ಅಮೈ ಮಹಾಲಿಂಗ ನಾಯ್ಕಗೆ ಮಂಗಳೂರು ಪ್ರೆಸ್‌ಕ್ಲಬ್‌ನ ವರ್ಷದ ಪ್ರಶಸ್ತಿ

Update: 2018-12-16 13:47 GMT

ಮಂಗಳೂರು, ಡಿ.16: ಏಕಾಂಗಿಯಾಗಿ ಅಪೂರ್ವ ಮತ್ತು ಅಪಾಯಕಾರಿಯಾದ ಕೆಲಸದ ಮೂಲಕ ಜೀವಜಲಕ್ಕಾಗಿ ಬೋಳುಗುಡ್ಡೆಯನ್ನು ನಂದನವನ ಮಾಡಿದ ಪ್ರಯತ್ನಶೀಲ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಮಂಗಳೂರು ಪ್ರೆಸ್‌ಕ್ಲಬ್‌ನ 2018ನೆ ಸಾಲಿನ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ನಿವಾಸಿಯಾಗಿರುವ 73ರ ಹರೆಯದ ಮಹಾಲಿಂಗ ನಾಯ್ಕ ಅವರನ್ನು ಪ್ರೊ. ಬಾಲಕೃಷ್ಣ ಗಟ್ಟಿ, ಡಾ.ವಸಂತ ಕುಮಾರ್ ಪೆರ್ಲ ಮತ್ತು ಡಾ.ನಾಗವೇಣಿ ಮಂಚಿ ನೇತೃತ್ವದ ಆಯ್ಕೆ ಸಮಿತಿಯು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಜನವರಿ 5ರಂದು ಪ್ರಶಸ್ತಿ ಪ್ರದಾನ

ಉರ್ವ ಚರ್ಚ್ ಸಭಾಂಗಣದಲ್ಲಿ ಜ.5ರಂದು ನಡೆಯಲಿರುವ ಪ್ರೆಸ್‌ಕ್ಲಬ್ ದಿನಾಚರಣೆಯಂದು ಅಮೈ ಮಹಾಲಿಂಗ ನಾಯ್ಕ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಂಗಳೂರು ಪ್ರೆಸ್‌ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಹಾಲಿಂಗ ನಾಯ್ಕರ ಬದುಕಿನ ಯಶೋಗಾಥೆ

ಅಡಿಕೆ, ತೆಂಗಿನ ಮರ ಏರುವುದರಲ್ಲಿ ಪರಿಣತಿ ಹೊಂದಿದ್ದ ಕೃಷಿಕೂಲಿ ಕಾರ್ಮಿಕ ಮಹಾಲಿಂಗ ನಾಯ್ಕ 40 ವರ್ಷಗಳ ಹಿಂದೆ ಊರಿನ ಕೃಷಿಕರ ತೋಟಗಳಲ್ಲಿ ದುಡಿಯುವಾಗ ಸ್ವಂತ ತೋಟ ಮಾಡುವ ಸ್ವಾವಲಂಬಿ ಜೀವನದ ಕನಸು ಕಂಡಿದ್ದರು. ಆದರೆ ಅದಕ್ಕೆ ಅವರಲ್ಲಿ ಜಮೀನು ಇರಲಿಲ್ಲ. ಭೂ ಮಾಲಕ ಅಮೈ ಮಹಾಬಲ ಭಟ್ಟರ ತೋಟಕ್ಕೆ ದಿನಾಲು ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಈ ಆದಾಯದಲ್ಲಿ ಅವರ ಸಂಸಾರದ ರಥ ಸಾಗುತ್ತಿತ್ತು. 1978ರಲ್ಲಿ ಮಹಾಬಲ ಭಟ್ಟರ ಸಹಕಾರದಿಂದ 2 ಎಕರೆ ಗುಡ್ಡ ದರ್ಖಾಸ್ತು ರೂಪದಲ್ಲಿ ಮಹಾಲಿಂಗ ನಾಯ್ಕರಿಗೆ ಪ್ರಾಪ್ತವಾಯಿತು.

