ವಸಾಹತು ಕಾಲಘಟ್ಟದ ಮೆಸೂರು ಸಂಸ್ಥಾನ ದೇಶಿ ಪರಂಪರೆಯ ಜ್ಞಾನದ ಹುಡುಕಾಟ

Update: 2018-12-02 02:49 GMT

            ಎನ್.ಚಿನ್ನಸ್ವಾಮಿ ಸೋಸಲೆ

ಕರ್ನಾಟಕದ ಆಧುನಿಕ ಚರಿತ್ರೆಯಲ್ಲಿ ಕರ್ನಾಟಕ ಏಕೀಕರಣ ಒಂದು ಮಹತ್ವಪೂರ್ಣ ಐತಿಹಾಸಿಕ ಘಟನೆ. ಹಾಗೆಯೇ ಕನ್ನಡ ವಿಶ್ವವಿದ್ಯಾನಿಲಯದ ಸ್ಥಾಪನೆಯೂ ಮತ್ತೊಂದು ಮಹತ್ವದ ಘಟನೆ. ಕನ್ನಡ-ಕನ್ನಡಿಗ-ಕರ್ನಾಟಕ ಸಂಸ್ಕೃತಿಯ ಕಲ್ಪನೆಯಡಿಯಲ್ಲಿ ಅಸ್ತಿತ್ವಕ್ಕೆ ಬಂದ ಕನ್ನಡ ವಿಶ್ವವಿದ್ಯಾನಿಲಯದ ಹರವು ವಿಸ್ತಾರವಾದದ್ದು. ಈ ಕಾರಣದಿಂದ ಕನ್ನಡ ವಿಶ್ವವಿದ್ಯಾನಿಲಯದ ಆಶಯ ಮತ್ತು ಗುರಿ ಇತರ ವಿಶ್ವವಿದ್ಯಾನಿಲಯಗಳಿಗಿಂತ ಭಿನ್ನ ಹಾಗೂ ಪ್ರಗತಿಪರ. ಕನ್ನಡದ ಸಾಮರ್ಥ್ಯವನ್ನು ಎಚ್ಚರಿಸುವ ಕಾಯಕವನ್ನು ಉದ್ದಕ್ಕೂ ಅದು ನೋಂಪಿಯಿಂದ ಮಾಡಿಕೊಂಡು ಬಂದಿದೆ. ಕರ್ನಾಟಕತ್ವದ ‘ವಿಕಾಸ’ ಈ ವಿಶ್ವವಿದ್ಯಾನಿಲಯದ ಮಹತ್ತರ ಆಶಯವಾಗಿದೆ.

ಕನ್ನಡ ಅಧ್ಯಯನ ಮೂಲತಃ ಶುದ್ಧ ಜ್ಞಾನದ, ಕಾಲ, ದೇಶ, ಜೀವನ ತತ್ವದ ಪರವಾಗಿರುವುದರ ಜೊತೆಗೆ ಅಧ್ಯಯನವನ್ನು ಒಂದು ವಾಗ್ವಾದದ ಭೂಮಿಕೆ ಎಂದು ನಾವು ಭಾವಿಸಬೇಕಾಗಿದೆ. ಕನ್ನಡ ಬದುಕಿನ ಚಿಂತನೆಯ ಭಾಗವೆಂದೇ ಅದನ್ನು ರೂಪಿಸಿ ವಿವರಿಸಬೇಕಾಗಿದೆ. ಅಂದರೆ : ದೇಸಿ ಬೇರುಗಳ ಗುರುತಿಸುವಿಕೆ ಕನ್ನಡ ಅಧ್ಯಯನದ ಮುಖ್ಯ ಭಿತ್ತಿಯಾಗಬೇಕಾಗಿದೆ. ಕನ್ನಡ ಸಂಸ್ಕೃತಿಯು ಬಹುತ್ವದ ನೆಲೆಗಳನ್ನು ಆಧರಿಸಿ ರೂಪುಗೊಂಡಿದೆ. ಸಮಾಜಮುಖಿ ಚಿಂತನೆಗಳ ವ್ಯಾಪಕ ಅಧ್ಯಯನ ಬದುಕಿನ ಸಂಕೀರ್ಣ ಲಕ್ಷಣಗಳ ಸ್ವರೂಪವನ್ನು ಇದು ಪರಿಚಯಿಸುತ್ತದೆ. ನಾವು ಇದನ್ನು ಎಲ್ಲ ವಲಯಗಳಲ್ಲಿ ಕನ್ನಡದ ಅನುಷ್ಠಾನದ ಮೂಲಕ ಉಳಿಸಿ, ಬೆಳೆಸಬೇಕಾಗಿದೆ. ಆಗ ಕನ್ನಡ ಸಂಸ್ಕೃತಿಯು ವಿಶ್ವಪ್ರಜ್ಞೆಯಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ‘ಕನ್ನಡದ್ದೇ ಮಾದರಿ’ಯ ಶೋಧ ಇಂದಿನ ಮತ್ತು ಬರುವ ದಿನಗಳ ತೀವ್ರ ಅಗತ್ಯವಾಗಿದೆ.

