ಮಡಿಕೇರಿ: ಕಲ್ಲಿನ ಕೋರೆಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ

Update: 2018-12-04 14:08 GMT

ಮಡಿಕೇರಿ, ಡಿ.4: ತಾಯಿ ಮತ್ತು ಮಗಳು ನೀರು ತುಂಬಿದ ಕಲ್ಲಿನ ಕೋರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಶಾಲನಗರ ಸಮೀಪದ ಗೊಂದಿಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ. 

ಗೊಂದಿಬಸವನಹಳ್ಳಿ ಗ್ರಾಮದ ನಿವಾಸಿ ಸ್ವಾಮಿ ನಾಯಕ ಎಂಬವರ ಪತ್ನಿ ತಾಯಮ್ಮ (35) ಹಾಗೂ ಮಗಳು ದಿವ್ಯ (10) ಮೃತರು. ಇವರು ಮಂಗಳವಾರ ಬೆಳಗ್ಗೆ ಗ್ರಾಮದ ಜಾರುಗುಪ್ಪೆ ಕೋರೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸ್ವಾಮಿ ನಾಯಕ ಮತ್ತು ಆತನ ಪತ್ನಿ ಕೂಲಿ ಕಾರ್ಮಿಕರಾಗಿದ್ದಾರೆ. ದಿವ್ಯ ಗೊಂದಿಬಸವನಹಳ್ಳಿ ಸರಕಾರಿ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಸಂಘ ಸಂಸ್ಥೆಗಳಿಂದ ಪಡೆದ ಸಾಲದ ಹೊರೆ ಆತ್ಮಹತ್ಯೆಗೆ ಕಾರಣ ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.

ಕೋರೆಯಲ್ಲಿ ಮೃತದೇಹ ತೇಲುತ್ತಿದ್ದ ಬಗ್ಗೆ ಸ್ಥಳೀಯರ ಮಾಹಿತಿ ಮೇರೆಗೆ ಕುಶಾಲನಗರ ಗ್ರಾಮಾಂತರ ಪೊಲೀಸರು ಮತ್ತು ಅಗ್ನಿಶಾಮಕ ತಂಡದ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತದೇಹಗಳನ್ನು ಹೊರ ತೆಗೆದಿದ್ದಾರೆ.

ಪ್ರಕರಣಕ್ಕೆ ಸಂಬಂದಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News