ಮನೆ ಕಟ್ಟಲು ಅಸಾಧ್ಯವಾದ, ನೀರಿಲ್ಲದ ಇಳಿಜಾರು ಬೋಳುಗುಡ್ಡದಲ್ಲಿ ಕೃಷಿ ತೋಟ ಮಾಡುವುದು ಮಹಾಲಿಂಗ ನಾಯ್ಕರಿಗೆ ಸವಾಲಾಗಿ ಕಂಡು ಬಂದರೂ ಅವರು ತನ್ನ ಪ್ರಯತ್ನವನ್ನು ಬಿಡಲಿಲ್ಲ. ಅಲ್ಲೇ ಭವಿಷ್ಯ ರೂಪಿಸುವ ಉದ್ದೇಶದಿಂದ ಸ್ವಲ್ಪ ಜಾಗವನ್ನು ಸಮತಟ್ಟು ಮಾಡಿ ಸಣ್ಣದೊಂದು ಗುಡಿಸಲು ಕಟ್ಟಿದರು. ಕುಡಿಯುವ ನೀರಿಗಾಗಿ ಪಕ್ಕದ ಮನೆಯವರನ್ನು ಆಶ್ರಯಿಸಿದ್ದ ಮಹಾಲಿಂಗ ನಾಯ್ಕರಿಗೆ ಬಾವಿ ತೋಡಿಸಲು ಕೈಯಲ್ಲಿ ದುಡ್ಡಿರಲಿಲ್ಲ. ಬಾವಿ ತೋಡಿದರೆ ನೀರು ದೊರೆಯುವ ಸಾಧ್ಯತೆಯೂ ಇರಲಿಲ್ಲ. ಏಕಾಂಗಿಯಾಗಿ ಬಾವಿ ತೋಡುವುದು ಅಸಾಧ್ಯ ಮಾತು. ಆಗ ಅವರಿಗೆ ಹೊಳೆದುದು ಸುರಂಗ ಕೊರೆತ. ಅರ್ಧ ದಿನ ಕೂಲಿ ಕೆಲಸ, ಉಳಿದಾರ್ಧ ದಿನ ಮತ್ತು ರಾತ್ರಿ ಹೊತ್ತು ಸುರಂಗ ಕೊರೆಯುವ ಮೂಲಕ ಜೀವಜಲ ಹುಡುಕುವ ಪ್ರಯತ್ನ ಮಾಡಿದರು.

ಮಹಾಲಿಂಗ ನಾಯ್ಕ ಮೊದಲು 30 ಮೀ. ಉದ್ದದ ಸುರಂಗ ಕೊರೆದರೂ ನೀರು ಸಿಗಲಿಲ್ಲ. ನಿರಾಸೆಯಾಗದ ಅವರು ಮತ್ತೆ ಪ್ರಯತ್ನ ಮುಂದುವರಿಸಿ ಸೀಮೆಎಣ್ಣೆ , ತೆಂಗಿನೆಣ್ಣೆ ದೀಪದ ಬೆಳಕಿನಲ್ಲಿ ಪ್ರತಿ ವರ್ಷ ತಲಾ ಒಂದರಂತೆ 25-30 ಮೀ. ಉದ್ದದ ಸತತ ಐದು ಸುರಂಗಗಳನ್ನು ಕೊರೆದರು. ಆದರೂ ಅವರ ಅಪಾಯಕಾರಿ ಪ್ರಯತ್ನಕ್ಕೆ ಫಲ ದೊರೆಯಲಿಲ್ಲ. ಅವರ ಪ್ರಯತ್ನವನ್ನು ನೋಡಿ ಹಲವರು ಗೇಲಿ ಮಾಡಿದ್ದರು ಎಂದು ಮಹಾಲಿಂಗ ನಾಯ್ಕ ಅಂದಿನ ದಿನಗಳನ್ನು ನೆನಪಿಸಿಕೊಳ್ಳುತ್ತಾರೆ.

