ಧೈರ್ಯದಿಂದಲೇ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತೇವೆ: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್
ಬೆಂಗಳೂರು, ಡಿ. 9: ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ನಮಗೆ ಯಾವುದೇ ಭಯವಿಲ್ಲ, ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಹೀಗಾಗಿ ಉತ್ಸಾಹದಿಂದಲೇ ಅಧಿವೇಶನದಲ್ಲಿ ಭಾಗವಹಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ರವಿವಾರ ಕೆಪಿಸಿಸಿ ಕಚೇರಿಯಲ್ಲಿ ಎನ್ಎಸ್ಯುಐ ವತಿಯಿಂದ ಆಯೋಜಿಸಿದ್ದ ‘ಭವಿಷ್ಯದ ಭಾರತ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಧಿವೇಶನದಲ್ಲಿ ಭಾಗವಹಿಸಲು ನಮಗೆ ಯಾವುದೇ ಹಿಂಜರಿಕೆ ಇಲ್ಲ. ಧೈರ್ಯದಿಂದ ಹೋಗುತ್ತೇವೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನಿಗದಿತ ಕಾರ್ಯಕ್ರಮದಂತೆ ಡಿ.10ಕ್ಕೆ ವಿದೇಶಿ ಪ್ರವಾಸಕ್ಕೆ ತೆರಳುತ್ತಿದ್ದು, ಡಿ.17ರ ನಂತರ ವಿಧಾನ ಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದ ಅವರು, ವಿಪಕ್ಷ ಬಿಜೆಪಿಯನ್ನು ಎದುರಿಸಲು ನಮ್ಮಲ್ಲಿ ಬಹಳಷ್ಟು ಮಂದಿ ಸಮರ್ಥ ನಾಯಕರಿದ್ದಾರೆ ಎಂದು ತಿರುಗೇಟು ನೀಡಿದರು.
ಮೈತ್ರಿ ಸರಕಾರಕ್ಕೆ ಜನಾಶೀರ್ವಾದವಿದೆ. ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ನಾವು ಹೆಚ್ಚುಸ್ಥಾನ ಗೆದ್ದಿದ್ದೇವೆ. ಅದೇ ಹುಮ್ಮಸ್ಸಿನಲ್ಲಿ ಅಧಿವೇಶನದಲ್ಲಿ ಭಾಗವಹಿಸುತ್ತೇವೆ ಎಂದ ಅವರು, ಡಿ.18ರಂದು ಸುವರ್ಣ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ ಎಂದರು.
ವಿಧಾನ ಪರಿಷತ್ ಸಭಾಪತಿ ಸ್ಥಾನದ ವಿಷಯವಾಗಿ ಹಿರಿಯ ನಾಯಕರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಸಭಾಪತಿ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಸಿದವರು ಸಭಾಪತಿಯಾಗಲಿದ್ದಾರೆ ಎಂದು ದಿನೇಶ್ ಗುಂಡೂರಾವ್ ನುಡಿದರು.
ಸಿಎಜಿ ವರದಿ ಉಲ್ಲೇಖಿಸಿ ಬಿಜೆಪಿ ಮುಖಂಡ ಸಿ.ಟಿ.ರವಿ, ಹಿಂದಿನ ಸರಕಾರದ ವಿರುದ್ಧದ ಆರೋಪದಲ್ಲಿ ಯಾವುದೇ ಹುರುಳಿಲ್ಲ. ನಾಲ್ಕು ಬಾರಿ ಶಾಸಕರಾಗಿರುವ ರವಿಯವರಿಗೂ ಸಿಎಜಿ ವರದಿ, ಸಾರ್ವಜನಿಕ ಲೆಕ್ಕಪತ್ರ ಸಮಿತಿ ಬಗ್ಗೆ ಮಾಹಿತಿ ಇಲ್ಲದಿರುವುದು ವಿಷಾದನೀಯ. ಅವರಿಗೆ ಬುದ್ದಿ ಕಡಿಮೆಯಾಗಿರಬೇಕು. ಹೀಗಾಗಿ ಬಾಯಿಗೆ ಬಂದಂತೆ ಆರೋಪ ಮಾಡುತ್ತಿದ್ದಾರೆಂದು ವಾಗ್ದಾಳಿ ನಡೆಸಿದರು.
ಗೆಲುವು ನಮ್ಮದೆ: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಜಯ ಗಳಿಸಲಿದೆ. ಬಿಜೆಪಿ ಅನಗತ್ಯವಾಗಿ ಬಾಯಿ ಬಡಿದುಕೊಳ್ಳುವುದನ್ನು ನಿಲ್ಲಿಸಬೇಕು ಎಂದ ಅವರು, ವಿದ್ಯಾರ್ಥಿಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಎನ್ಎಸ್ಯುಐನಿಂದ ‘ಭವಿಷ್ಯದ ಭಾರತ’ ಯೋಜನೆ ರೂಪಿಸಲಾಗಿದೆ. ವಿದ್ಯಾರ್ಥಿಗಳಿಗೆ ಯಾವ ರೀತಿ ಸರಕಾರ ಬೇಕು. ಯಾವ ಯೋಜನೆಗಳನ್ನು ಅಪೇಕ್ಷಿಸುತ್ತಾರೆಂದು ತಿಳಿದುಕೊಳ್ಳಲು ಉದ್ದೇಶಿಸಲಾಗಿದೆ ಎಂದರು.
1500ಕ್ಕೂ ಹೆಚ್ಚು ಕಾಲೇಜುಗಳಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಾಗುವುದು ಎಂದ ಅವರು, ದೇಶದಲ್ಲಿ ಸರ್ವಾಧಿಕಾರ ಆಡಳಿತವಿದ್ದು, ಇದನ್ನು ಕಿತ್ತೊಗೆಯಬೇಕು. ಆ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಎನ್ಎಸ್ಯುಐ ರಾಜ್ಯಾಧ್ಯಕ್ಷ ಮಂಜುನಾಥ್, ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥ್, ರುಚಿಗುಪ್ತ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಚಳಿಗಾಲದ ಅಧಿವೇಶನದ ಬಳಿಕ ಡಿ.22ರಂದು ಸಂಪುಟ ವಿಸ್ತರಣೆಯಾಗುವುದು ಖಚಿತ. ಕೆಲವು ಶಾಸಕರು ಅಧಿವೇಶನಕ್ಕೆ ಗೈರು ಹಾಜರಾಗುತ್ತಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರ ಗೈರು ಹಾಜರಿಗೂ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ. ಶಾಸಕರು ತಮ್ಮ ಜವಾಬ್ದಾರಿಯನ್ನು ಅರಿತು ಅಧಿವೇಶನದಲ್ಲಿ ಭಾಗವಹಿಸಬೇಕು’
ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