ಕೊಡಗು ಸಂತ್ರಸ್ತರ ಮನೆ ನಿರ್ಮಾಣಕ್ಕೆ ಸಿಎಂ ಕುಮಾರಸ್ವಾಮಿ ಚಾಲನೆ

Update: 2018-12-07 14:26 GMT

#840 ಕುಟುಂಬಗಳಿಗೆ ಆಶ್ರಯ 

#9.85 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ

ಮಡಿಕೇರಿ, ಡಿ.7: ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸುವ ನಿಟ್ಟಿನಲ್ಲಿ ಮನೆ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಶುಕ್ರವಾರ ಶಿಲಾನ್ಯಾಸ ನೆರವೇರಿಸಿದರು.       

ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ಶಿಲಾನ್ಯಾಸ ಹಾಗೂ ಸಂತ್ರಸ್ತರಿಗೆ ಸವಲತ್ತು ವಿತರಣಾ ಸಮಾರಂಭ ಏರ್ಪಡಿಸಲಾಗಿತ್ತು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, 'ಜನರ ನಿರೀಕ್ಷೆಗಳು ಬೆಟ್ಟದಷ್ಟಿವೆ, ಆದರೆ ನಿರೀಕ್ಷೆಗಳನ್ನು ಸಂಪೂರ್ಣವಾಗಿ ತಲುಪಿಸಲು ಸಾಧ್ಯವಾಗದಿದ್ದರೂ ಆತ್ಮಸಾಕ್ಷಿಯಾಗಿ ಸರ್ಕಾರ ವೇಗವಾಗಿ ಸ್ಪಂದಿಸಿದೆ ಎಂದು ನುಡಿದರು.

ರಾಜ್ಯ ಸರಕಾರಿ ನೌಕರರ ಸಂಘದಿಂದ 100 ಕೋಟಿ ರೂ. ಸೇರಿದಂತೆ ಒಟ್ಟು 202.23 ಕೋಟಿ ರೂ. ಮುಖ್ಯಮಂತ್ರಿ ಪರಿಹಾರ ನಿಧಿಯಲ್ಲಿದ್ದು, ಅದನ್ನು ಕೊಡಗು ಸಂತ್ರಸ್ತರಿಗಾಗಿ ಬಳಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.   

ಕೊಡಗು ಜಿಲ್ಲೆಯ ಸಂತ್ರಸ್ತರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಿದ್ದಾರೆ. ಅವರೆಲ್ಲರನ್ನೂ ಸ್ಮರಿಸಿದ ಮುಖ್ಯಮಂತ್ರಿ ಅವರು ಎನ್‍ಡಿಆರ್‍ಎಫ್ ಮತ್ತು ಎಸ್‍ಡಿಆರ್‍ಎಫ್ ನಿಯಮಗಳನ್ನು ಬದಿಗಿಟ್ಟು 1 ಲಕ್ಷ ರೂ.ವರೆಗೂ ಪರಿಹಾರ ನೀಡಲಾಗಿದೆ. ಜೊತೆಗೆ ಮನೆ ಸಾಮಾಗ್ರಿಗಳನ್ನು ಕಳೆದುಕೊಂಡವರಿಗೆ 50 ಸಾವಿರ ರೂ. ಪರಿಹಾರ ನೀಡಲಾಗಿದೆ. ಅದಲ್ಲದೆ ಇಡೀ ದೇಶದಲ್ಲಿಯೇ ಮಾದರಿ ಮನೆ ನಿರ್ಮಾಣ ಮಾಡುವ ನಿಟ್ಟಿನಲ್ಲಿ 10 ಲಕ್ಷ ರೂ. ವೆಚ್ಚದ ಮನೆ ನಿರ್ಮಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಕೇಂದ್ರ ಸರ್ಕಾರ 546 ಕೋಟಿ ರೂ. ಬಿಡುಗಡೆ ಮಾಡಿದ್ದು, ಕೊಡಗು ಸೇರಿದಂತೆ ಪ್ರಕೃತಿ ವಿಕೋಪ ಉಂಟಾದ 8 ಜಿಲ್ಲೆಗಳಿಗೆ ಹಣ ಬಿಡುಗಡೆ ಮಾಡಿದೆ. ಅದರಂತೆ ಕಾರ್ಯ ನಿರ್ವಹಿಸಲಾಗುವುದು ಎಂದರು. ಈಗಾಗಲೇ ಘೋಷಿಸಿದಂತೆ ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರವನ್ನು ಸ್ಥಾಪಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ಆರಂಭದಲ್ಲಿ 100 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಪ್ರಕಟಿಸಲಾಗಿತ್ತು, ಅದರಂತೆ 85 ಕೋಟಿ ರೂ.ವನ್ನು ಬಿಡುಗಡೆ ಮಾಡಿ ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಲಾಗಿದೆ ಎಂದರು.  

ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ 2 ಲಕ್ಷ ರೂ. ಹಾಗೂ ಸಹಕಾರ ಬ್ಯಾಂಕುಗಳಲ್ಲಿ 1 ಲಕ್ಷ ರೂ. ಸಾಲ ಮನ್ನಾ ಮಾಡಲಾಗುವುದು. ರೈತರು ಆತ್ಮಸ್ಥೈರ್ಯದಿಂದ ಬದುಕಬೇಕು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.  

ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ಹಳೇ ಪದ್ಧತಿಯನ್ನು ಮುಂದುವರಿಸುವಂತೆ ಮನವಿ ಮಾಡಿದ್ದಾರೆ. ಅವರ ಬೇಡಿಕೆಯನ್ನು ಗೌರವಿಸುತ್ತೇನೆ. ಈ ಸಂಬಂಧ ಸಮಿತಿಯನ್ನು ರಚನೆ ಮಾಡಿ ಸಚಿವ ಸಂಪುಟದಲ್ಲಿಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.    

ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಮಾತನಾಡಿ, ಸರಕಾರ ಕೊಡಗಿನ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲಿದೆ. ಯಾರೂ ಕೂಡಾ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದರು. ಈಗಾಗಲೇ ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರ ರಚನೆ ಮಾಡಲಾಗಿದ್ದು, ಕೊಡಗು ಅಭಿವೃದ್ದಿಗೆ ಶ್ರಮಿಸಲಾಗುವುದು. ಕೇಂದ್ರ ಸರ್ಕಾರದಿಂದ ಇನ್ನೂ ಹೆಚ್ಚಿನ ಹಣ ಬಿಡುಗಡೆಯಾಗಬೇಕಿದೆ ಎಂದು ಹೇಳಿದರು.  

ವಸತಿ ಸಚಿವ ಯು.ಟಿ.ಖಾದರ್ ಮಾತನಾಡಿ, ಕೊಡಗಿನ ಸಂತ್ರಸ್ತರ ಕಣ್ಣಿರು ಒರೆಸಲು ಸರ್ಕಾರ ಸದಾ ಸಿದ್ಧವಾಗಿದೆ. ಕೊಡಗಿನ ಸಂತ್ರಸ್ತರಿಗೆ ಉತ್ತಮ ಮನೆ ನಿರ್ಮಾಣ ಮಾಡಬೇಕು ಎಂಬ ಉದ್ದೇಶದಿಂದ 9.85 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಲಾಗುತ್ತದೆ. ಒಂದು ತಿಂಗಳಲ್ಲಿ 55 ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಸಚಿವರು ತಿಳಿಸಿದರು. 

ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಮಾತನಾಡಿ, ಕೊಡಗು ಪುನರ್ ನಿರ್ಮಾಣಕ್ಕೆ ಸರ್ಕಾರ ಎಲ್ಲಾ ರೀತಿಯ ಕ್ರಮಕೈಗೊಂಡಿದೆ. ಈಗಾಗಲೇ ಪ್ರಾಧಿಕಾರ ರಚನೆ ಮಾಡಲಾಗಿದ್ದು, ಮನೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದೆ ಎಂದರು.  

ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಮಾತನಾಡಿ, ಕೇಂದ್ರ ಸರ್ಕಾರದಿಂದ 546 ಕೋಟಿ ರೂ. ಬಿಡುಗಡೆಯಾಗಿದ್ದು, ಪ್ರವಾಹ ಮತ್ತು ಭೂಕುಸಿತ ಪ್ರದೇಶಗಳಿಗೆ ನೀಡಲಾಗಿದೆ. ಸುಧಾಮೂರ್ತಿ ಅವರು 25 ಕೋಟಿ ರೂ. ಮನೆ ನಿರ್ಮಾಣಕ್ಕೆ ನೀಡಲಿದ್ದಾರೆ. ಮತ್ತೊಂದು ಸಂಸ್ಥೆ ಮನೆ ನಿರ್ಮಾಣಕ್ಕೆ ಕೈಜೋಡಿಸಿದೆ ಎಂದು ಅವರು ತಿಳಿಸಿದರು. 