ಯಾರು ಏನು ಹೇಳಿದರೂ ತನ್ನ ಭಗೀರಥ ಪ್ರಯತ್ನವನ್ನು ನಿಲ್ಲಿಸದೆ ಮುಂದುವರಿಸಿದ ಮಹಾಲಿಂಗ ನಾಯ್ಕರಿಗೆ ಆರನೇ ಪ್ರಯತ್ನ ಫಲ ನೀಡಿತು. ಈ ಪ್ರಯತ್ನದಲ್ಲಿ ನೀರು ಕಾಣಿಸಿತು. 25 ಮೀ. ಉದ್ದದ ಸುರಂಗದಲ್ಲಿ ಸಿಕ್ಕಿದ ನೀರಿನಲ್ಲಿ ಕೃಷಿ ಸಾಧ್ಯವಿಲ್ಲ ಎನ್ನುವುದು ಅವರಿಗೆ ಅರಿವಾಯಿತು. ಆರನೇ ಸುರಂಗದ ಪಕ್ಕದಲ್ಲಿ ಇನ್ನೊಂದು ಸುರಂಗ ಕೊರೆದರು. 25 ಮೀ. ತಲುಪುವಾಗ ನೀರು ಕಾಣಿಸಿಕೊಂಡಿತು. ಮತ್ತೆ ಮುಂದುವರಿಸಿ 75 ಮೀ. ಉದ್ದದ ಸುರಂಗವಾಗುವ ಹೊತ್ತಿಗೆ ಯಥೇಚ್ಛ ನೀರು ಸಿಕ್ಕಿತು. ಆಗ ಅವರ ತೋಟದ ಕನಸು ಮತ್ತೆ ಗರಿಗೆದರಿತು. ಸುರಂಗದ ನೀರನ್ನು ಸಂಗ್ರಹಿಸಲು ಮಣ್ಣಿನ ಟ್ಯಾಂಕ್ ನಿರ್ಮಿಸಿದರು. ನೀರಿನ ಸಂಪನ್ನತೆಯಿಂದಾಗಿ ತೋಟ ಮಾಡುವ ಕನಸು ನನಸಾಯಿತು. ಗುಡ್ಡವನ್ನು ಸಮತಟ್ಟು ಮಾಡಿ ಭತ್ತ, ಅಡಿಕೆ, ತೆಂಗು, ಬಾಳೆ ಕೃಷಿ ಕೈಗೊಂಡರು. ಮಡದಿ ಲಲಿತ ಮೂವರು ಮಕ್ಕಳು ಪ್ರಯತ್ನಕ್ಕೆ ಕೈ ಜೋಡಿಸಿದರು.

ಬದುಕಿನಲ್ಲಿ ಎದುರಾದ ದುರಂತ

ಕೃಷಿಯಿಂದ ಆದಾಯ ಬರುತ್ತಿದ್ದರೂ ಅವರು ಹಿಂದಿನ ದುಡಿಮೆಯ ಕಾಯಕವನ್ನು ನಿಲ್ಲಿಸಿರಲಿಲ್ಲ. ಹದಿನಾಲ್ಕು ವರ್ಷಗಳ ಹಿಂದೆ ನೆಗಳಗುಳಿ ಎಂಬಲ್ಲಿ ಕೃಷಿಕರೊಬ್ಬರ ತೋಟದಲ್ಲಿ ತೆಂಗಿನ ಮರ ಹತ್ತುತ್ತಿದ್ದಾಗ ಮಹಾಲಿಂಗ ನಾಯ್ಕ ಆಕಸ್ಮಿಕವಾಗಿ ಜಾರಿ ಬಿದ್ದು ಗಾಯಗೊಂಡರು. ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆ ಸೇರಿದ ಮಹಾಲಿಂಗ ನಾಯ್ಕ ಮೂರು ತಿಂಗಳು ಆಸ್ಪತ್ರೆಯಲ್ಲಿದ್ದರು. ಬಳಿಕ ಮನೆಗೆ ಮರಳಿದ್ದರೂ ಚೇತರಿಸಿಕೊಳ್ಳುವ ಹೊತ್ತಿಗೆ ಒಂದು ವರ್ಷ ಕಳೆದಿತ್ತು. ದುಡಿದು ಉಳಿಸಿದ ಹಣ ಕರಗಿ ಹೋಯಿತು. ಈ ಘಟನೆಯ ಬಳಿಕ ಅಡಿಕೆ, ತೆಂಗಿನಮರ ಹತ್ತುವ ಕಾಯಕದಿಂದ ನಿವೃತ್ತರಾದರು. ಆದರೆ ಕೃಷಿಯನ್ನು ಮುಂದುವರಿಸಿದರು.

