ಬೆಂಗಳೂರು: ಭೀಕರ ರಸ್ತೆ ಅಪಘಾತಕ್ಕೆ ನಾಲ್ವರು ಯುವಕರು ಬಲಿ

Update: 2018-12-05 12:16 GMT

ಬೆಂಗಳೂರು, ಡಿ.5: ಓಮ್ನಿ ಕಾರಿಗೆ ಇನೋವಾ ಕಾರು ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಕನ್ನಮಂಗಲ ಗೇಟ್ ಬಳಿ ನಡೆದಿದೆ ಎಂದು ವರದಿಯಾಗಿದೆ.

ಆರ್‌ಟಿನಗರದ ನಿವಾಸಿಗಳಾದ ಸುಂದರೇಶ(25), ವೆಂಕಟೇಶ(24), ವಿಕಾಸ(25), ಆಶ್ರೀತ್(25) ಎಂಬುವರು ಮೃತಪಟ್ಟವರು ಎಂದು ತಿಳಿದು ಬಂದಿದೆ.

ಫ್ಲವರ್ ಡೆಕೋರೇಷನ್ ಕೆಲಸ ಮಾಡುತ್ತಿದ್ದ ಈ ಯುವಕರು ಸ್ನೇಹಿತನ ಹುಟ್ಟುಹಬ್ಬ ಆಚರಣೆಗೆಂದು ಓಮ್ನಿ ಕಾರಿನಲ್ಲಿ ನಂದಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಕನ್ನಮಂಗಲ ಗೇಟ್ ಬಳಿ ವೇಗವಾಗಿ ಬಂದ ಇನೋವಾ ಕಾರು ಓಮ್ನಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಢಿಕ್ಕಿ ಹೊಡೆದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಓಮ್ನಿ ಕಾರಿನಲ್ಲಿದ್ದ ಹೇಮಂತ್, ಅಜಿತ್, ರವಿ ಹಾಗೂ ಅವಿನಾಶ್, ಮನೋಜ್, ಭರತ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ದೇವನಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News