100 ಕೋಟಿ ರೂ. ಚೆಕ್ ಹಸ್ತಾಂತರ
ರಾಜ್ಯ ಸರ್ಕಾರಿ ನೌಕರರ ಸಂಘದಿಂದ 100 ಕೋಟಿ ರೂ. ಗಳ ಚೆಕ್‍ನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಂಘದ ಅಧ್ಯಕ್ಷರಾದ ರಾಮು ಅವರು ಹಸ್ತಾಂತರಿಸಿದರು. ಪ್ರಕೃತಿ ವಿಕೋಪ ಸಂಬಂಧ ಜಿಲ್ಲಾಡಳಿತ ಹೊರ ತಂದಿರುವ ಕಿರುಚಿತ್ರ ಪ್ರದರ್ಶಿಸಲಾಯಿತು. ಸಾಂಕೇತಿಕವಾಗಿ ಮನೆ ಆಯ್ಕೆ ಪತ್ರ ನೀಡಲಾಯಿತು. 

ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಅಧ್ಯಕ್ಷತೆ ವಹಿಸಿದ್ದರು. ಶಾಸಕ ಕೆ.ಜಿ.ಬೋಪಯ್ಯ, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್.ಬೋಜೇಗೌಡ, ವಿ.ಅನ್ಬುಕುಮಾರ್, ಮೈಸೂರು ವಲಯದ ಐಜಿಪಿ ಶರತ್‍ಚಂದ್ರ, ಸುಮನ್ ಡಿ.ಪನ್ನೇಕರ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಕೆ.ರಾಮು ಹಾಗೂ ಇತರರು ಹಾಜರಿದ್ದರು. ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಸ್ವಾಗತಿಸಿದರು. ಮಾದಪುರ ಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ನಿರೂಪಿಸಿ, ವಂದಿಸಿದರು.   

ಸರಕಾರ ಸಂತ್ರಸ್ತರಿಗೆ ಏನೆಲ್ಲ ನೀಡಲಿದೆ ?
ಅತಿವೃಷ್ಟಿಯಿಂದ ನಿರಾಶ್ರಿತರಾಗಿರುವ ಜನರಿಗೆ ಹಲವು ಕ್ರಮಗಳನ್ನು ಕೈಗೊಂಡಿದ್ದು, ಆರ್ಥಿಕ ನೆರವನ್ನು ಬಿಡುಗಡೆ ಮಾಡಲಾಗಿದೆ. ಅತಿವೃಷ್ಟಿಯಿಂದ ಮನೆ ಕಳೆದುಕೊಂಡ ನಿರಾಶ್ರಿತರಿಗೆ ತಾತ್ಕಾಲಿಕ ವಸತಿಗಾಗಿ ಮಾಸಿಕ ರೂ.10,000 ಬಾಡಿಗೆ ವೆಚ್ಚವನ್ನು ನೀಡಲಾಗಿರುತ್ತದೆ. ಹೊಸ ಮನೆ ನಿರ್ಮಾಣವಾಗುವವರೆಗೂ ಈ ವೆಚ್ಚವನ್ನು ಸರ್ಕಾರದಿಂದ ನಿರಾಶ್ರಿತರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಸ್ವಂತ ಜಾಗದಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳಲು 15 ಲಕ್ಷಗಳ ಮೊತ್ತವನ್ನು ಸಂಬಂಧಪಟ್ಟ ಮನೆ ಕಳೆದುಕೊಂಡವರಿಗೆ ನೀಡಲಾಗುವುದು ಎಂದು ಅವರು ತಿಳಿಸಿದರು. 

ಕೊಡಗು ಅಭಿವೃದ್ಧಿಗಾಗಿ ಕೊಡಗು ಪುನಶ್ಚೇತನ ಅಭಿವೃದ್ಧಿ ಪ್ರಾಧಿಕಾರದಿಂದ ಕಾರ್ಯಕ್ರಮಗಳನ್ನು ರೂಪಿಸಿದ್ದು, ಎಲ್ಲಾ ರೀತಿಯ ನೆರವನ್ನು ನೀಡಲಾಗುವುದು. ಕೊಡಗು ಮೊದಲಿನಂತಾಗಲು ಸರ್ಕಾರವು ಕಾರ್ಯಕ್ರಮ ಕೈಗೊಂಡಿದೆ. ಕೊಡಗು ಪರಿಹಾರ ನಿಧಿಗೆ ಬಂದಂತಹ ಹಣವನ್ನು ಸಂಪೂರ್ಣವಾಗಿ ಕೊಡಗಿನ ಪುನಶ್ಚೇತನಕ್ಕೆ ಬಳಸಲಾಗುವುದು. ಇದರಲ್ಲಿ ಯಾವುದೇ ಸಂಶಯ ಬೇಡ ಎಂದ ಅವರು, ನಿರಾಶ್ರಿತರಿಗಾಗಿ ರಾಜ್ಯದ ವಿವಿಧೆಡೆಯಿಂದ ಹರಿದು ಬಂದಂತಹ ನೆರವನ್ನು ಸಮರ್ಪಕವಾಗಿ ಬಳಸಲಾಗುತ್ತಿದೆ ಎಂದು ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News