವಾಡುತ್ತಿದ್ದಾಗ ಏಕಾಏಕಿ ದಾಳಿ ನಡೆಸಿದ ಬೀದಿ ನಾಯಿಗಳು ಕೆನ್ನೆ ಕೈಕಾಲುಗಳು ಸೇರಿದಂತೆ ಸಿಕ್ಕ ಸಿಕ್ಕ ಕಡೆಯಲ್ಲೆಲ್ಲಾ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ ಪರಿಣಾಮ ಆತ ತೀವ್ರ ಅಸ್ವಸ್ಥಗೊಂಡಿದ್ದಾನೆ.
ಕೂಡಲೇ ಬಾಲಕನಿಗೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪಟ್ಟಣದಲ್ಲಿ ಎಲ್ಲೆಂದರಲ್ಲಿ ಕೋಳಿ ಮತ್ತು ಮಾಂಸದ ಅಂಗಡಿಗಳಿದ್ದು ಇದರಿಂದ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿವೆ. ಬೀದಿ ನಾಯಿಗಳನ್ನು ನಿಯಂತ್ರಣ ಮಾಡದ ಪುರಸಭೆ ಆಡಳಿತದ ವಿರುದ್ಧ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.