ಎಚ್‍ಕೆಡಿಬಿ ಅನುದಾನ ಹೆಚ್ಚಳ: 2 ಸಾವಿರ ಕೋ.ರೂ. ಕ್ರಿಯಾ ಯೋಜನೆ ಸಿದ್ಧಪಡಿಸಲು ಸಿಎಂ ಸಮ್ಮತಿ

Update: 2018-12-13 05:40 GMT

ಬೆಳಗಾವಿ, ಡಿ.12: ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(ಎಚ್‍ಕೆಡಿಬಿ)ಯ ಅನುದಾನವನ್ನು ಪ್ರಸ್ತುತವಿರುವ 1,500 ಕೋಟಿ ರೂ.ನಿಂದ 2 ಸಾವಿರ ಕೋಟಿಗಳಿಗೆ ಹೆಚ್ಚಿಸಬೇಕೆಂದು ಆ ಭಾಗದ ಶಾಸಕರು ಮಾಡಿದ ಮನವಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಕರಾತ್ಮಕವಾಗಿ ಸ್ಪಂದಿಸಿದ್ದು, 2 ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚನೆ ನೀಡಿದರು.

ಬುಧವಾರ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಹೈದ್ರಾಬಾದ್ ಕರ್ನಾಟಕ ಭಾಗದ ಶಾಸಕರೊಂದಿಗೆ ಆ ಭಾಗದ ಸಮಸ್ಯೆಗಳ ಬಗ್ಗೆ ಸಮಾಲೋಚನಾ ಸಭೆ ನಡೆಸಿ ಅವರು ಮಾತನಾಡಿದರು.

ಎಚ್‍ಕೆಡಿಬಿಗೆ ಪ್ರಸ್ತುತ ಬಜೆಟ್‍ನಲ್ಲಿ 1,500 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ. ಆದರೆ ಒಂದು ಸಾವಿರ ರೂ. ಕಾಮಗಾರಿಗಳಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಅನುದಾನವನ್ನು ಮುಂದಿನ ಬಜೆಟ್‍ನಲ್ಲಿ 2 ಸಾವಿರ ಕೋಟಿ ರೂ.ಗೆ ಹೆಚ್ಚಿಸಬೇಕು ಎಂದು ಶಾಸಕರು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, 2 ಸಾವಿರ ಕೋಟಿ ರೂ.ಗೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಸಲ್ಲಿಸಿ. ಪ್ರಸಕ್ತ ಸಾಲಿನಲ್ಲಿ ಇದುವರೆಗೆ ಹೈದರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ 692 ಕೋಟಿ ರೂ. ವೆಚ್ಚ ಮಾಡಲಾಗಿದೆ. ಮುಂದಿನ ಮೂರು ತಿಂಗಳ ಅವಧಿಯಲ್ಲಿ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಿ ಹಣ ಬಳಕೆ ಪ್ರಮಾಣ ಪತ್ರ ಸಲ್ಲಿಸಿದಂತೆ ಉಳಿದ ಅನುದಾನವನ್ನು ಬಿಡುಗಡೆ ಮಾಡಲು ಸಿದ್ಧ ಎಂದು ಹೇಳಿದರು.

ಎಚ್‍ಕೆಡಿಬಿ ಅನುದಾನದಲ್ಲಿ ನಗರ ಪ್ರದೇಶಗಳಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಕೆಲವು ಶಾಸಕರು ದೂರಿದ್ದು, ಇದನ್ನು ಸರಿಪಡಿಸಲಾಗುವುದು. ನಂಜುಂಡಪ್ಪ ವರದಿ ಅನುಷ್ಠಾನದ ಬಳಿಕ ಆ ಭಾಗದಲ್ಲಿ ಉಂಟಾಗಿರುವ ಅಭಿವೃದ್ಧಿಗಳನ್ನು ಪರಿಶೀಲಿಸಿ, ಇನ್ನೂ ಅಭಿವೃದ್ಧಿ ಹೊಂದಬೇಕಾದ ಪ್ರದೇಶಗಳಿಗೆ ಹೆಚ್ಚಿನ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಎಚ್‍ಕೆಡಿಬಿ ಕಾರ್ಯದರ್ಶಿ ಆ ಭಾಗದಲ್ಲಿ ಹಲವಾರು ಹುದ್ದೆಗಳು ಖಾಲಿಯಿರುವುದಾಗಿ ಪ್ರಸ್ತಾಪಿಸಿದ್ದು, ಅಗತ್ಯ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಮುಂದಿನ ವರ್ಷದ ಬಜೆಟ್‍ನಲ್ಲಿ ಈ ಭಾಗದಲ್ಲಿ ಶಾಲೆ, ಪಿಯು ಹಾಗೂ ಪದವಿ ಕಾಲೇಜುಗಳ ಸ್ಥಾಪನೆಗೆ ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ಲೋಕೋಪಯೋಗಿ ಇಲಾಖೆ ವತಿಯಿಂದ 2013ರಿಂದ 2018ರ ಮಾರ್ಚ್‍ವರೆಗೆ ರಸ್ತೆ ಕಾಮಗಾರಿಗಳಿಗೆ ಉತ್ತರ ಮತ್ತು ಈಶಾನ್ಯ ವಲಯಗಳಿಗೆ ಒಟ್ಟು 14,369 ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ನವೆಂಬರ್ ಅಂತ್ಯದವರೆಗೆ 3,039 ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಬಜೆಟ್‍ನಲ್ಲಿ 1,375 ಕೋಟಿ ರೂ. ಒದಗಿಸಲಾಗಿದ್ದರೂ, ಈಗಾಗಲೇ 3,173 ಕೋಟಿ ರೂ.ಗಳಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಎಚ್‍ಕೆಡಿಬಿ ಅಧ್ಯಕ್ಷ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ್, ಸಚಿವರಾದ ಪ್ರಿಯಾಂಕ್ ಖರ್ಗೆ, ಎಚ್.ಡಿ.ರೇವಣ್ಣ, ಡಿ.ಕೆ.ಶಿವಕುಮಾರ್, ಬಂಡೆಪ್ಪ ಖಾಶೆಂಪುರ, ಆರ್.ಶಂಕರ್, ವೆಂಕಟರಾವ್ ನಾಡಗೌಡ, ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್, ಹೈದರಾಬಾದ್ ಕರ್ನಾಟಕ ಭಾಗದ ಎಲ್ಲಾ ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News