ಪೊಲೀಸ್ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಆರೋಪಿಗಾಗಿ ಶೋಧ

Update: 2018-12-15 15:05 GMT

ಬೆಂಗಳೂರು, ಡಿ.15: ನಾಗರಿಕ ಪೊಲೀಸ್ ಪೇದೆ ನೇಮಕಾತಿ ಲಿಖಿತ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಮತ್ತೋರ್ವ ಆರೋಪಿ ಬಸವರಾಜು ಎಂಬಾತನನ್ನು ಸಿಸಿಬಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಎಂಬಾತನನ್ನು ಈಗಾಗಲೇ ಬಂಧಿಸಲಾಗಿದೆ. ಆದರೆ, ಈತನ ಸಹಚರ ಎನ್ನಲಾದ ಬಸವರಾಜು ಆಂಧ್ರ ರಾಜ್ಯದಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಆಂಧ್ರಪ್ರದೇಶದಲ್ಲಿ ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಸವರಾಜು ಎಂಬಾತನ ಕೈವಾಡ ಇದೆ ಎಂಬುವುದನ್ನು ಬಂಧಿತ ಆರೋಪಿ ಶಿವಕುಮಾರ್ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಹೀಗಾಗಿ, ಬಸವರಾಜು ಬಂಧನಕ್ಕಾಗಿ ತನಿಖಾಧಿಕಾರಿಗಳು ಶೋಧ ನಡೆಸುತ್ತಿದ್ದು, ಈತ ಸೆರೆ ಸಿಕ್ಕರೆ ಇನ್ನಷ್ಟು ಆರೋಪಿಗಳ ಪತ್ತೆಯಾಗಲಿದೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News