ಒಂದು ಎಕರೆಯಲ್ಲಿ ಕೃಷಿ

ಮಹಾಲಿಂಗ ನಾಯ್ಕ ಒಂದು ಎಕರೆಯಲ್ಲಿ ಅಡಿಕೆ, ತೆಂಗು, ಬಾಳೆ, ಕಾಳುಮೆಣಸಿನ ಕೃಷಿ ಕೈಗೊಂಡಿದ್ದಾರೆ. ಇನ್ನೊಂದು ಎಕರೆಯಲ್ಲಿ ಕಾಡು ಬೆಳೆಸಿದ್ದಾರೆ. ಗೇರು ಕೃಷಿಯೂ ಇದೆ. ಮಣ್ಣಿನ ಟ್ಯಾಂಕಿಯಿಂದ ವಿದ್ಯುತ್‌ನ ಖರ್ಚಿಲ್ಲದೆ ಗ್ರಾವಿಟಿ ಮೂಲಕ ಅಡಿಕೆ, ತೆಂಗು ಮತ್ತು ಬಾಳೆಗಿಡಗಳಿಗೆ ನೀರು ಉಣಿಸುತ್ತಾರೆ. ಅವರ ತೋಟದಲ್ಲಿ 300 ಅಡಿಕೆ, 75 ತೆಂಗು, 200 ಬಾಳೆಗಿಡಗಳಿವೆ. ಹಟ್ಟಿಗೊಬ್ಬರ, ಕಾಂಪೋಸ್ಟ್ ಹೊರತು ಬೇರೆ ಯಾವುದೇ ಗೊಬ್ಬರದ ಬಗ್ಗೆ ಮಾಹಾಲಿಂಗ ನಾಯ್ಕರಿಗೆ ಗೊತ್ತಿಲ್ಲ. ಜಮೀನಿನಲ್ಲಿ ಇಂಗುಗುಂಡಿಗಳ ಮೂಲಕ ಜಲಕೊಯ್ಲು ಮಾಡುತ್ತಾರೆ. ನಾಲ್ಕು ವರ್ಷಗಳ ಹಿಂದೆ 2 ಬೋರ್‌ವೆಲ್ ತೆಗೆಸಿದ್ದಾರೆ. ಮೊದಲ ಬೋರ್‌ವೆಲ್ 400 ಅಡಿ ಸಾಗಿದ್ದರೂ ನೀರು ದೊರೆಯಲಿಲ್ಲ. 2ನೇ ಬೋರ್‌ನಲ್ಲಿ 370 ಅಡಿ ತಲುಪುವ ಹೊತ್ತಿಗೆ 1 ಇಂಚು ನೀರು ಸಿಕ್ಕಿದೆ. ಇದೀಗ ಬೋರ್‌ವೆಲ್‌ಗೆ ಪಂಪ್‌ಸೆಟ್ ಇದೀಗ ಅಳವಡಿಸಿದ್ದಾರೆ.

ಸಾಲಕ್ಕಾಗಿ ಯಾವುದೇ ಬ್ಯಾಂಕ್ ಮೊರೆ ಹೋಗಿಲ್ಲ. ಕೃಷಿಯಲ್ಲಿ ದೊರೆತ ಆದಾಯದಿಂದ ಸ್ವಂತ ಮನೆ ಕಟ್ಟಿದ್ದಾರೆ. ಮನೆಗೆ ವಿದ್ಯುತ್ ಸೇರಿದಂತೆ ಮೂಲ ಸೌಕರ್ಯಗಳು ಬಂದಿವೆ. ಶಾಲಾ ಕಾಲೇಜುಗಳ ಮೆಟ್ಟಿಲು ಹತ್ತದ ಛಲಗಾರ ಮಹಾಲಿಂಗ ನಾಯ್ಕರಿಗೆ ದುಡಿಮೆ ಎಲ್ಲವನ್ನು ನೀಡಿದೆ. ಮಹಾಲಿಂಗ ನಾಯ್ಕರ ಏಕಾಂಗಿ ಸಾಧನೆಯನ್ನು ದೂರದರ್ಶನ ತನ್ನ ವಾಟರ್ ವಾರಿಯರ್ ಧಾರಾವಾಹಿಯಲ್ಲಿ ಬಿತ್ತರಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News