ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ:ತೋನ್ಸೆ
ಉಡುಪಿ, ಡಿ.11: ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಘಡ್ನಲ್ಲಿ ಸ್ಪಷ್ಟ ಬಹುಮತ ಪಡೆದು ಸರಕಾರ ರಚಿಸುವ ನಿಟ್ಟಿನಲ್ಲಿ ಸಾಗುತ್ತಿದ್ದು, ಈ ಫಲಿತಾಂಶವು ಮುಂಬರುವ 2019ರ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ ಅಭಿಪ್ರಾಯಪಟ್ಟಿದ್ದಾರೆ.
ಚುನಾವಣೆ ನಡೆದ 5 ರಾಜ್ಯಗಳಲ್ಲಿ ಬಿಜೆಪಿ ಸೋಲು ಅನುಭವಿಸಿದ್ದು, ಕೇಂದ್ರದ ನರೇಂದ್ರ ಮೋದಿ ಸರಕಾರದ ಬಗ್ಗೆ ಜನ ಭ್ರಮನಿರಸನ ಗೊಂಡಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಕೇಂದ್ರದ ಸುಳ್ಳು ಆಶ್ವಾಸನೆಗಳು, ಈಡೇರದ ಭರವಸೆಗಳು, ರಫೇಲ್ನಂಹತ ಭ್ರಷ್ಟಾಚಾರದ ಹಗರಣ, ದೈನಂದಿನ ವಸ್ತುಗಳ ಬೆಲೆ ಏರಿಕೆ ಇವುಗಳಿಂದ ದೇಶದ ಜನ ಬಿಜೆಪಿಯ ಬಗ್ಗೆ ವಿಶ್ವಾಸ ಕಳೆದುಕೊಂಡಿರುವುದು ಚುನಾವಣಾ ಫಲಿತಾಂಶ ಸ್ಪಷ್ಟವಾಗಿ ಸಾರಿದೆ. ಇದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರವು ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ತೋನ್ಸೆ ತಿಳಿಸಿದ್ದಾರೆ.