ಕನ್ನಡ ಸಂಸ್ಕೃತಿಯ ಭಾಗವಾಗಿರುವ ಕನ್ನಡ ಅಧ್ಯಯನವು ಕಾಲದಿಂದ ಕಾಲಕ್ಕೆ ಹೊಸ ತಿಳಿವಳಿಕೆಯನ್ನು ತನ್ನ ತೆಕ್ಕೆಗೆ ಜೋಡಿಸಿಕೊಳ್ಳುತ್ತ ಬಂದಿದೆ. ಹೀಗಾಗಿ ವಿದೇಶಿ ಮತ್ತು ದೇಶಿ ವಿದ್ವಾಂಸರು ತೊಡಗಿಸಿಕೊಂಡ ಈ ವಿದ್ವತ್‌ಕ್ಷೇತ್ರದಲ್ಲಿ ಮುಂದಿನ ವಿದ್ವಾಂಸರು ಕಾಲದಿಂದ ಕಾಲಕ್ಕೆ ಹೊಸಬೆಳೆಯನ್ನು ತೆಗೆಯುತ್ತ ಬಂದಿದ್ದಾರೆ. ಕನ್ನಡ ಅಧ್ಯಯನ ಪಳೆಯುಳಿಕೆಯ ಶಾಸ್ತ್ರವಾಗದೆ, ಬದಲಾಗುತ್ತಿರುವ ಕಾಲಮಾನದಲ್ಲಿ ಎದುರಾಗುತ್ತಿರುವ ಆಹ್ವಾನಕ್ಕೆ ತಕ್ಕಂತೆ ತನ್ನ ಗತಿಯನ್ನು ಬದಲಾಯಿಸಿಕೊಳ್ಳುತ್ತ ಬಂದಿರುವುದು ಗಮನಿಸತಕ್ಕ ಅಂಶ. ಸಾಂಪ್ರದಾಯಿಕ ಚಿಂತನೆಗಳು ಆಧುನೀಕರಣದ ಈ ಕಾಲಘಟ್ಟದಲ್ಲಿ ಸಕಾಲಿಕಗೊಳ್ಳುವುದು ಅನಿವಾರ್ಯವಾಗಿದೆ. ಮಾಹಿತಿ ತಂತ್ರಜ್ಞಾನದ ಮೂಲಕ ಜಗತ್ತಿನ ಜ್ಞಾನಪ್ರವಾಹವೇ ನಮ್ಮ ಅಂಗೈಯೊಳಗೆ ಚುಳುಕಾಗುವ ಈ ಸಂದರ್ಭದಲ್ಲಿ ಕನ್ನಡದ ಚಹರೆ ಮತ್ತು ಕನ್ನಡ ಭಾಷೆಯ ಚಲನಶೀಲತೆಯನ್ನು ಶೋಧಿಸಲಿಕ್ಕೆ ಭಾಷಾ ಆಧುನೀಕರಣ ಮತ್ತು ಪ್ರಮಾಣೀಕರಣದ ಪ್ರಕ್ರಿಯೆಗಳ ನೆಲೆಯಲ್ಲಿ ಅಧ್ಯಯನದ ಹೊಸ ಸಾಧ್ಯತೆಗಳನ್ನು ಅನುಲಕ್ಷಿಸಿ, ಭಾಷಾನೀತಿ, ಭಾಷಾಯೋಜನೆ ರೂಪಿಸುವುದು ಅನಿವಾರ್ಯ ಹಾಗೂ ಅವಶ್ಯವಾಗಿದೆ. ಆಗ ಅಧ್ಯಯನದ ಸ್ವರೂಪ ಹಾಗೂ ಬಳಕೆಯ ವಿಧಾನದಲ್ಲಿ ಪರಿವರ್ತನೆ ಸಾಧ್ಯವಾಗುತ್ತದೆ.

