ಡಿಕೆಶಿ, ರಮೇಶ್, ಲಕ್ಷ್ಮಿ ಹೆಬ್ಬಾಳ್ಕರ್ ಒಂದೇ ಪರಿವಾರ: ಸತೀಶ್ ಜಾರಕಿಹೊಳಿ
ಬೆಳಗಾವಿ, ಡಿ.1: ಮೊದಲಿನಿಂದಲೂ ಸಚಿವ ರಮೇಶ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಂದೆ ಪರಿವಾರದವರು. ನಮ್ಮ ನಡುವೆ ಭಿನ್ನಾಭಿಪ್ರಾಯಗಳಿಲ್ಲವೆಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್, ರಮೇಶ್ ಜಾರಕಿಹೊಳಿ ಹಿಂದಿನಿಂದಲೂ ಒಳ್ಳೆಯ ಸ್ನೇಹಿತರು. ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಯಾವುದೆ ಮನಸ್ತಾಪ ಇಲ್ಲ. ಮೊದಲಿನಿಂದಲೂ ಜತೆಯಾಗಿಯೆ ಇದ್ದಾರೆಂದು ತಿಳಿಸಿದರು.
ಪ್ರತಿಭಟನಾನಿರತ ಕಬ್ಬು ಬೆಳೆಗಾರರನ್ನು ಡಿ.ಕೆ ಶಿವಕುಮಾರ್ ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ನಾವು ಬೇರೆ ಜಿಲ್ಲೆಯಲ್ಲಿ ಧರಣಿ ನಿರತರ ಮನವೊಲಿಸಿದ್ದೇವೆ. ಆದರೆ ನಾವು ಅಲ್ಲಿ ಹೋಗಿ ನಾಯಕ ಆಗೋಕೆ ಆಗಲ್ಲ. ಹಾಗೆಯೆ ಡಿ.ಕೆ.ಶಿವಕುಮಾರ್ ಇಲ್ಲಿ ಬಂದು ನಾಯಕ ಆಗೋಕೆ ಆಗಲ್ಲ. ಹೀಗಾಗಿ ಸಚಿವ ಡಿ.ಕೆ ಶಿವಕುಮಾರ್ ತಮ್ಮ ಕರ್ತವ್ಯವನ್ನಷ್ಟೆ ಮಾಡಿದ್ದಾರೆ. ಇದರಲ್ಲಿ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಅವರು ಖಚಿತ ಪಡಿಸಿದರು.