ಕೊಡಗು ಸಂತ್ರಸ್ತರ ನೋವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಶ್ರೀವಿದ್ಯಾ: ಮಳೆಹಾನಿ ಗ್ರಾಮಗಳಿಗೆ ಭೇಟಿ

Update: 2018-12-15 17:14 GMT

ಮಡಿಕೇರಿ, ಡಿ.15 : ಮಳೆಹಾನಿ ಸಂತ್ರಸ್ತ ಪ್ರದೇಶಗಳಲ್ಲಿ ಸಮರ್ಪಕ ರೀತಿಯಲ್ಲಿ ಪರಿಹಾರ ಕಾರ್ಯಗಳು ನಡೆಯುತ್ತಿಲ್ಲ ಮತ್ತು ಸಂಕಷ್ಟದಲ್ಲಿರುವ ಸಂತ್ರಸ್ತರ ಗೋಳು ಕೇಳುವವರಿಲ್ಲ ಎನ್ನುವ ಆರೋಪ ಕೇಳಿ ಬಂದ ಬೆನ್ನಲ್ಲೇ ನೊಂದ ಗ್ರಾಮಸ್ಥರ ಮನವಿಗೆ ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರು ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಅಸಹಾಯಕ ಸ್ಥಿತಿಯಲ್ಲಿರುವವರಿಗೆ ಅಭಯ ನೀಡಿದರು.

ಪರಿಹಾರದ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿರುವ ನೈಜ ಸಂತ್ರಸ್ತರ ಹೆಸರುಗಳನ್ನು ಮತ್ತೆ ಸೇರ್ಪಡೆಗೊಳಿಸುವ ಕುರಿತು ಉಪವಿಭಾಗಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸರ್ವೆ ಕಾರ್ಯ ನಡೆಸಿ ಅಗತ್ಯ ದಾಖಲೆಗಳನ್ನು ಸಂಗ್ರಹಿಸಲಾಗುವುದು. ಸರ್ವೆ ಕಾರ್ಯ ಡಿ.16 ರಿಂದಲೇ ಆರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪ್ರಕೃತಿ ವಿಕೋಪದಿಂದ ನಲುಗಿದ ಆವಂಡಿ, ಹೆಬ್ಬೆಟ್ಟಗೇರಿ, ಮುಕ್ಕೋಡ್ಲು, ಹೊದಕಾನ, ಮಕ್ಕಂದೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು. 

ಆಗಸ್ಟ್ ನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಕೊಡಗಿನ ಜನತೆ ತತ್ತರಿಸಿ ಹೋಗಿದ್ದು, ಗ್ರಾಮಿಣ ಭಾಗದ ರಸ್ತೆಗಳು ಸೇರಿದಂತೆ ಅನೇಕ ಮನೆಗಳು ನಾಶವಾಗಿವೆ. ಆದರೆ ಪರಿಹಾರ ಕಾರ್ಯದಲ್ಲಿ ಆರಂಭದ ಉತ್ಸಾಹ ಕಾಣುತ್ತಿಲ್ಲವೆಂದು ಮಕ್ಕಂದೂರು ಗ್ರಾ.ಪಂ ವ್ಯಾಪ್ತಿಯ ಗ್ರಾಮಸ್ಥರು ಶುಕ್ರವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಬೇಸರ ವ್ಯಕ್ತಪಡಿಸಿದ್ದರು. ಈ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಇಂದು ಮಳೆಹಾನಿ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರ ನೋವಿಗೆ ಭರವಸೆಯ ಪರಿಹಾರ ನೀಡಿದರು. ರಸ್ತೆ ವಿಸ್ತರಣೆ, ವಿದ್ಯುತ್ ವ್ಯವಸ್ಥೆ, ಸರ್ಕಾರಿ ಬಸ್ ಸಂಪರ್ಕ, ದೂರವಾಣಿ ನೆಟ್‍ವರ್ಕ್, ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಸರ್ಕಾರ ಈಗಾಗಲೇ ಘೋಷಿಸಿರುವ ವಸತಿಯನ್ನು ಕೂಡ ಸಕಾಲದಲ್ಲಿ ಒದಗಿಸಲಾಗುವುದೆಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು. ಪರಿಹಾರ ಕಾರ್ಯಗಳು ಮತ್ತು ಈಗ ಇರುವ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯಲಾಗಿದ್ದು, ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದರು.

ಸಂತ್ರಸ್ತರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ, ಜಿಲ್ಲಾಡಳಿತ ಈಗಾಗಲೇ ಅಗತ್ಯ ಪರಿಹಾರ ಕಾರ್ಯಗಳನ್ನು ಕೈಗೊಂಡಿದ್ದು, ಗ್ರಾಮಸ್ಥರು ಸಹಕರಿಸಬೇಕೆಂದು ಮನವಿ ಮಾಡಿದರು.

ಹಿರಿಯರಾದ ಟಿ.ಎಂ.ಅಯ್ಯಪ್ಪ ಮಾತನಾಡಿ, ಜಿಲ್ಲಾಧಿಕಾರಿಗಳು ಗ್ರಾಮಸ್ಥರ ಮನವಿಗೆ ಸ್ಪಂದಿಸಿ ತಕ್ಷಣ ಗ್ರಾಮಗಳಿಗೆ ಭೇಟಿ ನೀಡಿ ನಮ್ಮ ಸಮಸ್ಯೆಗಳನ್ನು ಆಲಿಸಿದ್ದಾರೆ. ಇದು ನಮಗೆ ತೃಪ್ತಿ ತಂದಿದ್ದು, ನೊಂದವರ ಎಲ್ಲಾ ಕಷ್ಟಗಳನ್ನು ಹೇಳಿಕೊಂಡಿದ್ದೇವೆ. ನೈಜ ಸಂತ್ರಸ್ತರಿಗೆ ಸೂಕ್ತ ಪರಿಹಾರ ಸಿಗಲಿದೆ ಎನ್ನುವ ಬಗ್ಗೆ ವಿಶ್ವಾಸ ನಮಗಿದೆ ಎಂದರು. 

ರಸ್ತೆ, ಬಸ್ ಸಂಪರ್ಕ, ವಿದ್ಯುತ್ ಮತ್ತು ದೂರವಾಣಿ ನೆಟ್‍ವರ್ಕ್ ಕೊರತೆಯ ಬಗ್ಗೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಗಮನ ಸೆಳೆದರು. ಕಡಿದಾದ ಗ್ರಾಮಗಳ ಭೇಟಿ ಸಂದರ್ಭ ತಹಶೀಲ್ದಾರ್ ಕುಸುಮ, ಕೆಎಸ್‍ಆರ್‍ಟಿಸಿ ಡಿಪೋ ವ್ಯವಸ್ಥಾಪಕರು ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News