ನಮ್ಮೆದುರು ನುಗ್ಗಿ ಬರುತ್ತಿರುವ ಜಾಗತೀಕರಣಕ್ಕೆ ಪ್ರತಿರೋಧವಾಗಿ ನಮ್ಮ ದೇಶೀಯ ಜ್ಞಾನಪರಂಪರೆಯನ್ನು ಮರುಶೋಧಿಸಿ ಆ ಮೂಲಕ ಕುಸಿಯುತ್ತಿರುವ ನಮ್ಮ ಬೇರುಗಳನ್ನು ಬಲಗೊಳಿಸಿಕೊಳ್ಳಬೇಕಾಗಿದೆ. ಭಾಷೆ, ಸಾಹಿತ್ಯ, ವ್ಯಾಕರಣ, ಛಂದಸ್ಸು, ಚರಿತ್ರೆ, ಕೃಷಿ, ವೈದ್ಯ, ಪರಿಸರ ಮುಂತಾದ ಅಧ್ಯಯನ ವಿಷಯಗಳನ್ನು ಹೊಸ ಆಲೋಚನೆಯ ನೆಲೆಯಲ್ಲಿ ವಿಶ್ಲೇಷಿಸಬೇಕಾಗಿದೆ. ಆಧುನಿಕ ವಿಜ್ಞಾನ, ತಂತ್ರಜ್ಞಾನವೇ ‘ಜ್ಞಾನ’ ಎಂದು ರೂಪಿಸಿರುವ ಇಂದಿನ ಆಲೋಚನೆಗೆ ಪ್ರತಿಯಾಗಿ ಈ ಜ್ಞಾನಶಾಖೆಗಳಲ್ಲಿ ಹುದುಗಿರುವ ದೇಶಿ ಪರಂಪರೆಯ ಜ್ಞಾನದ ಹುಡುಕಾಟ ನಡೆಯಬೇಕಾಗಿದೆ. ಅಂತಹ ಪ್ರಯತ್ನಗಳಿಗೆ ಬೇಕಾದ ಮಾರ್ಗದರ್ಶಕ ಸೂತ್ರಗಳ ಹಾಗೂ ಆಕರ ಪರಿಕರಗಳ ನಿರ್ಮಾಣದ ನೆಲೆ ತುಂಬ ಮುಖ್ಯವಾಗಿದೆ. ಕನ್ನಡ ವಿಶ್ವವಿದ್ಯಾನಿಲಯವು ಕಳೆದ ಹದಿನಾರು ವರ್ಷಗಳಿಂದ ಈ ಕೆಲಸಗಳನ್ನು ಹಲವು ಯೋಜನೆಗಳ ಮೂಲಕ ರೂಪಿಸಿಕೊಂಡಿದೆ, ರೂಪಿಸಿಕೊಳ್ಳುತ್ತಿದೆ. ಇದೊಂದು ಚಲನಶೀಲ ಪ್ರಕ್ರಿಯೆಯಾಗಿದೆ. ಸಮಕಾಲೀನ ಭಾಷಿಕ, ಸಾಂಸ್ಕೃತಿಕ ಸಮಸ್ಯೆಗಳಿಗೆ ಮುಖಾಮುಖಿಯಾಗುತ್ತ ಕನ್ನಡ ನಾಡುನುಡಿಯನ್ನು ಹೊಸದಾಗಿ ಶೋಧಿಸುತ್ತಾ, ವಿವರಿಸುತ್ತಾ ಬಂದಿದೆ. ಅಂದರೆ : ಕನ್ನಡದ ಅರಿವಿನ ವಿಕೇಂದ್ರೀಕರಣವೇ ವರ್ತಮಾನದ ಹೊಸ ಬೆಳವಣಿಗೆ. ಇದು ಕನ್ನಡ ವಿಶ್ವವಿದ್ಯಾನಿಲಯದ ಜೀವಧಾತುವಾಗಿದೆ.

