ರಾಜ್ಯದಲ್ಲಿ ಸ್ಮಶಾನಗಳ ಕೊರತೆ ವಿಚಾರ: ಸಮಗ್ರ ಕಾರ್ಯನೀತಿ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ
ಬೆಂಗಳೂರು, ಡಿ.5: ರಾಜ್ಯದ 6,053 ಗ್ರಾಮಗಳು ಹಾಗೂ 281 ಪಟ್ಟಣಗಳಲ್ಲಿ ಸ್ಮಶಾನಗಳೇ ಇಲ್ಲ ಎಂದು ರಾಜ್ಯ ಸರಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಸ್ಮಶಾನಕ್ಕಾಗಿ ಭೂಮಿ ಗುರುತಿಸಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ವಕೀಲ ಮೊಹಮ್ಮದ್ ಇಕ್ಬಾಲ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್.ಸುಜಾತಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರ ಪ್ರಮಾಣ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದ ಸರಕಾರಿ ವಕೀಲರು, ರಾಜ್ಯದಲ್ಲಿ ಸ್ಮಶಾನಗಳ ಕೊರತೆ ನೀಗಿಸಲು ಸರಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಪ್ರಸ್ತುತ ಬಜೆಟ್ನಲ್ಲಿ ಸ್ಮಶಾನ ನಿರ್ಮಾಣಕ್ಕೆ 10 ಕೋಟಿ ಮೀಸಲಿರಿಸಿದೆ. ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೂ ಸ್ಮಶಾನದ ನಿರ್ಮಾಣಕ್ಕಾಗಿ ಜಾಗ ಖರೀದಿಸಲು ಸೂಚನೆ ನೀಡಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ರಾಜ್ಯದ 29,518 ಗ್ರಾಮಗಳ ಪೈಕಿ 6,053 ಗ್ರಾಮಗಳಲ್ಲಿ ಸ್ಮಶಾನವಿಲ್ಲ ಎಂದು ಹೇಳಿದ್ದೀರಿ, ಆದರೆ ಈ ನಿಟ್ಟಿನಲ್ಲಿ ಏನು ಕ್ರಮ ಕೈಗೊಳ್ಳುತ್ತೀರಿ ಎಂಬುದರ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಬಜೆಟ್ನಲ್ಲಿ 10 ಕೋಟಿ ತೆಗೆದಿರಿಸಿದರೆ ಸಾಕೇ ಎಂದು ಪ್ರಶ್ನಿಸಿತು. ಅಲ್ಲದೆ, ಕೇವಲ ಅಂಕಿ ಅಂಶ ಸಲ್ಲಿಸಿದರೆ ಸಾಲದು ಸ್ಮಶಾನ ನಿರ್ಮಾಣಕ್ಕೆ ಯಾವ ಕ್ರಮ ಕೈಗೊಳ್ಳಲಾಗಿದೆ. ವ್ಯವಸ್ಥಿತ ರೀತಿಯಲ್ಲಿ ಸಮಸ್ಯೆ ಬಗೆಹರಿಸಲು ಏನು ಮಾಡುತ್ತೀರಿ ಎಂಬ ಬಗ್ಗೆ ಸಮಗ್ರ ಕಾರ್ಯನೀತಿ ವರದಿ ಸಲ್ಲಿಸುವಂತೆ ಸರಕಾರಿ ವಕೀಲರಿಗೆ ಸೂಚಿಸಿದ ಪೀಠ, ವಿಚಾರಣೆಯನ್ನು ಜ.16ಕ್ಕೆ ಮುಂದೂಡಿತು.
ಕಳೆದ ಎರಡು ವರ್ಷಗಳಲ್ಲಿ 1,123 ಗ್ರಾಮಗಳಿಗೆ ಸ್ಮಶಾನ ನಿರ್ಮಿಸಲಾಗಿದೆ. ಪ್ರತಿವರ್ಷ ಎಲ್ಲ ಗ್ರಾಮಗಳಿಗೂ ಅವುಗಳ ಜನಸಂಖ್ಯೆ ಆಧರಿಸಿ ಎಲ್ಲ ಧರ್ಮವರಿಗೂ ಅನುಕೂಲವಾಗುವಂತೆ ಸ್ಮಶಾನ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ವಿವರಿಸಲಾಗಿದೆ.
ಅರ್ಜಿದಾರರು ಏನು ಹೇಳುತ್ತಾರೆ: ರಾಜ್ಯದ ಹಲವು ಗ್ರಾಮಗಳಲ್ಲಿ ಸ್ಮಶಾನವೇ ಇಲ್ಲ. ಆ ಗ್ರಾಮಗಳಲ್ಲಿ ಜನರು ಮೃತಪಟ್ಟಾಗ ಅವರ ಅಂತ್ಯಕ್ರಿಯೆ ನಡೆಸುವುದೇ ದೊಡ್ಡ ಸಮಸ್ಯೆಯಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ 2016ರಲ್ಲೇ ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಲಾಗಿತ್ತು. ಆಗ ಸರಕಾರ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು. ಆದರೆ, ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿದಾರರು ದೂರಿದ್ದಾರೆ.