ಶಿವಮೊಗ್ಗ: ಕೊಲೆ ಯತ್ನ ಪ್ರಕರಣದ ಆರೋಪಿಗೆ 12 ವರ್ಷ ಜೈಲು ಶಿಕ್ಷೆ

Update: 2018-12-12 14:33 GMT

ಶಿವಮೊಗ್ಗ, ಡಿ. 12: ಕೊಲೆ ಯತ್ನ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ವ್ಯಕ್ತಿಗೆ 12 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಜಿಲ್ಲೆಯ ಸಾಗರ ಪಟ್ಟಣದ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ. 

ಸೊರಬ ತಾಲೂಕಿನ ಗೆಂಡ್ಲಾ ಗ್ರಾಮದ ನಿವಾಸಿಯಾದ ಪ್ರವೀಣ್ ಶಿಕ್ಷೆಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ನ್ಯಾಯಾಧೀಶರಾದ ಎಂ.ಶೋಭಾರವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎ.ಜಿ.ನಾಯ್ಕ್ ರವರು ವಾದ ಮಂಡಿಸಿದ್ದರು. 

ಪ್ರಕರಣದ ಹಿನ್ನೆಲೆ: 2017 ನೇ ಆಗಸ್ಟ್ 22 ರಂದು ಜಮೀನು ವಿವಾದಕ್ಕೆ ಸಂಬಂಧಿಸಿ ಪ್ರಸ್ತುತ ಶಿಕ್ಷೆಗೊಳಗಾದ ಪ್ರವೀಣನು, ಗೆಂಡ್ಲಾ ಗ್ರಾಮದ ಸಣ್ಣನಾಗಪ್ಪ ಹಾಗೂ ಮಲ್ಲೇಶಪ್ಪರವರ ಮೇಲೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ. ಜಗಳ ಬಿಡಿಸಲು ಬಂದ ಶಿವಾಜಿ ಎಂಬುವರ ಮೇಲೆಯೂ ಹಲ್ಲೆ ಮಾಡಿದ್ದ. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಎಫ್‍ಐಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು. ಪ್ರಕರಣದ ವಿಚಾರಣೆಯಲ್ಲಿ ಪ್ರವೀಣನ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಶಿಕ್ಷೆಯ ಜೊತೆಗೆ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News