‘ವಸಾಹತು ಕಾಲಘಟ್ಟದ ಮೈಸೂರು ಸಂಸ್ಥಾನ’ ಎಂಬ ಈ ಗ್ರಂಥವು ಮೈಸೂರು ಸಂಸ್ಥಾನ 1831ರಿಂದ 1881ರವರೆಗೆ ಆಳ್ವಿಕೆ ಮಾಡಿದ ಕಮಿಷನರ್‌ಗಳ ಆಳ್ವಿಕೆಯಲ್ಲಿನ ವಿವಿಧ ಆಯಾಮಗಳನ್ನು ಸಂಕ್ಷಿಪ್ತವಾಗಿ ಪರಿಚಯಿಸುವುದರ ಜೊತೆಗೆ 1881 ರಿಂದ 1947 ರವರೆಗೆ ಮೈಸೂರು ಅರಸರು ಹಾಗೂ ದಿವಾನರುಗಳು ಹೇಗೆ ವಸಾಹತುಶಾಹಿಗಳ ಬಿಗಿಮುಷ್ಟಿಯಲ್ಲಿದ್ದು ಮೈಸೂರು ಸಂಸ್ಥಾನವನ್ನು ಪ್ರಗತಿಯ ಹಾದಿಗೆ ಕೊಂಡೊಯ್ದರು ಎಂಬ ಅಂಶಗಳನ್ನು ಸರಳವಾದ ಮತ್ತು ಸುಲಲಿತವಾದ ಶೈಲಿಯಲ್ಲಿ ನಿರೂಪಿಸಲ್ಪಟ್ಟಿದೆ. ವಸಾಹತುಶಾಹಿಗಳ ಹಾಗೂ ಮೈಸೂರು ಅರಸರು ಮತ್ತು ದಿವಾನರುಗಳ ಖಾಸಗಿ ಜೀವನದಲ್ಲಿನ ಕೆಲವು ಸ್ವಾರಸ್ಯವಾದ ಸಂಗತಿಗಳು ಸಹ ಇಲ್ಲಿ ಪ್ರಸ್ತಾಪಿಸಲ್ಪಟ್ಟಿವೆ. ಇಂದಿನ ಆಧುನಿಕ ಮೈಸೂರು ಕುರಿತು ಅಧ್ಯಯನ ಮಾಡುವ ಸಂಶೋಧಕರಿಗೆ ಈ ಕೃತಿ ಅತ್ಯಂತ ಉಪಯುಕ್ತವಾದ ಪ್ರವೇಶಿಕೆಯಂತಿದೆ. ಬ್ರಿಟಿಷ್ ವಸಾಹತುಶಾಹಿ ಸರಕಾರದವರು ಮೈಸೂರು ಅರಸರಿಗೆ ಸಂಸ್ಥಾನದ ರಾಜ್ಯಾಧಿಕಾರವನ್ನು ವಹಿಸಿಕೊಟ್ಟ ತರುವಾಯ ಒಂಬತ್ತು ಮಂದಿ ದಿವಾನರು ಹಾಗೂ ಮೂರು ಮಂದಿ ಅರಸರು ಸಂಸ್ಥಾನದ ಆಡಳಿತದ ಅತ್ಯುನ್ನತ ಪದವಿಯನ್ನು ಅಲಂಕರಿಸಿದ್ದಾರೆ. ಅವರೆಲ್ಲರನ್ನೂ ಸಮಕಾಲೀನರನ್ನಾಗಿಸುವಲ್ಲಿ ಈ ಕೃತಿ ಯಶಸ್ವಿಯಾಗಿದೆ. ಇಂಥ ಉಪಯುಕ್ತ ಚರಿತ್ರೆಯನ್ನು ತಿಳಿಯಪಡಿಸಿದ ಡಾ. ಎನ್.ಚಿನ್ನಸ್ವಾಮಿ ಸೋಸಲೆ ಅವರು ಅಭಿನಂದನಾರ್ಹರು.

ಈ ಗ್ರಂಥವನ್ನು ಅಚ್ಚುಕಟ್ಟಾಗಿ ಹೊರತಂದಿರುವ ಕನ್ನಡ ವಿಶ್ವವಿದ್ಯಾನಿಲಯದ ಪ್ರಸಾರಾಂಗದ ನಿರ್ದೇಶಕರಾದ ಡಾ. ಎ. ಮೋಹನ ಕುಂಟಾರ್ ಮತ್ತು ಸಹಾಯಕ ನಿರ್ದೇಶಕರಾದ ಶ್ರೀ ಬಿ. ಸುಜ್ಞಾನಮೂರ್ತಿ ಅವರಿಗೆ ಆಭಾರಿಯಾಗಿದ್ದೇನೆ.

Writer - ಡಾ.ಎ.ಮುರಿಗೆಪ್ಪ

contributor

Editor - ಡಾ.ಎ.ಮುರಿಗೆಪ್ಪ

contributor

Similar News